ADVERTISEMENT

ಸಿದ್ದರಾಮಯ್ಯ ಬಸವತತ್ವದ ಅಪ್ಪಟ ಅನುಯಾಯಿ, ಯಾರನ್ನೂ ಕಡೆಗಣಿಸಿಲ್ಲ: ಸಚಿವ ಖಂಡ್ರೆ

​ಪ್ರಜಾವಾಣಿ ವಾರ್ತೆ
Published 7 ಅಕ್ಟೋಬರ್ 2023, 10:50 IST
Last Updated 7 ಅಕ್ಟೋಬರ್ 2023, 10:50 IST
   

ಮೈಸೂರು: ಸಿದ್ದರಾಮಯ್ಯ ಬಸವತತ್ವದ ಅಪ್ಪಟ ಅನುಯಾಯಿ. ಸರ್ವರನ್ನೂ ಜೊತೆಯಾಗಿ ಕೊಂಡೊಯ್ಯುತ್ತಿದ್ದಾರೆ ಎಂದು ಅರಣ್ಯ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಮೆಚ್ಚುಗೆ ವ್ಯಕ್ತಪಡಿಸಿದರು.

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ, ವೀರಶೈವ-ಲಿಂಗಾಯತ ಸಂಘ- ಸಂಸ್ಥೆಗಳು ಹಾಗೂ ಮೈಸೂರಿನ ಬಸವ ಬಳಗಗಳ ಒಕ್ಕೂಟದ ಸಹಯೋಗದಲ್ಲಿ ಇಲ್ಲಿನ ಕಲಾಮಂದಿರದಲ್ಲಿ ಶನಿವಾರ

ಆಯೋಜಿಸಿದ್ದ ಬಸವ ಜಯಂತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ADVERTISEMENT

ಎಲ್ಲಾ ಜಾತಿ-ಧರ್ಮ- ಸಮುದಾಯಗಳಿಗೆ ಅಕ್ಷರ ಮತ್ತು ಅನ್ನ ದಾಸೋಹವನ್ನು ನೀಡಿದ್ದು ವೀರಶೈವ ಲಿಂಗಾಯತ ಮಠಗಳು. ಸಿದ್ದರಾಮಯ್ಯ ಅವರು ಜಾರಿಗೆ ತಂದಿರುವ ಕಾರ್ಯಕ್ರಮಗಳು ಕೂಡ ಶರಣರ ಆಶಯದಂತೆ ಎಲ್ಲಾ ಜಾತಿ, ಧರ್ಮಗಳಿಗೂ ಅನ್ವಯವಾಗುತ್ತವೆ ಎಂದು ವಿವರಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶರಣ ಸಂಸ್ಕೃತಿಯನ್ನು ತಮ್ಮ ಬದುಕಿನ ಆಚರಣೆಯನ್ನಾಗಿಸಿಕೊಂಡಿದ್ದಾರೆ. ಈ ಕಾರಣಕ್ಕೆ ಬಸವ ಜಯಂತಿಯ ದಿನವನ್ನೇ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲು ಆಯ್ಕೆ ಮಾಡಿಕೊಂಡರು ಎಂದು ಸಮಾಜ ಕಲ್ಯಾಣ ಸಚಿವ ಎಚ್.ಸಿ.ಮಹದೇವಪ್ಪ ನುಡಿದರು.

ಶರಣ ಸಂಸ್ಕೃತಿಯ ಅನುಯಾಯಿಗಳಾದ ಸಿದ್ದರಾಮಯ್ಯ ಅವರು, ಮುಖ್ಯಮಂತ್ರಿಯಾದ ಬಳಿಕ ಮೊದಲಿಗೆ ಸಹಿ ಹಾಕಿದ್ದು ದಾಸೋಹ ಸಂಸ್ಕೃತಿಯ ಅನ್ನ ಭಾಗ್ಯ ಯೋಜನೆಗೆ. ಸರ್ಕಾರಿ ಕಚೇರಿಗಳಲ್ಲಿ ಬಸವಣ್ಣನವರ ಫೋಟೊ ಹಾಕುವುದನ್ನು ಕಡ್ಡಾಯಗೊಳಿಸಿದ್ದು ಸಿದ್ದರಾಮಯ್ಯ ಅವರು. ಹೀಗಾಗಿ ವಚನ ಕ್ರಾಂತಿ ಮತ್ತು ಶರಣ ಸಂಸ್ಕೃತಿಯ ಆಶಯಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬದುಕು ಮತ್ತು ಆಚರಣೆಗಳಲ್ಲಿ ಇದೆ ಎಂದು ವಿವರಿಸಿದರು.

ಶಿವರಾತ್ರಿ ದೇಶೀಕೇಂದ್ರ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು.

12ನೇ ಶತಮಾನದ ಶರಣ ದಂಪತಿಗಳು ಕೃತಿ ಬಿಡುಗಡೆ ಮಾಡಲಾಯಿತು. ಬಸವೇಶ್ವರ ಪುತ್ಥಳಿಗೆ ನೆರವಾದ ನೈಸ್ ಸಂಸ್ಥೆಯ ಮುಖ್ಯಸ್ಥ ಅಶೋಕ್ ಖೇಣಿ ಅವರನ್ನು ಸನ್ಮಾನಿಸಲಾಯಿತು.

ಶಾಸಕರಾದ ತನ್ವೀರ್ ಸೇಠ್, ಕೆ.ಹರೀಶ್ ಗೌಡ, ದರ್ಶನ್ ಧ್ರುವನಾರಾಯಣ, ಎಚ್.ಎಂ.ಗಣೇಶ್ ಪ್ರಸಾದ್, ಟಿ.ಎಸ್.ಶ್ರೀವತ್ಸ, ವಿಧಾನ ಪರಿಷತ್ ಸದಸ್ಯರಾದ ಮರಿತಿಬ್ಬೇಗೌಡ, ಡಿ.ತಿಮ್ಮಯ್ಯ ಇದ್ದರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.