ಬೆಂಗಳೂರು: ರಾಜ್ಯದ ಇತಿಹಾಸದಲ್ಲಿ ಮೊದಲ ಬಾರಿಗೆ ಜಿಲ್ಲಾ ಮಂತ್ರಿಗಳಿಲ್ಲದೆ, ಜಿಲ್ಲಾಧಿಕಾರಿಗಳು ಧ್ವಜಾರೋಹಣ ಮಾಡಿದ್ದಾರೆ. ಕರ್ನಾಟಕದಲ್ಲಿ ಪ್ರಜಾಪ್ರಭುತ್ವ ಇನ್ನೂ ಇದೆಯೇ? ಎಂದು ಟ್ವೀಟ್ ಮಾಡುವ ಮೂಲಕ ಮಾಜಿ ಮುಖ್ಯಮಂತ್ರಿಸಿದ್ದರಾಮಯ್ಯ ರಾಜ್ಯ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ.
ತಾವು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಜಾರಿಗೆ ತರಲಾಗಿದ್ದ ಹಲವು ಯೋಜನೆಗಳಿಗೆ ಈಗಿನ ಸರ್ಕಾರ ಅನುದಾನ ಕಡಿತಗೊಳಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿರುವ ಅವರು, ಕೇಂದ್ರ ಸರ್ಕಾರ ಕರ್ನಾಟಕದ ವಿಚಾರದಲ್ಲಿ ನಿರ್ಲಕ್ಷ ಧೋರಣೆ ತಳೆದಿದೆ ಎಂದು ದೂರಿದ್ದಾರೆ.
ಯಡಿಯೂರಪ್ಪನವರದು ಜಾಸ್ತಿ ಮಾತನಾಡುತ್ತಾರೆ. ಕೇಂದ್ರದ ಮೇಲೆ ಏಕೆ ಒತ್ತಡ ಹೇರುತ್ತಿಲ್ಲ? ಪ್ರವಾಹ ಪೀಡಿತ ಪ್ರದೇಶಗಳಿಗೆ ಕೇಂದ್ರದಿಂದ ಇವತ್ತಿನವರೆಗೂ ಒಂದು ರೂಪಾಯಿ ನೀಡಿಲ್ಲ. ಪ್ರಧಾನಿಗಳೇ ಸ್ವತಃ ರಾಜ್ಯಕ್ಕೆ ಭೇಟಿ ನೀಡಬೇಕಿತ್ತು. ಇಬ್ಬರು ಸಚಿವರನ್ನ ಕಳುಹಿಸಿದ್ದೇವೆ ಅಂತಾರೆ. ಅವರೇನಾದ್ರೂ ಪರಿಹಾರ ಘೋಷಿಸಿದ್ದಾರಾ? ಎಂದು ಪ್ರಶ್ನಿಸಿದ್ದಾರೆ.
ಯಡಿಯೂರಪ್ಪನವರು ಪ್ರವಾಹ ಪರಿಸ್ಥಿತಿಯ ಬಗ್ಗೆ ಚರ್ಚಿಸಲು ವಿಧಾನ ಮಂಡಲ ಅಧಿವೇಶನ ಕರೆಯಬೇಕು. ಸರ್ಕಾರ ಕೂಡಲೇ ಬರ ಪ್ರದೇಶಗಳನ್ನು ಘೋಷಿಸಿ, ಅಗತ್ಯ ಪ್ರಮಾಣದ ಅನುದಾನ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ.
ಮುಂದುವರಿದು,ಯಡಿಯೂರಪ್ಪನವರು ಪ್ರಧಾನಿ ಅವರಿಗೆ ತುಂಬಾ ಹೆದರುತ್ತಾರೆ ಎಂದಿರುವ ಸಿದ್ದರಾಮಯ್ಯ, ಅವರಿಗೆ ಭಯವಿದ್ದರೆ ಸರ್ವ ಪಕ್ಷ ನಿಯೋಗವನ್ನಾದರೂ ಕರೆದುಕೊಂಡು ಹೋಗಲಿ. ಪ್ರಧಾನಿಯವರ ಬಳಿ ನಾವೇ ಮಾತಾಡುತ್ತೇವೆ ಎಂದು ಹೇಳಿದ್ದಾರೆ.
ಸಿದ್ದರಾಮಯ್ಯ ಮಾಡಿರುವ ಸರಣಿ ಟ್ವೀಟ್ಗಳು ಇಲ್ಲಿವೆ
______
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.