ಬೆಂಗಳೂರು: ರಾಮನಗರ ಜಿಲ್ಲೆಯ ಬಿಡದಿಯ ಟೊಯೊಟಾ ಕಿರ್ಲೋಸ್ಕರ್ ವಾಹನ ತಯಾರಿಕಾ ಕಂಪನಿಯ ಘಟಕದಲ್ಲಿ ಕಾರ್ಮಿಕರ ಮುಷ್ಕರದಿಂದ ಉಂಟಾಗಿರುವ ಬಿಕ್ಕಟ್ಟು ಪರಿಹರಿಸಲು ರಾಜ್ಯ ಸರ್ಕಾರ ತಕ್ಷಣ ಮಧ್ಯಪ್ರವೇಶ ಮಾಡಬೇಕು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.
ಈ ಕುರಿತು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಭಾನುವಾರ ಪತ್ರ ಬರೆದಿರುವ ಸಿದ್ದರಾಮಯ್ಯ, ‘ಕಂಪನಿಯು ಕಿರುಕುಳ ನೀಡುತ್ತಿದೆ ಎಂದು ಆರೋಪಿಸಿರುವ ಟೊಯೊಟಾ ಕಾರ್ಮಿಕರು ಹಲವು ದಿನಗಳಿಂದ ಮುಷ್ಕರ ನಡೆಸುತ್ತಿದ್ದಾರೆ. ಕೋಲಾರದ ವಿಸ್ಟ್ರಾನ್ ಕಂಪನಿಯಲ್ಲಿ ನೌಕರರು ರೊಚ್ಚಿಗೆದ್ದು, ಘಟಕವನ್ನೇ ಪುಡಿ ಮಾಡಿದ್ದಾರೆ. ರಾಮನಗರದ ಅರವಿಂದ್ ಫ್ಯಾಷನ್ಸ್ ಘಟಕದಲ್ಲೂ ಕಾರ್ಮಿಕರು 20 ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಬಿಕ್ಕಟ್ಟು ಪರಿಹರಿಸಲು ರಾಜ್ಯ ಸರ್ಕಾರ ಈವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ’ ಎಂದು ದೂರಿದ್ದಾರೆ.
ಕಾರ್ಮಿಕರು ಶಾಂತಿಯುತವಾಗಿ ಹೋರಾಟ ನಡೆಸುತ್ತಿರುವ ಸ್ಥಳಕ್ಕೆ ಸರ್ಕಾರದ ಯಾವುದೇ ಪ್ರತಿನಿಧಿ ಭೇಟಿ ನೀಡಿ, ಸಮಸ್ಯೆ ಪರಿಹರಿಸಲು ಯತ್ನಿಸಿಲ್ಲ. ಆದರೆ, ಅದೇ ಕಾರ್ಮಿಕರು ಸಿಟ್ಟಿಗೆದ್ದು ತೀವ್ರ ಸ್ವರೂಪದ ಹೋರಾಟಕ್ಕೆ ಇಳಿದಾಗ ಅವರನ್ನು ಕಳ್ಳರು, ದರೋಡೆಕೋರರು, ದಾಂದಲೆಕೋರರು ಎಂದು ಬಿಂಬಿಸಲು ಯತ್ನಿಸುತ್ತಿರುವುದು ಸರಿಯಲ್ಲ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜಾರಿಗೆ ತಂದಿರುವ ಕಾರ್ಮಿಕ ವಿರೋಧಿ ಕಾನೂನುಗಳೇ ಈಗಿನ ಬಿಕ್ಕಟ್ಟಿಗೆ ಕಾರಣ. ಈ ಸಂದರ್ಭದಲ್ಲಿ ಸರ್ಕಾರ ನಿಷ್ಕ್ರಿಯವಾಗಿ ಕೈಕಟ್ಟಿ ಕುಳಿತುಕೊಳ್ಳಬಾರದು. ತಕ್ಷಣವೇ ಆಡಳಿತ ಮಂಡಳಿಗಳು ಮತ್ತು ನೌಕರರ ನಡುವೆ ಮಾತುಕತೆ ನಡೆಸಿ ಸಮಸ್ಯೆಗೆ ಪರಿಹಾರ ಒದಗಿಬೇಕು ಎಂದು ಒತ್ತಾಯಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.