ADVERTISEMENT

ಮಡಿಕೇರಿ ಶಾಲಾ ಆವರಣದಲ್ಲಿ ಯುವಜನರಿಗೆ ಶಸ್ತ್ರಾಸ್ತ್ರ ತರಬೇತಿ: ಸಿದ್ದರಾಮಯ್ಯ ಕಿಡಿ

​ಪ್ರಜಾವಾಣಿ ವಾರ್ತೆ
Published 16 ಮೇ 2022, 16:26 IST
Last Updated 16 ಮೇ 2022, 16:26 IST
ಸಿದ್ದರಾಮಯ್ಯ
ಸಿದ್ದರಾಮಯ್ಯ   

ಬೆಂಗಳೂರು: ಮಡಿಕೇರಿಯ ಶಾಲಾ ಆವರಣದಲ್ಲಿ ಯುವಜನರಿಗೆ ಶಸ್ತ್ರಾಸ್ತ್ರ ತರಬೇತಿ ನೀಡಿರುವ ಬಜರಂಗದಳ ಕಾನೂನಿಗೆ ಬಹಿರಂಗ ಸವಾಲು ಹಾಕಿದೆ. ಸಂಘಟನೆಯ ನಾಯಕರ ವಿರುದ್ಧ ಕ್ರಮ ಕೈಗೊಳ್ಳದ ಸರ್ಕಾರ ಜೀವಂತ ಇದೆಯೇ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಬಂದೂಕು ಬಳಕೆಯ ತರಬೇತಿ ನೀಡಿದರೂ ಕ್ರಮ ಜರುಗಿಸದೇ ಇರುವುದನ್ನು ನೋಡಿದರೆ ರಾಜ್ಯದಲ್ಲಿ ಗೃಹ ಮತ್ತು ಶಿಕ್ಷಣ ಸಚಿವರಿದ್ದಾರೆಯೇ ಎಂಬ ಅನುಮಾನ ಬರುತ್ತದೆ ಎಂದಿದ್ದಾರೆ.

ಬಜರಂಗ ದಳ ನಡೆಸಿದ ಶೌರ್ಯ ಪ್ರಶಿಕ್ಷಣ ವರ್ಗದಲ್ಲಿ ಶಾಸಕರಾದ ಅಪ್ಪಚ್ಚು ರಂಜನ್, ಕೆ.ಜಿ.ಬೋಪಯ್ಯ ಮತ್ತು ಸುಜಾ ಕುಶಾಲಪ್ಪ ಪಾಲ್ಗೊಂಡಿದ್ದಾರೆ. ಇವರ ಬದ್ಧತೆ ಸಂವಿಧಾನಕ್ಕೋ? ಬಜರಂಗ ದಳಕ್ಕೋ? ಎಂದು ಅವರು ಕುಟುಕಿದ್ದಾರೆ.

ADVERTISEMENT

ಶಸ್ತ್ರಾಸ್ತ್ರ ತರಬೇತಿ‌‌ ಸಂಪೂರ್ಣವಾಗಿ ಕಾನೂನು ವಿರೋಧಿ ಚಟುವಟಿಕೆಯಾಗಿದ್ದು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ತಕ್ಷಣ ಬಜರಂಗ ದಳದ ನಾಯಕರನ್ನು ಬಂಧಿಸಲು ಸೂಚಿಸಬೇಕು ಎಂದು ಆಗ್ರಹಿಸಿದ್ದಾರೆ.

ಅಕ್ರಮ ಚಟುವಟಿಕೆಗಳಲ್ಲಿ ತೊಡಗಿರುವ ಶ್ರೀರಾಮ ಸೇನೆ, ಬಜರಂಗ ದಳ, ಹಿಂದೂ ಜಾಗರಣ ವೇದಿಕೆ ಮೊದಲಾದ ಸಂಘಟನೆಗಳ‌ ಜೊತೆ ತನ್ನ ಸಂಬಂಧ ಏನು ಎಂಬುದನ್ನು ಬಿಜೆಪಿ‌ ಮೊದಲು ಸ್ಪಷ್ಟಪಡಿಸಬೇಕು. ರಾಜ್ಯದಲ್ಲಿ ಶಾಂತಿ ಕದಡಿ ಭೀತಿ ಹುಟ್ಟಿಸುವ ಉದ್ದೇಶದಿಂದ ಬಿಜೆಪಿ ಸರ್ಕಾರ ಕೋಮು‌ವಾದಿ ಸಂಘಟನೆಗಳಿಗೆ ವಿಶೇಷ ಅನುಮತಿ ನೀಡಿದೆಯೇ ಎಂದವರು ಕೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.