ಬೆಂಗಳೂರು: ಕಾಂಗ್ರೆಸ್, ಜೆಡಿಎಸ್ ಅತೃಪ್ತ ಶಾಸಕರು ನೀಡಿರುವ ರಾಜೀನಾಮೆ ಬಗ್ಗೆ ವಿಧಾನಸಭಾ ಅಧ್ಯಕ್ಷರು ಬುಧವಾರವೂ ಯಾವುದೇ ನಿರ್ಧಾರ ಕೈಗೊಂಡಿಲ್ಲ.
ವಿಧಾನಸಭಾಧ್ಯಕ್ಷ ಕೆ.ಆರ್.ರಮೇಶ್ ಕುಮಾರ್ ಇಡೀ ದಿನ ಕೆಲಸ ನಿರ್ವಹಿಸಿದರೂ ಯಾವುದೇ ನಿರ್ಧಾರ ಪ್ರಕಟಿಸಲಿಲ್ಲ. ವಿಪ್ ಉಲ್ಲಂಘಿಸಿದ ಆರೋಪದ ಮೇಲೆ ಬುಧವಾರ ವಿಚಾರಣೆಗೆ ಹಾಜರಾಗುವಂತೆ ಶಾಸಕ ಶ್ರೀಮಂತ ಪಾಟೀಲ್ ಅವರಿಗೆ ನೋಟಿಸ್ ನೀಡಲಾಗಿತ್ತು. ಬುಧವಾರ ಅವರು ಹಾಗೂ ಅವರ ಪರ ವಕೀಲರು ವಿಚಾರಣೆಗೆ ಹಾಜರಾಗಲಿಲ್ಲ. ದೂರು ನೀಡಿದ್ದ ಕಾಂಗ್ರೆಸ್ ಮುಖಂಡರ ಪರ ವಕೀಲರು ವಾದ ಮಂಡಿಸಿದರು.
ಸಭಾಧ್ಯಕ್ಷರು ಬೆಳಿಗ್ಗೆ ಕಚೇರಿಗೆ ಬರುತ್ತಿದ್ದಂತೆ ಬಿಜೆಪಿ ಮುಖಂಡರಾದ ಬಸವರಾಜ ಬೊಮ್ಮಾಯಿ, ಮಾಧುಸ್ವಾಮಿ ಭೇಟಿಯಾದರು. ಶಾಸಕರ ರಾಜೀನಾಮೆ ಬಗ್ಗೆ ಸುಧೀರ್ಘವಾಗಿ ಚರ್ಚೆ ನಡೆಸಿದರು. ಇದಾದ ಕೆಲ ಹೊತ್ತಿನಲ್ಲೇ ಕಾಂಗ್ರೆಸ್ ಮುಖಂಡರು ಭೇಟಿಯಾದರು. ನಂತರ ಬಂದ ಮುಖಂಡ ಸಿದ್ದರಾಮಯ್ಯ ಕೆಲ ಕಾಲ ಚರ್ಚಿಸಿದರು. ರಾಜೀನಾಮೆ ನೀಡಿರುವ ಶಾಸಕರನ್ನು ಅನರ್ಹಗೊಳಿಸಬೇಕು.
ಪಕ್ಷಾಂತರ ನಿಷೇಧ ಕಾಯಿದೆ ಬಳಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದರು ಎಂದು ಮೂಲಗಳು ತಿಳಿಸಿವೆ. ಇಡೀ ದಿನ ರಮೇಶ್ ಕುಮಾರ್ ಕಚೇರಿಯಲ್ಲೇ ಕಾರ್ಯನಿರ್ವಹಿಸಿದರು. ಸಂಜೆ ವೇಳೆಗೆ ಕ್ರಮ ಪ್ರಕಟಿಸಬಹುದು ಎಂದು ನಿರೀಕ್ಷಿಸಲಾಗಿತ್ತು. ಆದರೆ ಯಾವುದೇ ನಿರ್ಧಾರ ಹೊರ ಬೀಳಲಿಲ್ಲ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.