ಬೆಂಗಳೂರು: ‘ರಾಜ್ಯದಲ್ಲಿ ನಡೆದ ‘ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ವರದಿಯನ್ನು ಸರ್ಕಾರ ಇನ್ನೂ ಸ್ವೀಕರಿಸಿಲ್ಲ. ಹಿಂದುಳಿದ ವರ್ಗಗಳ ಆಯೋಗಕ್ಕೆ ಹೊಸದಾಗಿ ಜಯಪ್ರಕಾಶ್ ಹೆಗ್ಡೆ ಅವರನ್ನು ನೇಮಿಸಲಾಗಿದ್ದು, ವರದಿಯನ್ನು ಸ್ವೀಕರಿಸುವ ಕುರಿತು ಪರಿಶೀಲಿಸಿ ಕ್ರಮ ತೆಗೆದುಕೊಳ್ಳಲಾಗುವುದು’ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
ವಿಧಾನ ಪರಿಷತ್ನಲ್ಲಿ ಕಾಂಗ್ರೆಸ್ಸಿನ ಪಿ.ಆರ್. ರಮೇಶ್ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ‘ಹಿಂದುಳಿದ ವರ್ಗಗಳಿಗೆ ನ್ಯಾಯ ಕೊಡುವ ಉದ್ದೇಶದಿಂದ ಈ ಸಮೀಕ್ಷೆ ನಡೆಸಲಾಗಿದೆ. ವರದಿಯನ್ನು ಜಾರಿಗೆ ತರುವ ಸಂಬಂಧ ಎಲ್ಲ ಆಯಾಮಗಳಲ್ಲಿ ಚರ್ಚಿಸಿ ತೀರ್ಮಾನಕ್ಕೆ ಬರಲಾಗುವುದು’ ಎಂದು ಭರವಸೆ ನೀಡಿದರು.
‘ರಾಜ್ಯದಲ್ಲಿ ಪ್ರವರ್ಗಗಳ ಮೀಸಲಾತಿ ಪ್ರಮಾಣ ಶೇ 32ರಷ್ಟು ಇದೆ. ಈ ಪ್ರಮಾಣವನ್ನು ಹೆಚ್ಚಿಸುವಂತೆ ಹೋರಾಟಗಳು ನಡೆಯುತ್ತಿವೆ. ನೂರಾರು ಜಾತಿಗಳು ಹಿಂದುಳಿದ ವರ್ಗಗಳಲ್ಲಿದ್ದು, ಅವುಗಳು ಮೀಸಲಾತಿ ಪ್ರಮಾಣ ಹೆಚ್ಚಿಸುವಂತೆ ಬೇಡಿಕೆ ಇಟ್ಟಿವೆ. ಕುರುಬ ಸಮುದಾಯದವರು ಎಸ್ಟಿ ಜಾತಿಗೆ ಸೇರಿಸಬೇಕೆಂಬ ಒತ್ತಾಯಿಸುತ್ತಿದ್ದಾರೆ. ಮೀಸಲಾತಿ ಪ್ರಮಾಣ ಶೇ 50ರಷ್ಟು ಹೆಚ್ಚಿಸುವ ಸಂಬಂಧ ಸುಪ್ರೀಂ ಕೋರ್ಟ್ ಕೇಳಿರುವ ಅಭಿಪ್ರಾಯವನ್ನು ಶೀಘ್ರದಲ್ಲಿಯೇ ಕಳುಹಿಸಿಕೊಡಲಾಗುವುದು’ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.