ಬೆಂಗಳೂರು: ಚಳಿಗಾಲದ ಅಧಿವೇಶವನ್ನುಬೆಳಗಾವಿ ಸುವರ್ಣ ಸೌಧದ ಬದಲಿಗೆ ಬೆಂಗಳೂರಿನ ವಿಧಾನಸೌಧದಲ್ಲಿ ನಡೆಸುವ ಬಿಜೆಪಿ ಸರ್ಕಾರದ ನಿರ್ಧಾರಕ್ಕೆ ವಿರೋಧ ವ್ಯಕ್ತಪಡಿಸಿರುವ ಮಾಜಿ ಸಿಎಂ ಸಿದ್ದರಾಮಯ್ಯ, ಸಂಪ್ರದಾಯದಂತೆ ಬೆಳಗಾವಿಯಲ್ಲೇ ಅಧಿವೇಶನ ನಡೆಸುವಂತೆ ಒತ್ತಾಯಿಸಿದ್ದಾರೆ.
ಈ ಕುರಿತು ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಪತ್ರ ಬರೆದಿರುವ ಅವರು, ‘ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳ ಬಗ್ಗೆ ಗಮನ ಸೆಳೆಯುವ ಉದ್ದೇಶದಿಂದಲೇ ನಿರ್ಮಿಸಿರುವ ಬೆಳಗಾವಿಯ ಸುವರ್ಣಸೌಧದ ಬದಲಾಗಿ ಬೆಂಗಳೂರಿನಲ್ಲಿ ಅಧಿವೇಶನ ನಡೆಸಬೇಕೆಂದು ರಾಜ್ಯ ಸರ್ಕಾರ ತೀರ್ಮಾನಿಸಿರುವುದು ಸರಿಯಲ್ಲ. ಬೆಳಗಾವಿಯಲ್ಲೇ ಅಧಿವೇಶನ ನಡೆಸುವುದರಿಂದ ನೆರೆ ಪರಿಹಾರ ಕಾರ್ಯಗಳು ಸಹ ಚುರುಕಾಗುತ್ತವೆ. ಹೀಗಾಗಿ ಬೆಳಗಾವಿಯಲ್ಲಿಯೇ ಈ ಬಾರಿಯ ಚಳಿಗಾಲದ ಅಧಿವೇಶನ ನಡೆಸಬೇಕೆಂದು ರಾಜ್ಯ ಸರ್ಕಾರವನ್ನು ಆಗ್ರಹಿಸುತ್ತೇನೆ,’ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ರಾಜ್ಯದಲ್ಲಿ ಎದುರಾಗಿರುವ ನೆರೆ ಹೆಚ್ಚಾಗಿ ಬಾಧಿಸಿರುವುದು ಬೆಳಗಾವಿಯನ್ನೇ. ಇತ್ತಕೇಂದ್ರ ಸರ್ಕಾರ ಈವರೆಗೂ ನೆರೆ ಪರಿಹಾರ ಘೋಷಿಸದೇ ಇರುವ ಕಾರಣ ಬೆಳಗಾವಿಯಲ್ಲಿ ಅಧಿವೇಶನ ನಡೆಸಿದರೆ ಸರ್ಕಾರ ಇಕ್ಕಟ್ಟಿಗೆ ಸಿಕ್ಕಿ ಹಾಕಿಕೊಳ್ಳುತ್ತದೆ. ಜನರ ಆಕ್ರೋಶವನ್ನು ಎದುರಿಸುವುದು ಕಷ್ಟವಾಗುತ್ತದೆ. ವಿರೋಧ ಪಕ್ಷಗಳು ಇದೇ ಅಸ್ತ್ರವನ್ನು ಬಳಸಿ ಹೋರಾಟ ರೂಪಿಸುವ ಸಾಧ್ಯತೆಯೂ ಇದೆ. ಚಳಿಗಾಲದ ಅಧಿವೇಶನವನ್ನು ಬೆಳಗಾವಿ ಬದಲಿಗೆ ಬೆಂಗಳೂರಿನಲ್ಲೇ ನಡೆಸಲು ಸರ್ಕಾರ ನಿರ್ಧರಿಸಿತ್ತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.