ADVERTISEMENT

ಭ್ರಷ್ಟರ ರಕ್ಷಣೆಗೆ ನಿಂತಿರುವ ಮೈತ್ರಿ ಸರ್ಕಾರ: ಸ್ಮೃತಿ ವಾಗ್ದಾಳಿ

ರಾಜ್ಯ ಸರ್ಕಾರದ ವಿರುದ್ಧ ಕೇಂದ್ರ ಸಚಿವೆ ಸ್ಮೃತಿ ಇರಾನಿ ವಾಗ್ದಾಳಿ

​ಪ್ರಜಾವಾಣಿ ವಾರ್ತೆ
Published 31 ಮಾರ್ಚ್ 2019, 20:07 IST
Last Updated 31 ಮಾರ್ಚ್ 2019, 20:07 IST
ಸ್ಮೃತಿ ಇರಾನಿ
ಸ್ಮೃತಿ ಇರಾನಿ   

ಮಡಿಕೇರಿ: ‘ಕರ್ನಾಟಕ ರಾಜ್ಯದಲ್ಲಿ ಭ್ರಷ್ಟ ಗುತ್ತಿಗೆದಾರರ ಮನೆಗಳ ಮೇಲೆ ಐಟಿ ದಾಳಿ ನಡೆದರೆ ಅವರ ರಕ್ಷಣೆಗೆ ಮೈತ್ರಿ ಸರ್ಕಾರದ ಮುಖಂಡರು ಒಂದಾಗಿ ಧರಣಿ ನಡೆಸುತ್ತಾರೆ. ಲೂಟಿಕೋರರ ರಕ್ಷಣೆಗಾಗಿ ಒಂದಾಗುತ್ತಾರೆ’ ಎಂದು ಕೇಂದ್ರ ಸಚಿವೆ ಸ್ಮೃತಿ ಇರಾನಿ ಇಲ್ಲಿ ಭಾನುವಾರ ವಾಗ್ದಾಳಿ ನಡೆಸಿದರು.

ಗೋಣಿಕೊಪ್ಪಲು ಸರ್ಕಾರಿ ಪ್ರೌಢಶಾಲಾ ಮೈದಾನದಲ್ಲಿ ಆಯೋಜಿಸಿದ್ದ ಬಿಜೆಪಿ ಚುನಾವಣಾ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು.

‘ರಾಮನ ಅಸ್ತಿತ್ವವನ್ನೇ ಪ್ರಶ್ನೆ ಮಾಡಿ ಸುಪ್ರೀಂ ಕೋರ್ಟ್‌ಗೆ ಪ್ರಮಾಣ ಪತ್ರ ಸಲ್ಲಿಸಿದ್ದವರು, ಇಂದು ಚುನಾವಣೆಗೋಸ್ಕರ ಅಯೋಧ್ಯೆಯಲ್ಲಿ ಸುತ್ತಾಡುತ್ತಿದ್ದಾರೆ. ಅಭಿವೃದ್ಧಿ ಮರೆತು ವಿದೇಶದಲ್ಲಿಯೇ ಮೋಜುಮಸ್ತಿ ಮಾಡುತ್ತ ಕಾಲಹರಣ ಮಾಡುತ್ತಿದ್ದವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಭಯಬಿದ್ದು ಗಂಗೆಯ ದರ್ಶನ ಪಡೆಯುತ್ತಿದ್ದಾರೆ. ಅವರಿಗೆಲ್ಲ ಈ ಚುನಾವಣೆಯಲ್ಲಿ ತಕ್ಕಪಾಠ ಕಲಿಸಬೇಕು’ ಎಂದರು.

ADVERTISEMENT

‘ಕಾಂಗ್ರೆಸ್‌ ನಾಯಕರು ಸೇನಾ ಮುಖ್ಯಸ್ಥರನ್ನೇ ಗೂಂಡಾ ಎಂದು ಕರೆಯುತ್ತಾರೆ. ಕೆಲವರು ಸಾಮಾಜಿಕ ಜಾಲತಾಣಗಳಲ್ಲಿ ಸೈನಿಕರನ್ನೇ ನಿಂದಿಸುತ್ತಿದ್ದಾರೆ. ಹಿಂದಿನ ಯುಪಿಎ ಸರ್ಕಾರವು ಭಯೋತ್ಪಾದಕರ ಬಗ್ಗೆ ಮೃದುಧೋರಣೆ ಅನುಸರಿಸಿತ್ತು. ಭಯೋತ್ಪಾದಕ ವಿರುದ್ಧ ಕ್ರಮ ಕೈಗೊಳ್ಳಲು ಒಂದು ಆದೇಶವನ್ನೂ ಹೊರಡಿಸಿರಲಿಲ್ಲ. ಮನಮೋಹನ್‌ ಸಿಂಗ್‌ ಮೌನಕ್ಕೆ ಶರಣಾಗಿದ್ದರು. ಭಯೋತ್ಪಾದಕರಿಗೆ ಬೆಂಬಲ ನೀಡಿದರೆ ನಿಮ್ಮ ಮನೆಗೇ ನುಗ್ಗಿ ಹೊಡೆಯುತ್ತೇವೆಂಬ ಎಚ್ಚರಿಕೆಯನ್ನು ಈಗಿನ ಪ್ರಧಾನಿ ಕೊಟ್ಟಿದ್ದಾರೆ’ ಎಂದು ಹೇಳಿದರು.

ಕಾಂಗ್ರೆಸ್‌ಗೆ ಅಭಿವೃದ್ಧಿ ಬೇಕಿಲ್ಲ: ‘ಜಿಎಸ್‌ಟಿ ಕುರಿತು ಲೇವಡಿ ಮಾಡುತ್ತಿರುವ ರಾಹುಲ್‌ ಗಾಂಧಿ ಅನ್ನಕ್ಕೂ ಸಾರಾಯಿಗೂ ಒಂದೇ ಮಾದರಿಯ ತೆರಿಗೆ ವಿಧಿಸುವ ಅವೈಜ್ಞಾನಿಕ ಲೆಕ್ಕಾಚಾರವುಳ್ಳ ವ್ಯಕ್ತಿ. ಕಾಂಗ್ರೆಸ್‌ಗೆ ದೇಶದ ಅಭಿವೃದ್ಧಿ ಬೇಕಾಗಿಲ್ಲ’ ಎಂದು ನುಡಿದರು.

ಮೈಸೂರು–ಕೊಡಗು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರತಾಪ್ ಸಿಂಹ ಮಾತನಾಡಿ, ‘ಈ ಕ್ಷೇತ್ರದ ಮೈತ್ರಿ ಕೂಟದ ಅಭ್ಯರ್ಥಿ ಸಿ.ಎಚ್‌. ವಿಜಯಶಂಕರ್‌ ಅವರು ಗೋಮುಖವ್ಯಾಘ್ರ’ ಎಂದು ಟೀಕಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.