ADVERTISEMENT

‘ಮೋದಿ ಕಂಡರೆ ಯಡಿಯೂರಪ್ಪಗೆ ಹೆದರಿಕೆಯೇ?’

ಸಿದ್ದರಾಮಯ್ಯ ಪ್ರಶ್ನೆ

​ಪ್ರಜಾವಾಣಿ ವಾರ್ತೆ
Published 17 ಆಗಸ್ಟ್ 2019, 20:00 IST
Last Updated 17 ಆಗಸ್ಟ್ 2019, 20:00 IST
ಸಿದ್ದರಾಮಯ್ಯ
ಸಿದ್ದರಾಮಯ್ಯ   

ಬೆಂಗಳೂರು: ‘ಮುಖ್ಯಮಂತ್ರಿ ಯಡಿಯೂರಪ್ಪ ಅವರು ಪ್ರಧಾನಮಂತ್ರಿ ಜತೆ ಮಾತನಾಡಲು ಹೆದರುತ್ತಾರೋ ಏನೋ. ಅವರಿಗೆ ಭಯವಿದ್ದರೆ ಸರ್ವಪಕ್ಷ ನಿಯೋಗವನ್ನು ಕರೆದೊಯ್ಯಲಿ ಆಗ ನಾವೇ ಮಾತನಾಡುತ್ತೇವೆ’ ಎಂದು ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.

‘ಇಷ್ಟು ನಿರ್ಲಜ್ಜ ಸರ್ಕಾರವನ್ನು ನಾನು ನೋಡಿಲ್ಲ. ರಾಜ್ಯದಲ್ಲಿ ಮಳೆ– ಪ್ರವಾಹದಿಂದ ಆಗಿರುವ ಅನಾಹುತಗಳ ಬಗ್ಗೆ ಚರ್ಚಿಸಲು ಕೂಡಲೇ ವಿಧಾನಮಂಡಲ ಅಧಿವೇಶನ ಕರೆಯಬೇಕು’ ಎಂದು ಅವರು ಶನಿವಾರ ಮಾಧ್ಯಮಗೋಷ್ಠಿಯಲ್ಲಿ ಆಗ್ರಹಿಸಿದರು.

‘ಪ್ರಜಾಪ್ರಭುತ್ವಕ್ಕೆ ವಿರೋಧಿಯಾದ ರೀತಿಯಲ್ಲಿ ಸರ್ಕಾರ ರಚನೆ ಮಾಡಿದ್ದಾರೆ. ಈ ಸರ್ಕಾರಕ್ಕೆ ಯಾವುದೇ ತತ್ವ ಸಿದ್ಧಾಂತಗಳಿಲ್ಲ. ಕಣ್ಣೂ ಇಲ್ಲ ಕಿವಿಯೂ ಇಲ್ಲ. ಪ್ರಧಾನಮಂತ್ರಿಗಳು ರಾಜ್ಯದ ಪ್ರವಾಹದ ಬಗ್ಗೆ ಒಂದೇ ಒಂದು ಮಾತು ಆಡಿಲ್ಲ. ಯಾವ ಪ್ರಧಾನಿಯೂ ರಾಜ್ಯವನ್ನು ನಿರ್ಲಕ್ಷಿಸಿರಲಿಲ್ಲ. ಆರು ಲಕ್ಷ ಹೆಕ್ಟೇರ್‌ ಪ್ರದೇಶದಲ್ಲಿ ಬೆಳೆ ನಾಶ ಆಗಿದೆ. ಒಟ್ಟಾರೆ ₹1 ಲಕ್ಷ ಕೋಟಿ ನಷ್ಟ
ಆಗಿದೆ. ಕೇಂದ್ರ ಸರ್ಕಾರ ಕೂಡಲೇ 5 ಸಾವಿರ ಕೋಟಿ ನೆರವು ಪ್ರಕಟಿಸಬೇಕು’ ಎಂದು ಸಿದ್ದರಾಮಯ್ಯ ಆಗ್ರಹಿಸಿದರು.

ADVERTISEMENT

‘ಯಡಿಯೂರಪ್ಪ ಅವರು ಬಹಳ ಮಾತನಾಡುತ್ತಾರೆ. ಆದರೆ, ಪರಿಹಾರಕ್ಕಾಗಿ ಹಣ ಬಿಡುಗಡೆ ಮಾಡುವಂತೆ ಏಕೆ ಒತ್ತಡ ಹೇರುತ್ತಿಲ್ಲ. ಪ್ರವಾಹ ಪೀಡಿತ ಪ್ರದೇಶಗಳಿಗೆ ಕೇಂದ್ರದಿಂದ ಇವತ್ತಿನವರೆಗೂ ಒಂದು ರೂಪಾಯಿ ಬಿಡುಗಡೆ ಮಾಡಿಲ್ಲ. ಪ್ರಧಾನಿಯವರೇ ಸ್ವತಃ ರಾಜ್ಯಕ್ಕೆ ಭೇಟಿ ನೀಡಬೇಕಿತ್ತು. ಇಬ್ಬರು ಸಚಿವರನ್ನು ಕಳಿಸಿದ್ದೇವೆ ಎನ್ನುತ್ತಾರೆ. ಅವರೇನಾದ್ರೂ ಪರಿಹಾರ ಘೋಷಿಸಿದ್ದಾರಾ? ಈವರೆಗೆ ಎಷ್ಟು ನಷ್ಟ ಆಗಿದೆ ಎಂಬ ವರದಿಯನ್ನೂ ಕಳುಹಿಸಿಲ್ಲ’ ಎಂದ ಅವರು ಹರಿಹಾಯ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.