ADVERTISEMENT

ಎಚ್‌ಡಿಕೆ ವಿರುದ್ಧದ ಎಸ್ಐಟಿ ತನಿಖೆಗೆ ದಾರಿ

ಜಂತಕಲ್ ಗಣಿಗಾರಿಕೆ ಪ್ರಕರಣ: ಹೈಕೋರ್ಟ್ ಆದೇಶ

​ಪ್ರಜಾವಾಣಿ ವಾರ್ತೆ
Published 28 ಮಾರ್ಚ್ 2025, 16:16 IST
Last Updated 28 ಮಾರ್ಚ್ 2025, 16:16 IST
ಹೈಕೋರ್ಟ್‌
ಹೈಕೋರ್ಟ್‌   

ಬೆಂಗಳೂರು: ‘ಲೋಕಾಯುಕ್ತ ಎಡಿಜಿಪಿ ಮತ್ತು ಎಸ್‌ಐಟಿ ಮುಖ್ಯಸ್ಥ ಎಂ.ಚಂದ್ರಶೇಖರ್‌ ದೂರು ಆಧರಿಸಿ ದಾಖಲಾದ ಎಫ್‌ಐಆರ್‌ಗೆ ಸಂಬಂಧಿಸಿದಂತೆ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಮತ್ತಿತರರ ವಿರುದ್ಧ ಯಾವುದೇ ರೀತಿಯ ಬಲವಂತದ ಕ್ರಮ ಕೈಗೊಳ್ಳಬಾರದು’ ಎಂಬ ಏಕಸದಸ್ಯ ನ್ಯಾಯಪೀಠದ ಮಧ್ಯಂತರ ಆದೇಶಕ್ಕೆ ಹೈಕೋರ್ಟ್‌ನ ಮತ್ತೊಂದು ನ್ಯಾಯಪೀಠ ತಡೆ ನೀಡಿದೆ.

‘ಸಾಯಿ ವೆಂಕಟೇಶ್ವರ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಮಂಜೂರಾಗಿರುವ ನಿರೀಕ್ಷಣಾ ಜಾಮೀನು ರದ್ದುಗೊಳಿಸುವಂತೆ ಕೋರಬಾರದು. ಈಗಾಗಲೇ ರದ್ದು‍ಪಡಿಸುವಂತೆ ಕೋರಿದ್ದರೆ ಅದರಲ್ಲಿ ಮುಂದುವರಿಯದಂತೆ ಪ್ರಾಸಿಕ್ಯೂಷನ್‌ ಅನ್ನು ನಿರ್ಬಂಧಿಸಲಾಗಿದೆ ಎಂಬ ಏಕಸದಸ್ಯ ನ್ಯಾಯಪೀಠದ ಮಧ್ಯಂತರ ಆದೇಶವನ್ನು ಮಾರ್ಪಾಡು ಮಾಡಬೇಕು’ ಎಂದು ಕೋರಿ ಎಸ್‌ಐಟಿ ಮಧ್ಯಂತರ ಅರ್ಜಿ ಸಲ್ಲಿಸಿತ್ತು.

ಈ ಮಧ್ಯಂತರ ಅರ್ಜಿಯನ್ನು, ‘ಶಾಸಕರು–ಸಂಸದರ ವಿರುದ್ಧದ ಕ್ರಿಮಿನಲ್‌ ಪ್ರಕರಣಗಳ ವಿಚಾರಣೆ’ಯ ವಿಶೇಷ ನ್ಯಾಯಪೀಠದ ನ್ಯಾಯಮೂರ್ತಿ ಪ್ರದೀಪ್‌ ಸಿಂಗ್‌ ಯೆರೂರು ಶುಕ್ರವಾರ ವಿಚಾರಣೆ ನಡೆಸಿ, ಸಮನ್ವಯ ನ್ಯಾಯಪೀಠದ 2024ರ ನ.6ರ ಆದೇಶದಲ್ಲಿ ಮಾರ್ಪಾಡು ಮಾಡಿದರು.

ADVERTISEMENT

‘ಲೋಕಾಯುಕ್ತ ದಾಖಲಿಸಿರುವ ಪ್ರಕರಣಕ್ಕೆ ಸಂಬಂಧಿಸಿ ಮಾಡಲಾಗಿರುವ ನಿರ್ಬಂಧದ ಆದೇಶ ಇಂದಿನಿಂದ ಚಾಲ್ತಿಯಲ್ಲಿ ಇರುವುದಿಲ್ಲ. ಎಸ್‌ಐಟಿ 2014ರಲ್ಲಿ ದಾಖಲಿಸಿರುವ ಜಂತಕಲ್‌ ಗಣಿಗಾರಿಕೆ ಪ್ರಕರಣದ ಭಾಗವಾದ ಸಾಯಿ ವೆಂಟೇಶ್ವರ ಅಕ್ರಮ ಗಣಿಗಾರಿಕೆ ಪ್ರಕರಣದ ಬಗ್ಗೆ ಇನ್ನು ಮುಂದೆ ಮಾತನಾಡುವುದಿಲ್ಲ. ಸಂಜಯನಗರ ಠಾಣೆಯಲ್ಲಿ ದಾಖಲಾಗಿರುವ ಬೆದರಿಕೆ ಪ್ರಕರಣಕ್ಕೆ ಮಾತ್ರವೇ ಸೀಮಿತವಾಗಿ ಮಾತನಾಡಲಾಗುವುದು’ ಎಂದು ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ.

ಈ ಹಿನ್ನೆಲೆಯಲ್ಲಿ ಸಾಯಿ ವೆಂಕಟೇಶ್ವರ ಅಕ್ರಮ ಗಣಿಗಾರಿಕೆ ಆರೋಪದ ಪ್ರಕರಣದಲ್ಲಿ ಕುಮಾರಸ್ವಾಮಿ ವಿರುದ್ಧದ ತನಿಖಾ ಪ್ರಕ್ರಿಯೆಗೆ ಎಸ್‌ಐಟಿಗೆ ಇದ್ದ ಅಡ್ಡಿ ನಿವಾರಣೆಯಾದಂತಾಗಿದೆ. ಕುಮಾರಸ್ವಾಮಿ ಪರ ಪದಾಂಕಿತ ಹಿರಿಯ ವಕೀಲ ಹಷ್ಮತ್‌ ಪಾಷ, ಲೋಕಾಯುಕ್ತ ಪರ ವೆಂಕಟೇಶ್ ಅರಬಟ್ಟಿ ಹಾಗೂ ಪ್ರಾಸಿಕ್ಯೂಷನ್‌ ಪರ ರಾಜ್ಯ ಹೆಚ್ಚುವರಿ ಪ್ರಾಸಿಕ್ಯೂಟರ್ ಬಿ.ಎನ್‌.ಜಗದೀಶ್‌ ವಾದ ಮಂಡಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.