ADVERTISEMENT

ಕ್ರಿಮಿನಲ್‌ ಮೊಕದ್ದಮೆ ದಾಖಲಿಸಲು ಸಮಾಜ ಕಲ್ಯಾಣ ಇಲಾಖೆ ಆದೇಶ

ಹುಬ್ಬಳ್ಳಿ ಆಯುರ್ವೇದ ಮಹಾವಿದ್ಯಾಲಯ ಪ್ರಕರಣ

​ಪ್ರಜಾವಾಣಿ ವಾರ್ತೆ
Published 12 ಅಕ್ಟೋಬರ್ 2018, 20:15 IST
Last Updated 12 ಅಕ್ಟೋಬರ್ 2018, 20:15 IST

ಬೆಂಗಳೂರು: ಹುಬ್ಬಳ್ಳಿ ಆಯುರ್ವೇದ ಮಹಾವಿದ್ಯಾಲಯದಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡದ ಬೋಧಕ ಮತ್ತು ಬೋಧಕೇತರ ಹುದ್ದೆಗಳಿಗೆ ನೇಮಕ, ಮುಂಬಡ್ತಿಯಲ್ಲಿ ಮೀಸಲಾತಿ ನಿಯಮಗಳನ್ನು ಪಾಲಿಸದಿರುವುದರಿಂದ ಸಂಸ್ಥೆಯ ಪ್ರಾಚಾರ್ಯ ಹಾಗೂ ಕಾರ್ಯದರ್ಶಿ ವಿರುದ್ಧ ಕ್ರಿಮಿನಲ್‌ ಮೊಕದ್ದಮೆ ದಾಖಲಿಸಲು ಸಮಾಜ ಕಲ್ಯಾಣ ಇಲಾಖೆ ಆದೇಶಿಸಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮಾಜ ಕಲ್ಯಾಣ ಇಲಾಖೆ ಆಯುಕ್ತರ ತನಿಖಾ ವರದಿಯ ಆಧಾರದ ಮೇಲೆ ಈ ಆದೇಶ ಹೊರಡಿಸಲಾಗಿದೆ. ಕ್ರಿಮಿನಲ್‌ ಮೊಕದ್ದಮೆ ದಾಖಲಿಸಿದ ಬಗ್ಗೆ ಒಂದು ವಾರದೊಳಗೆ ಮಾಹಿತಿ ನೀಡಬೇಕು ಎಂದು ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಆದೇಶದಲ್ಲಿ ತಿಳಿಸಿದ್ದಾರೆ.

ಇದೇ ಕಾರಣಕ್ಕಾಗಿ, ಸಂಸ್ಥೆಗೆ ನೀಡು ತ್ತಿರುವ ಅನುದಾನವನ್ನು ಕೂಡಲೇ ತಡೆ ಹಿಡಿಯುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಾರ್ಯ ದರ್ಶಿಗೂ ಇಲಾಖೆ ಪತ್ರ ಬರೆದಿದೆ.

ADVERTISEMENT

ಅಲ್ಲದೆ, ಎಸ್‌ಸಿ, ಎಸ್‌ಟಿ ಮೀಸಲಾಗಿ ರುವ ಹುದ್ದೆಗಳನ್ನು ಮತ್ತು ಬ್ಯಾಕ್‌ಲಾಗ್‌ ಹುದ್ದೆಗಳನ್ನು ಒಂದು ತಿಂಗಳಲ್ಲಿ ಭರ್ತಿ ಮಾಡಲು ಕೂಡಲೇ ಕ್ರಮ ತೆಗೆದುಕೊಳ್ಳಬೇಕು. ಈ ಬಗ್ಗೆ ಇಲಾಖೆ ಮುಖ್ಯ ಕಾರ್ಯದರ್ಶಿ ಮತ್ತು ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿಗೆ ವರದಿ ಸಲ್ಲಿಸಬೇಕು ಎಂದೂ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಸೂಚಿಸಿದ್ದಾರೆ.

ಪ್ರಕರಣ ಏನು?: ಹುಬ್ಬಳ್ಳಿ ಆಯುರ್ವೇದ ಮಹಾವಿದ್ಯಾಲಯ 1986ರಿಂದ ಬೋಧಕ ಮತ್ತು ಬೋಧಕೇತರ ಹುದ್ದೆ ಗಳಿಗೆ ಭರ್ತಿ ಮಾಡುವಾಗ ಮೀಸಲಾತಿ ನಿಯಮಗಳನ್ನು ಪಾಲಿಸಿಲ್ಲ. ರೋಸ್ಟರ್‌ ಅಳವಡಿಸಿಕೊಳ್ಳದೇ ನೇಮಕಾತಿ ಮಾಡ ಲಾಗಿದೆ ಮತ್ತು ಬೇಕಾಬಿಟ್ಟಿ ಮುಂಬಡ್ತಿ ನೀಡಲಾಗಿದೆ ಎಂದು ಪತ್ರಕರ್ತ ಶಿವಕುಮಾರ ಭೋಜಶೆಟ್ಟರ, ಸಮಾಜ ಕಲ್ಯಾಣ ಇಲಾಖೆಗೆ ದೂರು ನೀಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.