
ಬೆಂಗಳೂರು: ಉರ್ದು ಭಾಷೆಯಲ್ಲಿ ಸರ್ಕಾರಿ ಜಾಹೀರಾತು ಕುರಿತು ವಿರೋಧ ಪಕ್ಷಗಳ ಟೀಕೆಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ‘ನೀವು ಅಧಿಕಾರದಲ್ಲಿದ್ದಾಗಲೂ ಜಾಹೀರಾತು ನೀಡಿ ಈಗ ನಮ್ಮ ವಿರುದ್ಧ ಮುಗಿಬೀಳುವುದು ಅಸಹ್ಯ ಮತ್ತು ಆತ್ಮವಂಚನೆಯ ಪರಮಾವಧಿ’ ಎಂದು ದೂರಿದ್ದಾರೆ.
ಈ ಬಗ್ಗೆ ತಮ್ಮ ‘ಎಕ್ಸ್’ ಖಾತೆಯಲ್ಲಿ ಹೇಳಿಕೆ ನೀಡಿರುವ ಅವರು, ‘ನಿಮ್ಮ ವೀರಾವೇಶದ ಮಾತುಗಳನ್ನು ಆಲಿಸಿದೆ. ಬಿ.ಎಸ್.ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ ಅವರು ಅಧಿಕಾರದಲ್ಲಿದ್ದಾಗ ಯಾರ ಓಲೈಕೆಗಾಗಿ ಉರ್ದು ಜಾಹೀರಾತು ನೀಡಿದ್ದರು ಎಂಬ ಬಗ್ಗೆ ಹೇಳಿ ಪುಣ್ಯಕಟ್ಟಿಕೊಳ್ಳಿ’ ಎಂದು ಆಗ್ರಹಿಸಿದ್ದಾರೆ.
‘ಹೆಚ್ಚು ಜನರನ್ನು ತಲುಪುತ್ತದೆ ಎನ್ನುವ ಕಾರಣಕ್ಕಾಗಿ ಆಯಾ ಭಾಷೆಯ ಪತ್ರಿಕೆಗಳಿಗೆ ಅದೇ ಭಾಷೆಯಲ್ಲಿ ಜಾಹೀರಾತು ನೀಡುವುದು ಹಿಂದಿನಿಂದ ನಡೆದುಕೊಂಡು ಬಂದಿದೆ. ಬಿಜೆಪಿ ನಾಯಕರು ಹತ್ತಾರು ಬಾರಿ ಉರ್ದು ಜಾಹೀರಾತುಗಳನ್ನು ನೀಡಿದ್ದಾಗ, ಅವರಿಗೆ ಅದು ತುಷ್ಟೀಕರಣ ಎನಿಸಲಿಲ್ಲ. ನಮ್ಮ ಸರ್ಕಾರ ನೀಡಿರುವ ಉರ್ದು ಜಾಹೀರಾತು ಕಂಡೊಡನೆ ಅವರೊಳಗಿನ ಕನ್ನಡಪ್ರೇಮ ಇದ್ದಕ್ಕಿದ್ದಂತೆ ಎದ್ದುನಿಂತಿದೆ’ ಎಂದು ಕಟಕಿಯಾಡಿದ್ದಾರೆ.
‘ನಿಮ್ಮ ಈ 'ಹಿಪೋಕ್ರಸಿ' ಗೋಸುಂಬೆಯನ್ನೇ ನಾಚಿಸುವಂತಿದೆ. ನೆಲ, ಜಲ, ಭಾಷೆಯ ಕಾಳಜಿಯ ಬಗ್ಗೆ ಬಿಜೆಪಿ ನಾಯಕರಿಂದ ಪಾಠ ಹೇಳಿಸಿಕೊಳ್ಳಬೇಕಾದ ದರಿದ್ರ ಸ್ಥಿತಿ ನಮಗೆ ಬಂದಿಲ್ಲ. ಕನ್ನಡ ಮತ್ತು ಕನ್ನಡಿಗರ ಹಿತ ಕಾಯುವ ವಿಚಾರ ಬಂದಾಗ ರಾಜಕೀಯ ಬದಿಗಿಟ್ಟು, ಹೋರಾಟದ ಮೊದಲ ಸಾಲಿನಲ್ಲಿ ನಿಂತವನು ನಾನು. ಇದಕ್ಕೆ ಇತಿಹಾಸ ಸಾಕ್ಷಿ. ನನಗೆ ಕನ್ನಡ ಬರಿ ಭಾಷೆಯಲ್ಲ, ಬದುಕು ಹೌದು’ ಎಂದು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.