ADVERTISEMENT

ಜಿಎಸ್‌ಟಿ ವಿಷಯದಲ್ಲಿ ಕೇಂದ್ರದಿಂದ ರಾಜ್ಯಕ್ಕೆ ದೊಡ್ಡ ದ್ರೋಹ: ಸಿದ್ದರಾಮಯ್ಯ

ಜಿಎಸ್‌ಟಿ ಕೌನ್ಸಿಲ್ ಸಭೆಯ ಒಪ್ಪಂದದಂತೆ ಕೇಂದ್ರ ಸರ್ಕಾರ ನಡೆದುಕೊಳ್ಳಬೇಕು

​ಪ್ರಜಾವಾಣಿ ವಾರ್ತೆ
Published 29 ಆಗಸ್ಟ್ 2020, 11:13 IST
Last Updated 29 ಆಗಸ್ಟ್ 2020, 11:13 IST
ಸಿದ್ದರಾಮಯ್ಯ
ಸಿದ್ದರಾಮಯ್ಯ   

ಬೆಂಗಳೂರು: ‘ಜಿಎಸ್‌ಟಿ ಪರಿಹಾರ ನಿರಾಕರಿಸುವ ಮೂಲಕ ರಾಜ್ಯಕ್ಕೆ ಕೇಂದ್ರ ಸರ್ಕಾರ ದೊಡ್ಡ ದ್ರೋಹ ಎಸಗಿದೆ’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.

ಸುದ್ದಿಗಾರರ ಜೊತೆ ಶನಿವಾರ ಮಾತನಾಡಿದ ಅವರು, ‘ಜಿಎಸ್‌ಟಿ ಜಾರಿಗೆ ತರುವ ಸಂದರ್ಭದಲ್ಲಿ ಜಿಎಸ್‌ಟಿ ಕೌನ್ಸಿಲ್‌ನಲ್ಲಿ ಆಗಿರುವ ಒಪ್ಪಂದದ ಪ್ರಕಾರ ನಡೆದಕೊಳ್ಳಬೇಕಾಗಿರುವುದು ಕೇಂದ್ರ ಸರ್ಕಾರದ ಜವಾಬ್ದಾರಿ. ಶೇ 14ರಷ್ಟು ಜಿಎಸ್‌ಟಿ ಖೋತಾ ಆಗಲಿದೆ. ಅದನ್ನು ಮುಂದಿನ 5 ವರ್ಷಗಳವರೆಗೆ ತುಂಬಿಕೊಡಬೇಕು ಎಂದು ಒಪ್ಪಂದವಾಗಿತ್ತು’ ಎಂದರು.

‘ಕೊರೊನಾದಿಂದಾಗಿ ಎಲ್ಲ ರಾಜ್ಯಗಳು ಆರ್ಥಿಕ ದುಸ್ಥಿತಿ ಎದುರಿಸುತ್ತಿವೆ. ಸರ್ಕಾರಿ ನೌಕರರಿಗೆ ಸಂಬಳ ನೀಡುವುದೇ ಕಷ್ಟವ ಪರಿಸ್ಥಿತಿ ಇದೆ. ಜಿಎಸ್‌ಟಿ ಸಂಗ್ರಹದಲ್ಲಿ ನಷ್ಟವಾದರೆ ಅದನ್ನು ಕೇಂದ್ರ ಸರ್ಕಾರ ಭರಿಸಿಕೊಡಬೇಕು ಹಾಗೂ ಮುಂದಿನ 5 ವರ್ಷಗಳವರೆಗೆ ಕೇಂದ್ರ ಸರ್ಕಾರ ಸಂಪೂರ್ಣ ಜವಾಬ್ದಾರಿಯಾಗಿರಬೇಕು ಎಂದು ಒಪ್ಪಂದ ಆಗಿತ್ತು. ಆದರೆ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಕೊರೊನಾ ಬಂದಿದೆ, ಇದನ್ನು ಯಾರೂ ಊಹಿಸಿರಲಿಲ್ಲ, ಇದು ದೇವರ ಆಟ, ಸುಮಾರು ₹ 3 ಲಕ್ಷ ಕೋಟಿ ನಷ್ಟ ಉಂಟಾಗಿದೆ. ಸೆಸ್‌ನಿಂದ ₹ 65 ಸಾವಿರ ಕೋಟಿ ಬರುತ್ತದೆ. ಉಳಿದ, ₹ 2.65 ಲಕ್ಷ ಕೋಟಿ ನಷ್ಟ ಆಗುತ್ತಿರುವುದರಿಂದ ನಾವು ನಷ್ಟ ತುಂಬಿಕೊಡಲು ಸಾಧ್ಯವಿಲ್ಲ ಎಂದಿದ್ದಾರೆ ಎಂದರು.

ADVERTISEMENT

‘ರಾಜ್ಯಗಳಿಗೆ ನೀವು ರಿಸರ್ವ್ ಬ್ಯಾಂಕ್‌ಗಳಿಂದ ಸಾಲ ಪಡೆದು ತಿರಿಸಿಕೊಳ್ಳಿ ಎಂದು ಅವರು ಹೇಳಿದ್ದಾರೆ. ಅದರ, ಬದಲು ಕೇಂದ್ರವೇ ಏಕೆ ಸಾಲ ಪಡೆದು ರಾಜ್ಯಗಳಿಗೆ ನೀಡಬಾರದು. ಕೇಂದ್ರ ಸರ್ಕಾರ ತನ್ನ ಜವಾಬ್ದಾರಿಯನ್ನು ರಾಜ್ಯಗಳ ಮೇಲೆ ಹಾಕುತ್ತಿರುವುದು ಏಕೆ. ಒಪ್ಪಂದದ ಪ್ರಕಾರ ನಷ್ಟ ತುಂಬಿಕೊಡಬೇಕಾಗಿರುವುದು ನಿಮ್ಮ ಕರ್ತವ್ಯವಲ್ಲವೇ. ಕೇಂದ್ರ ಸರ್ಕಾರ ರಾಜ್ಯಗಳ ಮೇಲೆ ಒತ್ತಡ ಹಾಕುವುದು ಸರಿಯಲ್ಲ. ರಾಜ್ಯಕ್ಕೆ ಸಂವಿಧಾನಬದ್ಧವಾಗಿ ನೀಡಬೇಕಾಗಿರುವ ಜಿಎಸ್‌ಟಿ ಪರಿಹಾರ ನೀಡಬೇಕು’ ಎಂದು ಒತ್ತಾಯಿಸಿದರು.

‘ಕೇಂದ್ರ ಮತ್ತು ರಾಜ್ಯದಲ್ಲಿ ಒಂದೇ ಸರ್ಕಾರವಿದ್ದರೆ ಸ್ವರ್ಗ ಸೃಷ್ಟಿ ಮಾಡುತ್ತೇವೆ ಎಂದು ಹೇಳಿದ್ದನ್ನು ನಂಬಿದ ರಾಜ್ಯದ ಜನರು 25 ಜನ ಸಂಸದರನ್ನು ಗೆಲ್ಲಿಸಿಕೊಟ್ಟಿದ್ದಾರೆ. ಉಪಚುನಾವಣೆಯಲ್ಲಿ ನಿಮ್ಮ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಟ್ಟಿದ್ದಾರೆ, ಜನರು ನಿಮ್ಮ ಮೇಲಿಟ್ಟಿರುವ ನಂಬಿಕೆಗೆ ಈಗ ನೀವು ಮಾಡುತ್ತಿರುವುದು ದ್ರೋಹವಲ್ಲವೇ. ರಾಜ್ಯಗಳನ್ನು ಕೇಂದ್ರ ದಿವಾಳಿಯಾಗುವತ್ತ ಕೊಂಡೊಯ್ಯುತ್ತಿದೆ. ಹೀಗಾಗಿ, ಕೇಂದ್ರದ ಈ ಸಲಹೆಯನ್ನು ರಾಜ್ಯ ಸರ್ಕಾರ ತಿರಸ್ಕರಿಸಬೇಕು’ ಎಂದೂ ಅವರು ಆಗ್ರಹಿಸಿದರು.

‘ರಾಜ್ಯ ಸರ್ಕಾರಕ್ಕೆ ಧಮ್ ಇದ್ದರೆ ನೀವೆ ಸಾಲ ತೆಗೆದುಕೊಂಡು ನಮಗೆ ಜಿಎಸ್‌ಟಿ ಪರಿಹಾರ ಕೊಡಿ ಎಂದು ಕೇಳಲಿ. ಅಲ್ಲದೆ, ಸರ್ವಪಕ್ಷ ನಿಯೋಗ ಕೊಂಡೊಯ್ದು ಕೇಂದ್ರದ ಮೇಲೆ ಒತ್ತಡ ಹೇರಲಿ. ಇದರ ಜೊತೆಗೆ 15ನೇ ಹಣಕಾಸು ಆಯೋಗದಿಂದ ಕೂಡ ನಮಗೆ ಅನ್ಯಾಯವಾಗಿದೆ’ ಎಂದರು.

‘ಜಿಡಿಪಿ ನೆಲಕಚ್ಚಿದೆ. ನಿರುದ್ಯೋಗ ಪ್ರಮಾಣ ಏರಿಕೆಯಾಗಿದೆ. ಹೀಗಿರುವಾಗ ಮತ್ತೆ ರಾಜ್ಯ ಸರ್ಕಾರ ಸಂಬಳ ನೀಡಲು ಸಾಲ ಪಡೆದುಕೊಂಡರೆ ಅಭಿವೃದ್ಧಿ ಕಾರ್ಯಗಳು ಆಗುವುದಿಲ್ಲ. ನಮ್ಮ ಆಡಳಿತಾವಧಿಯಲ್ಲಿ ಆರ್ಥಿಕ ಶಿಸ್ತು ಅತ್ಯುತ್ತಮವಾಗಿ ನಿರ್ವಹಣೆಯಾಗಿತ್ತು. ಸಾಲದ ಪ್ರಮಾಣ ಜಿಡಿಪಿ ಶೇ 25 ಗಿಂತಲೂ ಕಡಿಮೆಯಿತ್ತು. ಈಗ ಸಾಲ ಅನಿಯಂತ್ರಿತವಾಗಿ ಜಾಸ್ತಿಯಾಗುವುದರಿಂದ ರಾಜ್ಯ ಆರ್ಥಿಕವಾಗಿ ದಿವಾಳಿಯಾಗಿ, ಅಭಿವೃದ್ಧಿಯಲ್ಲಿ 10 ವರ್ಷಗಳಷ್ಟು ಹಿಂದಕ್ಕೆ ಹೋಗಲಿದೆ’ ಎಂದರು.

‘ರಾಜ್ಯಗಳಿಗೆ ನೀವೇ ಸಾಲ ತೆಗೆದುಕೊಳ್ಳಿ ಎಂದು ಹೇಳುವುದೇ ವಿಪರ್ಯಾಸ. ರಾಜ್ಯಗಳ ಬಗ್ಗೆ ಕಾಳಜಿಯೇ ಇಲ್ಲದಿರುವ ಅತ್ಯಂತ ಕೆಟ್ಟ ಸರ್ಕಾರ ಕೇಂದ್ರದಲ್ಲಿದ್ದರೆ, ಅದನ್ನು ಪ್ರಶ್ನಿಸುವ ಧೈರ್ಯವಿಲ್ಲದ ಹೇಡಿ ಸರ್ಕಾರ ರಾಜ್ಯದಲ್ಲಿದೆ. ಬಿಜೆಪಿಯೇತರ ರಾಜ್ಯ ಸರ್ಕಾರಗಳು ಕೇಂದ್ರದ ಈ ನೀತಿಯನ್ನು ವಿರೋಧಿಸಿವೆ’ ಎಂದರು.

ಪ್ರವಾಹ, ಸರ್ಕಾರ ಎಡವಿದೆ: ‘ಈ ವರ್ಷವೂ ಪ್ರವಾಹ ಬಂದಿದ್ದು 56 ತಾಲ್ಲೂಕುಗಳ 1000 ಹಳ್ಳಿಗಳು ಪ್ರವಾಹದಿಂದ ಬಾಧಿಸಲ್ಪಟ್ಟಿದೆ. ಸುಮಾರು 1 ಲಕ್ಷ ಹೆಕ್ಟೇರ್ ಬೆಳೆ ಹಾನಿಯಾಗಿದೆ, ಮನೆಗಳು ಕುಸಿದುಬಿದ್ದಿವೆ. ಜಾನುವಾರುಗಳು ಸಾವಿಗೀಡಾಗಿವೆ. ರಾಜ್ಯ ಸರ್ಕಾರವೇ ಸುಮಾರು 4 ಸಾವಿರ ಕೋಟಿ ನಷ್ಟವಾಗಿದೆ ಎಂದಿದೆ. ಈ ಹಿಂದೆಯೂ ಸರಿಯಾಗಿ ಪರಿಹಾರ ಕೊಟ್ಟಿಲ್ಲ. ₹ 35 ಸಾವಿರ ಕೋಟಿ ಪರಿಹಾರ ಕೇಳಿದ್ದರೆ ಬರೀ ₹ 1,800 ಕೋಟಿ ಪರಿಹಾರ ನೀಡಲಾಗಿದೆ. ಇನ್ನು ಮನೆ ಕಳೆದುಕೊಂಡವರಿಗೆ ಮನೆ ಕಟ್ಟಿಕೊಟ್ಟಿಲ್ಲ, ಹಳ್ಳಿಗಳ ಸ್ಥಳಾಂತರವಾಗಿಲ್ಲ, ಶಾಲೆಗಳ ಪುನರ್ ನಿರ್ಮಾಣ ಕಾರ್ಯವೂ ಆಗಿಲ್ಲ’ ಎಂದು ದೂರಿದರು.

‘ಈ ವರ್ಷವೂ ಪ್ರವಾಹ ಬಂದಿದೆ. ಯಡಿಯೂರಪ್ಪನವರು ಹೆಲಿಕಾಪ್ಟರ್ ಮೂಲಕ ಸರ್ವೇ ಮಾಡಿದರು. ಆದರೆ, ಸರ್ಕಾರದ ಬೇರೆ ಮಂತ್ರಿಗಳು ಜನರ ಬಳಿಗೆ ಹೋಗಿ ಅವರ ಕಷ್ಟ ಆಲಿಸಬೇಕೋ ಬೇಡವೋ. ಸಚಿವ ಅಶೋಕ ಅವರು ಕೇಂದ್ರದಿಂದ ಪರಿಹಾರ ಕೇಳಿದ್ದೇವೆ, ಅವರ ತಂಡ ಬಂದು ಸರ್ವೇ ಮಾಡಿ ಪರಿಹಾರ ನೀಡುತ್ತದೆ ಎನ್ನುತ್ತಾರೆ. ಆದರೆ, ಅಧಿಕಾರಿಗಳ ಮಾತೇ ಬೇರೆ. ಇವರು ಕೇಂದ್ರ ವಿತ್ತ ಸಚಿವರನ್ನು ಭೇಟಿ ಮಾಡಿ ಮನವಿ ಕೊಟ್ಟು, ಪ್ರಧಾನಿಗಳ ಮನವೊಲಿಕೆ ಮಾಡಿ ಪರಿಹಾರದ ಹಣ ಸಿಗುವವರೆಗೂ ಹಿಡಿದ ಕಾರ್ಯದಿಂದ ಹಿಂದೆಸರಿಯಬಾರದು’ ಎಂದರು.

‘ಪ್ರವಾಹ ಸಂತ್ರಸ್ತರಿಗೆ ಪರಿಹಾರ ನೀಡುವುದರಲ್ಲಿ ರಾಜ್ಯ ಸರ್ಕಾರ ಎಡವಿದೆ. ತಕ್ಷಣ ಪ್ರವಾಹ ಪೀಡಿತ ಪ್ರದೇಶಗಳ ಸರ್ವೇ ನಡೆಸಿ, ನಷ್ಟದ ಪ್ರಮಾಣದ ವರದಿ ತರಿಸಿಕೊಂಡು ಪರಿಹಾರ ನೀಡಬೇಕು. ಈ ವಿಷಯವನ್ನು ಅಧಿವೇಶನದಲ್ಲಿ ಪ್ರಶ್ನಿಸಿದರೆ ಸರಿಯಾಗಿ ಉತ್ತರ ನೀಡಲ್ಲ. ನಾನು ಸರ್ಕಾರವನ್ನು ಪ್ರಶ್ನಿಸಿದರೆ ನನ್ನ ಮಾತನ್ನು ಕೇಳಿಸಿಕೊಳ್ಳಲು ಸರ್ಕಾರ ಸಿದ್ಧವಿರಲಿಲ್ಲ. ಈ ಬಾರಿಯ ಅಧಿವೇಶನದಲ್ಲೂ ಈ ವಿಚಾರವನ್ನು ಪ್ರಶ್ನಿಸುತ್ತೇನೆ’ ಎಂದರು.

ರಾಯಣ್ಣ ಪ್ರತಿಮೆ, ವಿವಾದ ಮಾಡಿಕೊಂಡಿದ್ದು ತಪ್ಪು: ‘ಸಂಗೊಳ್ಳಿ ರಾಯಣ್ಣ ಪ್ರತಿಮೆ ನಿರ್ಮಾಣ ವಿಚಾರದಲ್ಲಿ ರಾಜ್ಯ ಸರ್ಕಾರ ಬೇಗನೆ ನಿರ್ಧಾರ ತೆಗೆದುಕೊಂಡಿದ್ದರೆ ರಾಯಣ್ಣ ವರ್ಸಸ್ ಶಿವಾಜಿ, ಕನ್ನಡಿಗರು ವರ್ಸಸ್ ಮರಾಠಿಗರು ಎಂಬ ಪರಿಸ್ಥಿತಿಯೇ ನಿರ್ಮಾಣ ಆಗುತ್ತಿರಲಿಲ್ಲ. ನಾನು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ರಮೇಶ ಜಾರಕಿಹೊಳಿಯವರಿಗೆ ಎರಡು ಬಾರಿ ಕರೆ ಮಾಡಿ ಮಾತನಾಡಿದ್ದೇನೆ’ ಎಂದರು.

‘ಈ ಹೋರಾಟದಲ್ಲಿ ಕನ್ನಡಿಗರ ವಿರುದ್ಧ ಮೊಕದ್ದಮೆಗಳನ್ನು ದಾಖಲಿಸಲಾಗಿದೆ. ಅದನ್ನು ತಕ್ಷಣ ವಾಪಾಸು ಪಡೆಯಬೇಕು’ ಎಂದು ಆಗ್ರಹಿಸಿದರು.

‘ಸಚಿವ ಸಿ.ಟಿ. ರವಿಯವರು ರಾಯಣ್ಣ ಪ್ರತಿಮೆ ನಿರ್ಮಾಣಕ್ಕೆ ಸಂಬಂಧಿಸಿದಂತೆ ನಡೆಸಲಾದ ಹೋರಾಟವನ್ನು ವ್ಯಂಗ್ಯ ಮಾಡಿದ್ದಾರೆ. ಆ ಭಾಗದ ಜನರು ರಾಯಣ್ಣನ ಪ್ರತಿಮೆ ನಿರ್ಮಾಣಕ್ಕಾಗಿ ನಡೆಸುತ್ತಿರುವ ಹೋರಾಟಕ್ಕೆ ರಾಜಕೀಯ ಬಣ್ಣ ಕೊಡುವ ಅಗತ್ಯವಿಲ್ಲ. ಬಹಳ ಹಿಂದಿನಿಂದಲೂ ಪ್ರತಿಮೆ ನಿರ್ಮಾಣಕ್ಕಾಗಿ ಹೋರಾಡುತ್ತಾ ಬಂದಿದ್ದಾರೆ. ರವಿಯವರು ಜವಾಬ್ದಾರಿಯಿಂದ ಮಾತನಾಡಬೇಕು’ ಎಂದರು.

ಡಿ.ಜೆ. ಹಳ್ಳಿ ಘಟನೆ, ತಪ್ಪಿತಸ್ಥರಿಗೆ ಶಿಕ್ಷೆಯಾಗಲಿ: ‘ಡಿ.ಜೆ.ಹಳ್ಳಿ ಪ್ರಕರಣ ಇನ್ನೂ ತನಿಖೆಯ ಹಂತದಲ್ಲಿಯೇ ಇದೆ, ಈಗಲೇ ಯಾರನ್ನೂ ಅಪರಾಧಿಗಳು ಅಂತಲೋ ಅಥವಾ ಅಮಾಯಕರು ಅಂತಲೋ ನಿರ್ಧರಿಸಲು ಸಾಧ್ಯವಿಲ್ಲ. ಪಕ್ಷದ ಶಾಸಕರಾದ ಜಮೀರ್ ಅಹ್ಮದ್ ಅವರು ಗಲಭೆಯ ಆರೋಪಿಗಳನ್ನು ಅಮಾಯಕರು ಎಂದಿಲ್ಲ. ಗಲಭೆಯಲ್ಲಿ ಮೃತಪಟ್ಟ ಕುಟುಂಬದ ಸದಸ್ಯರು ತೀರ ಬಡವರು ಎನ್ನುವ ಕಾರಣಕ್ಕಾಗಿ ಪರಿಹಾರ ನೀಡಿದ್ದೇನೆ ಎಂದಿದ್ದಾರೆ. ತಪ್ಪಿತಸ್ಥರಿಗೆ ಶಿಕ್ಷೆ ನೀಡುವ ವಿಚಾರದಲ್ಲಿ ನಮ್ಮ ತಕರಾರಿಲ್ಲ. ಯಾರೇ ತಪ್ಪು ಮಾಡಿದ್ದರೂ ಅವರಿಗೆ ಶಿಕ್ಷೆಯಾಗಲಿ’ ಎಂದರು.

ಡ್ರಗ್ಸ್ ಜಾಲ, ತನಿಖೆಯಾಗಲಿ: ’ಗಾಂಜಾ ಮಾರಾಟ ಮತ್ತು ಸೇವನೆ ಎರಡೂ ಮಹಾ ಅಪರಾಧ. ಒಂದು ವೇಳೆ ರಾಜ್ಯದಲ್ಲಿ ಗಾಂಜಾ ಮಾರಾಟ ಆಗುತ್ತಿದ್ದರೆ ಅದಕ್ಕೆ ಸರ್ಕಾರದ ವೈಫಲ್ಯವೇ ಕಾರಣ. ಗಾಂಜಾ ಮಾರುವವರು ಮತ್ತು ಸೇವನೆ ಮಾಡುವವರನ್ನು ಪತ್ತೆ ಹಚ್ಚಿ, ಶಿಕ್ಷೆಗೆ ಒಳಪಡಿಸಬೇಕು’ ಎಂದು ಒತ್ತಾಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.