ADVERTISEMENT

ಬಿಜೆಪಿ ನಾಟಕ ಮಂಡಳಿಯ ಕಾಮಿಡಿ ಪಾತ್ರ ನಳಿನ್ ಕುಮಾರ್ ಕಟೀಲ್: ಸಿದ್ದರಾಮಯ್ಯ ಲೇವಡಿ

ಕನಿಷ್ಠ ಜ್ಞಾನ ಇಲ್ಲದ ಸಂಸದ ಎಂದು ಟೀಕೆ

​ಪ್ರಜಾವಾಣಿ ವಾರ್ತೆ
Published 9 ಸೆಪ್ಟೆಂಬರ್ 2019, 10:04 IST
Last Updated 9 ಸೆಪ್ಟೆಂಬರ್ 2019, 10:04 IST
ಸಿದ್ದರಾಮಯ್ಯ ಮತ್ತು ನಳಿನ್ ಕುಮಾರ್ ಕಟೀಲ್
ಸಿದ್ದರಾಮಯ್ಯ ಮತ್ತು ನಳಿನ್ ಕುಮಾರ್ ಕಟೀಲ್   

ಬೆಂಗಳೂರು:ಶಾಸಕ ಡಿ.ಕೆ.ಶಿವಕುಮಾರ್ಬಂಧನಕ್ಕೆ ಸಂಬಂಧಿಸಿ ತಮ್ಮ ವಿರುದ್ಧ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ನೀಡಿರುವ ಹೇಳಿಕೆಗೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕಸಿದ್ದರಾಮಯ್ಯ ಸೋಮವಾರ ತಿರುಗೇಟು ನೀಡಿದ್ದಾರೆ.

‘ರಾಜ್ಯದ ಬಿಜೆಪಿ ನಾಟಕ‌ ಮಂಡಳಿಗೆ ಕಾಮಿಡಿ ಪಾತ್ರದ ಅಗತ್ಯ ಇತ್ತು, ಅದಕ್ಕಾಗಿ ನಳಿನ್ ಕುಮಾರ್ ಕಟೀಲ್ ಅವರನ್ನು ಪಕ್ಷದ ಅಧ್ಯಕ್ಷರನ್ನಾಗಿ ಮಾಡಿದ್ದಾರೆ. ಅವರನ್ನು ಅವರ ಪಕ್ಷದವರೂ ಸೇರಿದಂತೆ ಯಾರೂ ಗಂಭೀರವಾಗಿ ಪರಿಗಣಿಸುತ್ತಿಲ್ಲ. ಆದ್ದರಿಂದ ಬಾಯಿಗೆ ಬಂದ ಹಾಗೆ ಮಾತನಾಡುತ್ತಿದ್ದಾರೆ’ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

‘ಒಬ್ಬ ಸಂಸದರಿಗೆ, ಅದರಲ್ಲೂ ಒಂದು ರಾಷ್ಟ್ರೀಯ ಪಕ್ಷದ ರಾಜ್ಯಾಧ್ಯಕ್ಷರಿಗೆ ಇ.ಡಿ, ಐ.ಟಿ ಇಲಾಖೆ ಯಾರ ಅಧೀನದಲ್ಲಿ ಬರುತ್ತದೆ ಎಂಬ ಕನಿಷ್ಠ ಜ್ಞಾನವಾದರೂ ಬೇಡವೇ? ಇದುವರೆಗೂ ಬಿಜೆಪಿ ಬೇರೆ ಬೇರೆ ಕೋಮುಗಳ ನಡುವೆ ಬೆಂಕಿಹಚ್ಚಿ ತನ್ನ ಸ್ವಾರ್ಥ ಸಾಧಿಸಿಕೊಳ್ಳುತ್ತಿತ್ತು, ಈಗ ತನ್ನ ಎದುರಾಳಿ ನಾಯಕರ ನಡುವೆ ಹುಳಿ ಹಿಂಡುವ ಹೀನ ಕಾರ್ಯಕ್ಕೆ ಇಳಿದಿದೆ’ ಎಂದು ಸಿದ್ದರಾಮಯ್ಯ ಟೀಕಿಸಿದ್ದಾರೆ.

ADVERTISEMENT

‘ಡಿ.ಕೆ.ಶಿವಕುಮಾರ್ ರಾಜಕೀಯವಾಗಿ ಬೆಳೆಯುತ್ತಾರೆ ಎಂಬ ಕಾರಣಕ್ಕೆ ಸಿದ್ದರಾಮಯ್ಯ ದ್ವೇಷದ ರಾಜಕಾರಣ ಮಾಡಿದ್ದಾರೆ.2017ರಲ್ಲಿ ಶಿವಕುಮಾರ್ ಮನೆ, ಕಚೇರಿಗಳ ಮೇಲೆ ಆದಾಯ ತೆರಿಗೆ (ಐಟಿ) ದಾಳಿ ಆದಾಗ ಕಾಂಗ್ರೆಸ್ ಸರ್ಕಾರವೇ ಅಧಿಕಾರದಲ್ಲಿ ಇತ್ತು. ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ ಆಗಿದ್ದರು. ಅವರು ಮನಸ್ಸು ಮಾಡಿದ್ದರೆ ಆಗ ಐಟಿ ದಾಳಿ ತಡೆಯಬಹುದಿತ್ತು’ ಎಂದು ಬಾಗಲಕೋಟೆಯಲ್ಲಿ ಭಾನುವಾರ ನಳಿನ್ ಹೇಳಿದ್ದರು.

ಯಡಿಯೂರಪ್ಪ ವಿರುದ್ಧವೂ ಟೀಕೆ

ಬಿ.ಎಸ್‌.ಯಡಿಯೂರಪ್ಪ ನೇತೃತ್ವದ ರಾಜ್ಯಸರ್ಕಾರದ ಕಾರ್ಯವೈಖರಿಯನ್ನೂ ಕಟುವಾಗಿ ಟೀಕಿಸಿರುವ ಸಿದ್ದರಾಮಯ್ಯ ಸರಣಿ ಟ್ವೀಟ್ ಮಾಡಿದ್ದಾರೆ.

‘ನಮ್ಮ ಸರ್ಕಾರದ ಜನಪರ ಯೋಜನೆಗಳನ್ನು ಸ್ಥಗಿತಗೊಳಿಸಲು ಯಡಿಯೂರಪ್ಪನವರುಹೊಸ ತಂತ್ರಗಳ ಹುಡುಕಾಟದಲ್ಲಿದ್ದಾರೆ. ತನಿಖಾ ಪ್ರಹಸನ ಇದರಲ್ಲೊಂದು. ತನಿಖೆಯನ್ನು ಬೇಡ ಎನ್ನುವುದಿಲ್ಲ, ತನಿಖೆಯ ನೆಪದಲ್ಲಿ ಯೋಜನೆಗಳನ್ನು ನಿಲ್ಲಿಸಿದರೆ ಬೀದಿಗಿಳಿಯುವ ಜನರ ಜತೆ ನಾನೂ ಇರುತ್ತೇನೆ ಎನ್ನುವುದು ತಿಳಿದಿರಲಿ’ ಎಂದು ಇನ್ನೊಂದು ಟ್ವೀಟ್‌ನಲ್ಲಿ ಎಚ್ಚರಿಕೆ ನೀಡಿದ್ದಾರೆ.

‘ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆದ ದಿನದಿಂದ ವರ್ಗಾವಣೆ ಮತ್ತು ದ್ವೇಷ ರಾಜಕಾರಣ ಬಿಟ್ಟು ಬೇರೇನೂ ಮಾಡುತ್ತಿಲ್ಲ. ಪ್ರವಾಹದಿಂದ ಎಲ್ಲವನ್ನೂ ಕಳೆದುಕೊಂಡವರ ಬದುಕು ಬೀದಿಗೆ ಬಂದಿದೆ, ಈಶ್ವರಪ್ಪನವರು ಈ ನಿರಾಶ್ರಿತರಿಗೆ ಹತ್ತು ಸಾವಿರ ರೂಪಾಯಿ ಕೊಟ್ಟಿರುವುದೇ ಹೆಚ್ಚು ಎನ್ನುತ್ತಾರೆ. ಇಂಥವರಿಗೆ ಜನರ ಬಗ್ಗೆ ಕಾಳಜಿ, ಕರುಣೆ ಏನಾದರೂ ಇದೆಯೇ?’ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

‘ನಮ್ಮ ಸರ್ಕಾರದ ಅವಧಿಯ 5 ಯೋಜನೆಗಳನ್ನು ಯಡಿಯೂರಪ್ಪ ಅವರು ತನಿಖೆಗೆ ಒಳಪಡಿಸುತ್ತಿರುವುದು ಬಹಳ ಸಂತೋಷ. ಬೆಟ್ಟ ಅಗೆದು ಇಲಿ ಹಿಡಿಯುವುದಿದ್ದರೆ ನಾವ್ಯಾಕೆ ಬೇಡ ಎನ್ನಲಿ! ಇದು ತಮ್ಮ ಆಡಳಿತ ವೈಫಲ್ಯವನ್ನು ಮುಚ್ಚಿಹಾಕಲು ಪ್ರಾರಂಭಿಸಿರುವ ಹೊಸ ನಾಟಕ ಎನ್ನುವುದನ್ನು ಅರಿಯದಷ್ಟು ರಾಜ್ಯದಜನ ಮುಗ್ಧರಲ್ಲ’ ಎಂದೂ ಅವರು ಟ್ವೀಟ್ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.