ADVERTISEMENT

ಪ್ರಜಾವಾಣಿ ಫಲಶ್ರುತಿ | ಆಹಾರ ಪೂರೈಕೆ ಟೆಂಡರ್‌ ಅವ್ಯವಹಾರ; ಎಸಿಬಿ ತನಿಖೆಗೆ ಆದೇಶ

ವಿಶೇಷ ವರದಿ ಹಿನ್ನೆಲೆಯಲ್ಲಿ ಕ್ರಮ: ಸಚಿವ ಕೋಟ ಶ್ರೀನಿವಾಸ ಪೂಜಾರಿ

​ಪ್ರಜಾವಾಣಿ ವಾರ್ತೆ
Published 2 ಡಿಸೆಂಬರ್ 2021, 11:34 IST
Last Updated 2 ಡಿಸೆಂಬರ್ 2021, 11:34 IST
ಕೋಟ ಶ್ರೀನಿವಾಸ ಪೂಜಾರಿ ಹಾಗೂ ಪ್ರಜಾವಾಣಿಯಲ್ಲಿ ಪ್ರಕಟವಾದ ಲೇಖನ
ಕೋಟ ಶ್ರೀನಿವಾಸ ಪೂಜಾರಿ ಹಾಗೂ ಪ್ರಜಾವಾಣಿಯಲ್ಲಿ ಪ್ರಕಟವಾದ ಲೇಖನ   

ಉಡುಪಿ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಸತಿ ನಿಲಯಗಳಿಗೆ ಆಹಾರ ಪೂರೈಕೆ ಟೆಂಡರ್‌ನಲ್ಲಿ ನಡೆದಿರುವ ಅವ್ಯವಹಾರಗಳ ಕುರಿತು ಎಸಿಬಿ ತನಿಖೆಗೆ ಆದೇಶಿಸಲಾಗಿದೆ ಎಂದು ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.

'ಹಿಂದುಳಿದವರ ಹಾಸ್ಟೆಲ್ ಟೆಂಡರ್ ಜಾಲ: ಏಲಕ್ಕಿ ಕೆಜಿಗೆ ₹ 20' ಶೀರ್ಷಿಕೆಯಡಿ ಗುರುವಾರ 'ಪ್ರಜಾವಾಣಿ'ಯಲ್ಲಿ ಪ್ರಕಟವಾದ ವಿಶೇಷ ವರದಿಯ ಹಿನ್ನೆಲೆಯಲ್ಲಿ ಸಚಿವರು ಪ್ರತಿಕ್ರಿಯೆ ನೀಡಿದರು.

‘ತುಮಕೂರು ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ಸಮಾಜ ಕಲ್ಯಾಣ ಇಲಾಖೆಯ ವಸತಿ ನಿಲಯಗಳಿಗೆ ಅಡುಗೆ ಸಾಮಾಗ್ರಿ ಪೂರೈಕೆ ಟೆಂಡರ್‌ನಲ್ಲಿ ಲೋಪದೋಷಗಳಾಗಿದ್ದು, ಗರಿಷ್ಠ ವೆಚ್ಚದ ಸಾಮಾಗ್ರಿಗಳಿಗೆ ಕಡಿಮೆ ವೆಚ್ಚ ನಮೂದಿಸಿ ಅಕ್ರಮವಾಗಿ ಗುತ್ತಿಗೆ ಪಡೆಯಲಾಗಿದೆ. ಮಕ್ಕಳಿಗೆ ಕಳಪೆ ಆಹಾರ ಪೂರೈಕೆ ಮಾಡಲಾಗುತ್ತಿದೆ’ ಎಂಬ ವರದಿ ಪ್ರಕಟವಾಗಿರುವ ಹಿನ್ನೆಲೆಯಲ್ಲಿ ಎಸಿಬಿ ತನಿಖೆಗೆ ಸೂಚನೆ ನೀಡಲಾಗಿದೆ ಎಂದು ಸಚಿವ ಕೋಟ ತಿಳಿಸಿದರು.

ADVERTISEMENT

ಅಕ್ರಮಗಳಲ್ಲಿ ಭಾಗಿಯಾಗಿರುವ ಅಧಿಕಾರಿಗಳನ್ನು ಅಮಾನತುಗೊಳಿಸಿ ನಿರ್ಧಾಕ್ಷಿಣ್ಯ ಕ್ರಮ ಕೈಗೊಳ್ಳಲು ಆದೇಶಿಸಿದ್ದೇನೆ. ಎಲ್ಲ ಪ್ರಕರಣಗಳನ್ನು ಎಸಿಬಿ ತನಿಖೆಗೊಳಪಡಿಸಲು ಸೂಚಿಸಿದ್ದೇನೆ, ಈ ಸಂಬಂಧ ಮುಖ್ಯಮಂತ್ರಿ ಜತೆಯೂ ಮಾತುಕತೆ ನಡೆಸಲಾಗಿದೆ.

2 ದಿನಗಳಲ್ಲಿ ಹಿರಿಯ ಅಧಿಕಾರಿಗಳ ಸಭೆ ಕರೆದು, ಮುಂದೆ ಅಕ್ರಮಗಳು ನಡೆಯದಂತೆ ಕ್ರಮಕೈಗೊಳ್ಳಬೇಕು ಎಂದು ಆದೇಶಿಸಲಾಗುವುದು ಎಂದು ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.