ADVERTISEMENT

ಆರ್‌ಎಸ್ಎಸ್‌ ಕಂಡರೆ ನನಗೆ ಮಾತ್ರವಲ್ಲ, ಪ್ರತಿ ಭಾರತೀಯನಿಗೂ ಭಯ: ಸಿದ್ದರಾಮಯ್ಯ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 2 ಜೂನ್ 2022, 5:46 IST
Last Updated 2 ಜೂನ್ 2022, 5:46 IST
ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ
ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ   

ಬೆಂಗಳೂರು: ಸಂಸದ ಡಿ.ವಿ.ಸದಾನಂದಗೌಡ ಅವರು ಹೇಳಿರುವಂತೆ ಆರ್‌ಎಸ್‌ಎಸ್‌ ಕಂಡರೆ ನನಗೆ ಭಯ ಎಂಬುದು ನೂರಕ್ಕೆ ನೂರರಷ್ಟು ಸತ್ಯ. ನನಗೆ ಮಾತ್ರವಲ್ಲ, ಜಾತ್ಯತೀತತೆ, ಸೌಹಾರ್ದತೆ ಮತ್ತು ಅಹಿಂಸೆಯ ಮೇಲೆ ನಂಬಿಕೆ ಇಟ್ಟಿರುವ ಪ್ರತಿಯೊಬ್ಬ ಭಾರತೀಯನಿಗೂ ಆರ್‌ಎಸ್‌ಎಸ್‌ ಕಂಡರೆ ಭಯ ಇದೆ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

ಡಿ.ವಿ.ಸದಾನಂದಗೌಡ ಅವರ ಹೇಳಿಕೆಯ 'ಆರ್‌ಎಸ್‌ಎಸ್‌ ಕಂಡರೆ ಸಿಗ್ಗರಾಮಯ್ಯಗೆ ಭಯ' ಎಂಬ 'ಪ್ರಜಾವಾಣಿ' ವರದಿಯನ್ನು ಟ್ವಿಟರ್‌ನಲ್ಲಿ ಹಂಚಿಕೊಂಡಿರುವ ಸಿದ್ದರಾಮಯ್ಯ ಸರಣಿ ಟ್ವೀಟ್‌ಗಳ ಮೂಲಕ ಪ್ರತಿಕ್ರಿಯಿಸಿದ್ದಾರೆ. ಆರ್ಯರ ಆರ್‌ಎಸ್ಎಸ್‌ ಎಂಬ ಹ್ಯಾಶ್‌ಟ್ಯಾಗ್‌ನಲ್ಲಿ ಟ್ವೀಟ್‌ ಮಾಡಿದ್ದಾರೆ.

ಭಯ ಹುಟ್ಟಿಸುವವರನ್ನು ಸಾಮಾನ್ಯ ಭಾಷೆಯಲ್ಲಿ ಭಯೋತ್ಪಾದಕರು ಎನ್ನಲಾಗುತ್ತಿದೆ. ಡಿ.ವಿ.ಸದಾನಂದಗೌಡ ಅವರು ಯಾಕೆ ತನ್ನ ಮಾತೃ ಸಂಸ್ಥೆಯ ಮೇಲೆ ಈ ರೀತಿಯ ಆರೋಪ ಮಾಡುತ್ತಿದ್ದಾರೆ ಎನ್ನುವುದನ್ನು ಅವರೇ ಹೇಳಬೇಕು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ADVERTISEMENT

ಆರ್‌ಎಸ್‌ಎಸ್‌ ಬಗೆಗಿನ ಭಯದ ಕಾರಣದಿಂದಾಗಿಯೇ ಮಹಾತ್ಮ ಗಾಂಧೀಜಿಯವರ ಹತ್ಯೆಯ ನಂತರ ಆರ್‌ಎಸ್‌ಎಸ್‌ ಮೇಲೆ ದೇಶದ ಮೊದಲ ಗೃಹ ಸಚಿವ ವಲ್ಲಭಭಾಯಿ ಪಟೇಲ್‌ ಅವರು ನಿಷೇಧ ಹೇರಿದ್ದು ಎನ್ನುವುದು ನೆನಪಿರಲಿ ಎಂದು ಸಿದ್ದರಾಮಯ್ಯ ಇತಿಹಾಸವನ್ನು ಉಲ್ಲೇಖಿಸಿದ್ದಾರೆ.

ಉನ್ನತ ಪದಾಧಿಕಾರದಿಂದ ಈ ದೇಶದ ಬಹುಸಂಖ್ಯಾತ ಹಿಂದೂಗಳಾದ ದಲಿತರು ಮತ್ತು ಹಿಂದುಳಿದ ಜಾತಿಗಳನ್ನು ದೂರ ಇಟ್ಟಿರುವ ಕಾರಣಕ್ಕಾಗಿಯೇ ಈ ಸಮುದಾಯಗಳಂತೆ ನನಗೂ ಆರ್‌ಎಸ್‌ಎಸ್‌ ಬಗ್ಗೆ ಭಯ ಇದೆ. ಮೀಸಲಾತಿ, ಭೂಸುಧಾರಣೆಯಂತಹ ಬಹಸಂಖ್ಯೆಯ ಹಿಂದೂಗಳೇ ಫಲಾನುಭವಿಗಳಾಗಿರುವ ಸಾಮಾಜಿಕ ನ್ಯಾಯದ ಕಾನೂನುಗಳನ್ನೇ ವಿರೋಧಿಸುವ ಆರ್‌ಎಸ್‌ಎಸ್‌ ಬಗ್ಗೆ ಭಯವಲ್ಲದೆ ಪ್ರೀತಿ ಇರಲು ಸಾಧ್ಯವೇ? ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ತಮ್ಮ ಮಕ್ಕಳಿಗೆ ದೇಶ-ವಿದೇಶದಲ್ಲಿ ಉನ್ನತ ಶಿಕ್ಷಣ ಕೊಡಿಸಿ, ದಲಿತ, ಹಿಂದುಳಿದ ಸಮುದಾಯದ ಬಡವರ ಮಕ್ಕಳನ್ನು ಹಿಂಸಾಚಾರಕ್ಕೆ ಇಳಿಸಿ ಜೈಲಿಗೆ ಅಟ್ಟುವ ಆರ್‌ಎಸ್ಎಸ್‌ ಬಗ್ಗೆ ಭಯ ಸಹಜ ಅಲ್ಲವೇ ಸದಾನಂದಗೌಡ ಅವರೇ? ಯಾವುದೇ ವ್ಯಕ್ತಿ-ಸಿದ್ಧಾಂತ-ಸಂಸ್ಥೆ ಇತರರಲ್ಲಿ ಗೌರವ ಹುಟ್ಟಿಸಬೇಕೇ ಹೊರತು ಭಯ ಹುಟ್ಟಿಸುವುದಲ್ಲ. ಈ ಬಗ್ಗೆ ಅತ್ಮಾವಲೋಕನ ಮಾಡಬೇಕಾದವರು ಭಯವನ್ನು ಉತ್ಪಾದಿಸುವವರೇ ಹೊರತು ಭಯ ಹರಡುವವರಲ್ಲ. ಆರ್‌ಎಸ್ಎಸ್‌ ಉನ್ನತ ಪದಾಧಿಕಾರ ಯಾಕೆ ಒಂದು ಜಾತಿಗೆ ಸೀಮಿತವಾಗಿದೆ? ಯಾಕೆ ಅಲ್ಲಿ ಹಿಂದುಗಳೇ ಆಗಿರುವ ದಲಿತ ಮತ್ತು ಹಿಂದುಳಿದ ಜಾತಿಗಳಿಲ್ಲ? ಎನ್ನುವ ನನ್ನ ಸರಳ ಪ್ರಶ್ನೆಗೆ ಯಾಕೆ, ಯಾರೂ ಉತ್ತರಿಸುತ್ತಿಲ್ಲ? ಎಂದು ಪ್ರಶ್ನಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.