ಬೆಂಗಳೂರು: ದಕ್ಷಿಣ ಕನ್ನಡದಲ್ಲಿ ಸಾಕಿದ ಕರು ತೆಗೆದುಕೊಂಡು ಹೋಗುತ್ತಿದ್ದ ಮಹಿಳೆ ಮೇಲೆ ಬಜರಂಗದಳ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಟ್ವೀಟ್ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬಜರಂಗ ದಳದ ಕಾರ್ಯಕರ್ತರು ಮಹಿಳೆ ಮೇಲೆ ಹಲ್ಲೆ ಮಾಡಿ, ಕಿರುಕುಳ ನೀಡಿರುವ ವರದಿಗಳನ್ನು ಕೇಳಿ ಅತೀವ ಬೇಸರವಾಗಿದೆ. ಬಜರಂಗದಳದ ಕಾರ್ಯಕರ್ತರು ರಣಹದ್ದುಗಳ ರೀತಿ ವರ್ತಿಸುತ್ತಿದ್ದಾರೆ. ಸುದ್ದಿಗೆ ಬರಲು ಅಮಾಯಕ ಜನರ ಮೇಲೆ ದಾಳಿ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಹಲ್ಲೆಕೋರರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲು ಪೊಲೀಸರು ಮಿನಾಮೇಷ ಎಣಿಸುತ್ತಿದ್ದಾರೆ ಎಂಬ ವರದಿಗಳ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ಅವರು, ಕರ್ನಾಟಕ ಪೊಲಿಸರು ಸಾಮಾನ್ಯ ಜನರಶಶಶ ಪರ ಕೆಲಸ ಮಾಡುತ್ತಿದ್ದಾರಾ? ಅಥವಾ ಬಿಜೆಪಿ ಮತ್ತು ಅವರ ಗೂಂಡಾಗಳಿಗಾಗಿ ಕೆಲಸ ಮಾಡುತ್ತಿದ್ದಾರಾ? ಎಂದು ಕಿಡಿ ಕಾರಿದ್ದಾರೆ.
ಕರ್ನಾಟಕ ರಾಜ್ಯದ ಅನುಕೂಲಕ್ಕಾಗಿ ಗೃಹ ಸಚಿವ ಅರಗ ಜ್ಞಾನೇಂದ್ರ ರಾಜೀನಾಮೆಗೆ ಒತ್ತಾಯಿಸುತ್ತೇನೆ. ಬಿಜೆಪಿಯು ನಕಲಿ ಚೌಕಿದಾರರಿಂದ ತುಂಬಿಕೊಂಡಿದೆ. ಕರ್ನಾಟಕ ಉತ್ತರ ಪ್ರದೇಶದ ರೀತಿ ಆಗುವುದನ್ನು ತಡೆಯಬೇಕಿದೆ ಎಂದು ಅವರು ಹೇಳಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.