ಹುಬ್ಬಳ್ಳಿ: ಹಾವೇರಿ ಜಿಲ್ಲೆ ರಟ್ಟಿಹಳ್ಳಿಯಲ್ಲಿ 14 ದಿನಗಳ ಕಾಲ ಉಪವಾಸ ಸತ್ಯಾಗ್ರಹ ನಡೆಸಿದ್ದ ಸಾಮಾಜಿಕ ಹೋರಾಟಗಾರ ಬಿ.ಡಿ. ಹಿರೇಮಠ ಅಸ್ವಸ್ಥಗೊಂಡಿದ್ದು ಅವರನ್ನು ಇಲ್ಲಿನ ಕರ್ನಾಟಕ ವೈದ್ಯಕೀಯ ವಿಜ್ಞಾನ ಸಂಸ್ಥೆ (ಕಿಮ್ಸ್) ಆಸ್ಪತ್ರೆಗೆ ದಾಖಲಿಸಲಾಗಿದೆ.
ಶಿಕಾರಿಪುರ ತಾಲ್ಲೂಕಿನ ಉಡಗಣಿ, ತಾಳಗುಂದ ಕೆರೆ ತುಂಬಿಸುವ ನೀರಾವರಿ ಯೋಜನೆಗೆ ಪೈಪ್ಲೈನ್ ಅಳವಡಿಸಲು ರೈತರ ಜಮೀನುಗಳ ಸ್ವಾಧೀನ ವಿರೋಧಿಸಿ ರಟ್ಟಿಹಳ್ಳಿಯಲ್ಲಿ ರೈತರು ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದರು. ಹಿರೇಮಠ ಅವರು ಈ ಹೋರಾಟದ ನೇತೃತ್ವ ವಹಿಸಿದ್ದರು. ಉಪವಾಸ ಮಾಡಿದ್ದರಿಂದ ತೀರಾ ಅಸ್ವಸ್ಥರಾಗಿದ್ದಾರೆ. ಆಸ್ಪತ್ರೆಯ ವಿಐಪಿ ವಾರ್ಡ್ನಲ್ಲಿ ಅವರನ್ನು ದಾಖಲಿಸಲಾಗಿದ್ದು, ವೈದ್ಯಕೀಯ ಸಿಬ್ಬಂದಿ ರಕ್ತ ಪರೀಕ್ಷೆ ಹಾಗೂ ಬಿಪಿ ತಪಾಸಣೆ ಮಾಡಿದ್ದಾರೆ.
‘ಪ್ರಜಾವಾಣಿ’ ಜೊತೆ ಮಾತನಾಡಿದ ಹಿರೇಮಠ ‘ಮಧ್ಯರಾತ್ರಿ 1 ಗಂಟೆ ಸುಮಾರಿಗೆ ಆರೋಗ್ಯದಲ್ಲಿ ಬಹಳಷ್ಟು ಸಮಸ್ಯೆಯಾದ್ದರಿಂದ ಆಸ್ಪತ್ರೆಗೆ ದಾಖಲಾಗಿದ್ದೇನೆ. ವೈದ್ಯಕೀಯ ಸಿಬ್ಬಂದಿ ಪರೀಕ್ಷೆ ಮಾಡಿದ್ದಾರೆ. ಈಗ ನಿಧಾನವಾಗಿ ಚೇತರಿಸಿಕೊಳ್ಳುತ್ತಿದ್ದೇನೆ’ ಎಂದರು.
ಕಿಮ್ಸ್ ವೈದ್ಯಕೀಯ ಸಿಬ್ಬಂದಿ ಪ್ರತಿಕ್ರಿಯಿಸಿ ‘ಹಿರೇಮಠ ಅವರಿಗೆ ತೀವ್ರ ನಿಶಕ್ತಿಯಾಗಿದ್ದು, ಗ್ಲುಕೋಸ್ ನೀಡಲಾಗಿದೆ. 10.30ರ ಬಳಿಕ ವೈದ್ಯರು ಬಂದು ತಪಾಸಣೆ ಮಾಡಲಿದ್ದಾರೆ’ ಎಂದರು.
ಗೃಹಸಚಿವ ಹಾಗೂ ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ಬುಧವಾರ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ತೆರಳಿ ಬೇಡಿಕೆ ಈಡೇರಿಸುವುದಾಗಿ ಭರವಸೆ ನೀಡಿದ್ದರಿಂದ ಉಪವಾಸ ಸತ್ಯಾಗ್ರಹ ಕೈ ಬಿಡಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.