ADVERTISEMENT

ಎಐಸಿಸಿ ಮುಖಂಡರ ಭೇಟಿಯಾದ ಸಿದ್ದರಾಮಯ್ಯ

ಸುರ್ಜೇವಾಲಾ ಪುತ್ರನ ಮದುವೆಯಲ್ಲಿ ಕಾಂಗ್ರೆಸ್‌ ನಾಯಕರ ಮುಖಾಮುಖಿ

​ಪ್ರಜಾವಾಣಿ ವಾರ್ತೆ
Published 28 ಫೆಬ್ರುವರಿ 2021, 15:41 IST
Last Updated 28 ಫೆಬ್ರುವರಿ 2021, 15:41 IST
ಸಿದ್ದರಾಮಯ್ಯ
ಸಿದ್ದರಾಮಯ್ಯ    

ಬೆಂಗಳೂರು: ರಾಜ್ಯ ಕಾಂಗ್ರೆಸ್‌ ಉಸ್ತುವಾರಿಯೂ ಆಗಿರುವ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್‌ ಸಿಂಗ್ ಸುರ್ಜೇವಾಲಾ ಅವರ ಪುತ್ರ ಅರ್ಜುನ್‌ ಮದುವೆಯಲ್ಲಿ ಭಾಗವಹಿಸಲು ಭಾನುವಾರ ದೆಹಲಿ ಪ್ರವಾಸ ಕೈಗೊಂಡಿದ್ದ ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರು, ಮದುವೆ ಸಮಾರಂಭದಲ್ಲೇ ಎಐಸಿಸಿಯ ಹಲವು ಮುಖಂಡರನ್ನು ಭೇಟಿ ಮಾಡಿದ್ದಾರೆ.

ಭಾನುವಾರ ಬೆಳಿಗ್ಗೆ ದೆಹಲಿಗೆ ತೆರಳಿದ್ದ ಸಿದ್ದರಾಮಯ್ಯ, ರಾತ್ರಿ ಬೆಂಗಳೂರಿಗೆ ವಾಪಸಾದರು. ಮದುವೆ ಸಮಾರಂಭದಲ್ಲೇ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ಎಐಸಿಸಿ ಸಂಘಟನಾ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್‌, ಹಿರಿಯ ನಾಯಕ ಎ.ಕೆ. ಆ್ಯಂಟನಿ, ಲೋಕಸಭೆಯ ಮಾಜಿ ಸ್ಪೀಕರ್‌ ಮೀರಾ ಕುಮಾರ್‌ ಸೇರಿದಂತೆ ಹಲವು ಮುಖಂಡರನ್ನು ಭೇಟಿ ಮಾಡಿದರು.

ಶಾಸಕರಾದ ಜಮೀರ್‌ ಅಹಮ್ಮದ್ ಖಾನ್, ಬೈರತಿ ಸುರೇಶ್ ಸೇರಿದಂತೆ ಹಲವರು ಸಿದ್ದರಾಮಯ್ಯ ಅವರ ದೆಹಲಿ ಪ್ರವಾಸದ ವೇಳೆ ಜತೆಗಿದ್ದರು. ಮೈಸೂರು ಮಹಾನಗರ ಪಾಲಿಕೆ ಮೇಯರ್‌ ಚುನಾವಣೆ ವೇಳೆ ಸಿದ್ದರಾಮಯ್ಯ ಅವರ ಗಮನಕ್ಕೆ ತಾರದೆ ಜೆಡಿಎಸ್‌ಗೆ ಮೇಯರ್‌ ಸ್ಥಾನ ಬಿಟ್ಟುಕೊಟ್ಟಿರುವುದು ಸೇರಿದಂತೆ ಪಕ್ಷದಲ್ಲಿನ ಆಂತರಿಕ ಭಿನ್ನಾಭಿಪ್ರಾಯಗಳ ಕುರಿತು ವರಿಷ್ಠರ ಜತೆ ಚರ್ಚಿಸಲು ಸಿದ್ದರಾಮಯ್ಯ ಮುಂದಾಗಿದ್ದಾರೆ ಎಂಬ ಸುದ್ದಿ ಹಬ್ಬಿತ್ತು.

ADVERTISEMENT

‘ಸಿದ್ದರಾಮಯ್ಯ ಅವರ ಮದುವೆ ಸಮಾರಂಭದಲ್ಲಿ ಎಐಸಿಸಿ ಮುಖಂಡರನ್ನು ಭೇಟಿ ಮಾಡಿದ್ದಾರೆ. ಅಲ್ಲಿ ಯಾವುದೇ ರೀತಿಯ ರಾಜಕೀಯ ಚರ್ಚೆಗಳು ನಡೆದಿಲ್ಲ’ ಎಂದು ಸಿದ್ದರಾಮಯ್ಯ ಅವರ ಆಪ್ತ ವಲಯದ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.