ADVERTISEMENT

ಚಿಯರ್ ಲೀಡರ್‌ ಬೇಡ, ಕನ್ನಡಿಗರ ಪರ ದನಿ ಎತ್ತುವ ದೇವೇಗೌಡರು ಬೇಕು: ಸಿದ್ದರಾಮಯ್ಯ

​ಪ್ರಜಾವಾಣಿ ವಾರ್ತೆ
Published 16 ಫೆಬ್ರುವರಿ 2025, 6:27 IST
Last Updated 16 ಫೆಬ್ರುವರಿ 2025, 6:27 IST
   

ಬೆಂಗಳೂರು: ‘ಕೇಂದ್ರದಲ್ಲಿ ಯಾವ ಪಕ್ಷದ ಸರ್ಕಾರ ಇದ್ದರೂ ಕರ್ನಾಟಕದ ಹಿತಾ ಸಕ್ತಿಯ ರಕ್ಷಣೆಯ ಪ್ರಶ್ನೆ ಎದುರಾದಾಗ ಮುಲಾಜಿಗೆ ಬೀಳದೆ ದನಿ ಎತ್ತುತ್ತಾ ಬಂದ ನೀವು, ಈಗ ಬಿಜೆಪಿ ಮತ್ತು ನರೇಂದ್ರ ಮೋದಿಯವರ ‘ಚಿಯರ್ ಲೀಡರ್’ ರೀತಿ ವರ್ತಿಸುತ್ತಿದ್ದೀರಿ’ ಎಂದು ಜೆಡಿಎಸ್‌ ರಾಷ್ಟ್ರೀಯ ವರಿಷ್ಠ ಎಚ್‌.ಡಿ. ದೇವೇಗೌಡ ಅವರನ್ನು ಉದ್ದೇಶಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

‘ಗೋದಾವರಿ–ಕಾವೇರಿ ನದಿ ಜೋಡಣೆಯಲ್ಲಿ ರಾಜ್ಯಕ್ಕೆ ಅನ್ಯಾಯವಾ ಗಿದೆ. ರಾಜ್ಯಕ್ಕೆ ಆಗಿರುವ ಅನ್ಯಾಯದ ವಿರುದ್ಧ ಪಕ್ಷಾತೀತವಾಗಿ ಹೋರಾಡಲು ಸಿದ್ಧ’ ಎಂಬ ದೇವೇಗೌಡರ ಹೇಳಿಕೆಗೆ ಮಾಧ್ಯಮ ಪ್ರಕಟಣೆಯ ಮೂಲಕ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ, ‘ನೀರಾ ವರಿ ಯೋಜನೆಯ ಬಗ್ಗೆ ನಿಮ್ಮ ಕಳ ಕಳಿಗೆ ನಮ್ಮ ಸಂಪೂರ್ಣ ಸಹಕಾರ ಇದೆ. ಈ ವಿಷಯದಲ್ಲಿ ನೀವು ನಡೆ ಸುವ ಹೋರಾಟಕ್ಕೆ ನಾನು ಮತ್ತು ಡಿ.ಕೆ. ಶಿವಕುಮಾರ್ ಮಾತ್ರವಲ್ಲ ಇಡೀ ಕರ್ನಾಟಕ ನಿಮ್ಮ ಜೊತೆ ಇರುತ್ತದೆ. ಆದರೆ, ಹೊಸ ನೀರಾವರಿ ಯೋಜನೆ ಗಳನ್ನು ಆರಂಭಿಸುವ ಮೊದಲು ಅಪೂರ್ಣ ಸ್ಥಿತಿಯಲ್ಲಿರುವ ನೀರಾವರಿ ಯೋಜನೆಗಳನ್ನು ತ್ವರಿತವಾಗಿ ಪೂರ್ಣ ಗೊಳಿಸಲು ನಿಮ್ಮ ಸಹಕಾರ ಇರಲಿ’ ಎಂದು ದೇವೇಗೌಡರಿಗೆ ಮನವಿ ಮಾಡಿದ್ದಾರೆ.

‘ರಾಜ್ಯದ ಹಿತಾಸಕ್ತಿ ರಕ್ಷಣೆಯ ಪ್ರಶ್ನೆ ಎದುರಾದ ಸಂದರ್ಭದಲ್ಲೆಲ್ಲ ಒಬ್ಬ ಮುತ್ಸದ್ದಿಯಾಗಿ, ಹೆಮ್ಮೆಯ ಕನ್ನಡಿಗನಾಗಿ ಹೋರಾಟ ನಡೆಸಿದ್ದನ್ನು ಜನರು ಗಮನಿಸಿ ದ್ದಾರೆ. ಆದರೆ, ಇತ್ತೀಚೆಗೆ ನೀವು ಮತ್ತು ನಿಮ್ಮ ಪಕ್ಷ ಕೇಂದ್ರ ಸರ್ಕಾರದ ವಕ್ತಾರ ರಂತೆ ಪಕ್ಷಪಾತಿಯಾಗಿ ವರ್ತಿಸುತ್ತಿರುವುದನ್ನು ಕೂಡಾ ನನ್ನನ್ನೂ ಸೇರಿದಂತೆ ಏಳುಕೋಟಿ ಕನ್ನಡಿಗರು ಗಮನಿಸುತ್ತಿದ್ದಾರೆ. ಕೇಂದ್ರ ಸಂಪುಟದಲ್ಲಿ ಮಗನನ್ನು ಸಚಿವನನ್ನಾಗಿ ಮಾಡಲು ಗೌಡರು ಇಷ್ಟೊಂದು ರಾಜಿ ಮಾಡಿಕೊಳ್ಳುವ ಅಗತ್ಯ ಇತ್ತಾ ಎಂದು ಜನ ಪ್ರಶ್ನಿಸುತ್ತಿ ದ್ದಾರೆ’ ಎಂದಿದ್ದಾರೆ.

ADVERTISEMENT

‘ನೀರಾವರಿ ವಿಚಾರದಲ್ಲಿ ನ್ಯಾಯ ಪಕ್ಷಪಾತಿಯಾಗಿ ಕರ್ನಾಟಕದ ಹಿತಾ ಸಕ್ತಿಯ ರಕ್ಷಣೆ ಮಾಡಬೇಕಾಗಿದ್ದ ಕೇಂದ್ರದ ನರೇಂದ್ರ ಮೋದಿ ಅವರ ನೇತೃತ್ವದ ಬಿಜೆಪಿ ಸರ್ಕಾರ ಸತತವಾಗಿ ಕನ್ನಡಿಗರ ಹಿತವನ್ನು ಬಲಿಗೊಡಲು ಹೊರಟಿರು ವುದನ್ನು ನಿಮಗೆ ನಾನು ಬಿಡಿಸಿ ಹೇಳಬೇಕಾಗಿಲ್ಲ. ಇನ್ನು ತೆರಿಗೆ ಹಂಚಿಕೆ, ಪ್ರಕೃತಿ ವಿಕೋಪ ಪರಿಹಾರ, ಕುಡಿಯುವ ನೀರು ಪೂರೈಕೆ, ರೈಲ್ವೆ ಯೋಜನೆಗಳ ವಿಚಾರದಲ್ಲಿಯೂ ಕೇಂದ್ರ ಸರ್ಕಾರ ಕರ್ನಾಟಕವನ್ನು ಶತ್ರು ರಾಜ್ಯದಂತೆ ನಡೆಸಿಕೊಳ್ಳುತ್ತಿದೆ. ಈ ವಿಚಾರಗಳು ಕೂಡಾ ನಿಮಗೆ ಗೊತ್ತಿರುವುದರಿಂದ ಸಂಸತ್‌ನಲ್ಲಿ ಈ ಬಗ್ಗೆ ನೀವು ದನಿ ಎತ್ತುತ್ತೀರಿ ಎಂದು ರಾಜ್ಯದ ಜನರು ನಿರೀಕ್ಷಿಸಿದ್ದರು’ ಎಂದೂ ಹೇಳಿದ್ದಾರೆ.

‘ದೈಹಿಕವಾಗಿ ಸ್ವಲ್ಪ ಕುಗ್ಗಿದಂತೆ ಕಂಡರೂ ಮಾನಸಿಕವಾಗಿ ನೀವಿನ್ನೂ ದೃಢವಾಗಿದ್ದೀರಿ. ದಯವಿಟ್ಟು ಈಗಲಾದರೂ ಪಕ್ಷ ರಾಜಕಾರಣ ವನ್ನು ಮೀರಿ ಒಬ್ಬ ಮುತ್ಸದ್ದಿ ನಾಯಕನ ರೀತಿಯಲ್ಲಿ ಕನ್ನಡ-ಕನ್ನಡಿಗ-ಕರ್ನಾಟಕದ ಹಿತರಕ್ಷಣೆಗೆ ಮುಂದಾಗಬೇಕು’ ಎಂದು ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.

‘ಅಧಿಕಾರದಲ್ಲಿದ್ದು ಹೋರಾಟ ಯಾಕೆ?’
‘ರಾಜ್ಯದ ನೆಲ ಜಲ ಹಿತಕ್ಕಾಗಿ ನಾವು ಬದ್ಧವಾಗಿದ್ದೇವೆ. ಅವರು ಅಧಿಕಾರದಲ್ಲಿ ಇರುವಾಗ ಹೋರಾಟ ಯಾಕೆ ಮಾಡಬೇಕು’ ಎಂದು ಎಚ್‌.ಡಿ. ದೇವೇಗೌಡರನ್ನು ಡಿ.ಕೆ. ಶಿವಕುಮಾರ್ ಪ್ರಶ್ನಿಸಿದರು. ಸುದ್ದಿಗಾರರ ಜೊತೆ ಮಾತನಾಡಿದ ಶಿವಕುಮಾರ್ ‘ಮೇಕೆದಾಟು ಯೋಜನೆಗೆ ಒಂದೇ ದಿನದಲ್ಲಿ ಸಹಿ ಹಾಕಿಸುವುದಾಗಿ ದೇವೇಗೌಡರು ಹೇಳಿದ್ದರು. ಮಹದಾಯಿ ವಿಚಾರವಾಗಿ ನಾವು ಕೇಂದ್ರ ಸಚಿವರನ್ನು ಭೇಟಿ ಮಾಡಿ ಮನವಿ ಮಾಡಿದ್ದೆವು. ನೀರಾವರಿ ಯೋಜನೆಗಳ ವಿಚಾರದಲ್ಲಿ ನಾವು ರಾಜಕೀಯ ಮಾಡುವುದಿಲ್ಲ ನಮಗೆ ಅದರ ಅಗತ್ಯವಿಲ್ಲ. ಅವರಿಗೆ ರಾಜಕಾರಣ ಮಾಡಿ ರೂಢಿ ಇರಬಹುದು’ ಎಂದರು. ‘ಭದ್ರಾ ಮೇಲ್ದಂಡೆ ಯೋಜನೆಗೆ ₹ 5 ಸಾವಿರ ಕೋಟಿ ಘೋಷಣೆ ಮಾಡಿದ್ದೀರಿ. ಅದನ್ನು ಕೊಟ್ಟಿಲ್ಲ ಎಂದು ‌ಸಂಸತ್ತಿನಲ್ಲಿ ಎಂದಾದರೂ ಪ್ರಶ್ನೆ ಮಾಡಿದ್ದಾರಾ? ದೇವೇಗೌಡರು ಕುಮಾರಸ್ವಾಮಿ ಕೇಂದ್ರ ಸಚಿವರು ಸಂಸದರು ಈ ಬಗ್ಗೆ ಧ್ವನಿ ಎತ್ತುತ್ತಾರೆ ಎಂಬ ನಿರೀಕ್ಷೆ ಇಟ್ಟುಕೊಂಡಿದ್ದೆ. ಆ ಕೆಲಸದಲ್ಲೂ ವಿಫಲರಾಗಿದ್ದಾರೆ. ಮೊದಲು ಈ ಕೆಲಸ ಮಾಡಲಿ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.