ಬೆಂಗಳೂರು: ಸೈಲೆಂಟ್ ಸುನಿಲ್ ಮತ್ತು ಬಿಜೆಪಿಗೆ ಯಾವುದೇ ಸಂಬಂಧವಿಲ್ಲ ಎಂದು ರಾಜ್ಯ ಪ್ರಧಾನ ಕಾರ್ಯದರ್ಶಿ ಅಶ್ವತ್ಥನಾರಾಯಣ್ ಅವರು ತಿಳಿಸಿದ್ದಾರೆ.
ಈ ಬಗ್ಗೆ ಶನಿವಾರ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಲಾಗಿದ್ದು, ಸೈಲೆಂಟ್ ಸುನಿಲ್, ಬಿಜೆಪಿ ಸದಸ್ಯತ್ವ ಪಡೆದಿದ್ದರೆ ಅದನ್ನು ರದ್ದು ಮಾಡಲಾಗುವುದು. ಅವರು ಪಾರ್ಟಿ ಹೆಸರಿನಲ್ಲಿ ಪ್ರಚಾರ ಮಾಡುತ್ತಿದ್ದರೆ, ಅದಕ್ಕೂ ನಮಗೂ ಸಂಬಂಧವಿಲ್ಲ‘ ಎಂದು ಸ್ಪಷ್ಟಪಡಿಸಿದ್ದಾರೆ.
ಹಲವು ಪ್ರಕರಣಗಳಲ್ಲಿ ಸಿಸಿಬಿ ಪೊಲೀಸರಿಗೆ ಸಿಗದೇ ತಲೆಮರೆಸಿಕೊಂಡಿದ್ದ ರೌಡಿ ಸೈಲೆಂಟ್ ಸುನೀಲ್, ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಇತ್ತೀಚೆಗೆ ಆಯೋಜಿಸಿದ್ದ ರಕ್ತದಾನ ಶಿಬಿರದಲ್ಲಿ ಬಿಜೆಪಿ ಮುಖಂಡರ ಜೊತೆ ಪ್ರತ್ಯಕ್ಷನಾಗಿದ್ದ. ಈ ಕಾರ್ಯಕ್ರಮದ ವಿಡಿಯೊ ಹಾಗೂ ಫೋಟೊಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿದ್ದವು. ವಿಪಕ್ಷಗಳು ಬಿಜೆಪಿಯನ್ನು ತೀವ್ರವಾಗಿ ತರಾಟೆಗೆದುಕೊಂಡಿದ್ದವು.
17 ಪ್ರಕರಣಗಳಲ್ಲಿ ಆರೋಪಿ
‘ಬೆಕ್ಕಿನ ಕಣ್ಣು ರಾಜೇಂದ್ರ ಕೊಲೆ ಸೇರಿ 17 ಪ್ರಕರಣಗಳಲ್ಲಿ ಆರೋಪಿ ಆಗಿದ್ದ ಸೈಲೆಂಟ್ ಸುನೀಲ್ನ ಹೆಸರು ಹಲವು ಠಾಣೆಗಳ ರೌಡಿಪಟ್ಟಿಯಲ್ಲಿದೆ. ತಮ್ಮ ವಿರುದ್ಧದ 17 ಪ್ರಕರಣಗಳಿಗೂ ಸುನೀಲ್, ನ್ಯಾಯಾಲಯದಿಂದ ತಡೆಯಾಜ್ಞೆ ತಂದಿದ್ದಾನೆ. ಯಾವುದೇ ವಾರಂಟ್ಗಳು ಬಾಕಿ ಇಲ್ಲ. ಬಿಬಿಎಂಪಿ ಕಸ ಸಾಗಣೆ ಹಾಗೂ ಇತರೆ ಕೆಲಸಗಳಲ್ಲಿ ತೊಡಗಿಸಿಕೊಂಡು ಹಣ ಮಾಡುತ್ತಿದ್ದಾನೆ. ಈಗ ಬಿಜೆಪಿ ಸೇರಿ ರಾಜಕೀಯಕ್ಕೆ ಬರಲು ಯೋಚಿಸುತ್ತಿದ್ದಾನೆ’ ಎಂದು ಸಿಸಿಬಿ ಮೂಲಗಳು ಹೇಳಿದ್ದವು.
ಇವುಗಳನ್ನೂ ಓದಿ
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.