ಮುಖ್ಯಮಂತ್ರಿ ಸಿದ್ದರಾಮಯ್ಯ
– ಪ್ರಜಾವಾಣಿ ಚಿತ್ರ
ಬೆಂಗಳೂರು: 'ಹಿಂದೂಗಳ ಅಗತ್ಯ ನಮಗೆ ಬೇಡ. ಮುಸ್ಲಿಮರ ಓಟು ಸಾಕು. ಮುಸ್ಲಿಮರ ಓಲೈಕೆ ಬಗ್ಗೆ, ಬಿಜೆಪಿಗರ ಟೀಕೆ ಬಗ್ಗೆ ತಲೆ ಕೆಡಿಸಿಕೊಳ್ಳಬೇಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ ಎಂಬ ಸುಳ್ಳು ಸುದ್ದಿಯನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ’ ಎಂಬ ಆರೋಪ ಎದುರಿಸುತ್ತಿರುವ ಮೂವರ ವಿರುದ್ಧದ ವಿಚಾರಣೆಗೆ ಹೈಕೋರ್ಟ್ ತಡೆ ನೀಡಿದೆ.
‘ನಮ್ಮ ವಿರುದ್ಧ ಬೆಂಗಳೂರು ಪಶ್ಚಿಮ ಸೆನ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್ಐಆರ್ ರದ್ದುಪಡಿಸಬೇಕು’ ಎಂದು ಕೋರಿ ಜರಗನಹಳ್ಳಿಯ ವಿ.ಪ್ರಭಾಕರ ರೆಡ್ಡಿ, ಬೆಂಗಳೂರಿನ ಉತ್ತರ ವಿದ್ಯಾರಣ್ಯಪುರದ ಎಚ್.ಎನ್.ವಿಜಯಕುಮಾರ್ ಮತ್ತು ದಾವಣಗೆರೆಯ ವಿರೂಪಾಕ್ಷ ಬಣಕಾರ ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿ ಈ ಕುರಿತಂತೆ ಆದೇಶಿಸಿದೆ.
ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲ ವಸಂತ ಕುಮಾರ್, ‘ಅರ್ಜಿದಾರ ಆರೋಪಿಗಳು ಮೂಲ ಸುದ್ದಿಯ ಜನಕರಲ್ಲ. ತಮಗೆ ಬಂದ ಸುದ್ದಿಯನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರಷ್ಟೇ. ಇದು ತಪ್ಪಾದ ಸುಳ್ಳು ಸುದ್ದಿ. ಪೊಲೀಸರು ವಿಧಿಸಿರುವ ಅಪರಾಧ ಕಲಂಗಳು ಅರ್ಜಿದಾರರಿಗೆ ಅನ್ವಯ ಆಗುವುದಿಲ್ಲ. ಆದ್ದರಿಂದ, ಅರ್ಜಿದಾರರ ವಿರುದ್ಧದ ಪ್ರಕರಣ ರದ್ದುಪಡಿಸಬೇಕು’ ಎಂದು ಕೋರಿದರು.
ಇದಕ್ಕೆ ರಾಜ್ಯ ಪ್ರಾಸಿಕ್ಯೂಟರ್ ಬಿ.ಎನ್.ಜಗದೀಶ್, ‘ಸದ್ಯ ಪ್ರಕರಣದ ತನಿಖೆ ನಡೆಯುತ್ತಿದೆ. ಈ ಪ್ರಕರಣದಲ್ಲಿ ಒಟ್ಟು ಏಳು ಜನ ಆರೋಪಿಗಳಿದ್ದಾರೆ. ಇದರಲ್ಲಿ ಮೂವರು ಆರೋಪಿಗಳು ಕೋರ್ಟ್ ಮೆಟ್ಟಿಲೇರಿದ್ದಾರೆ. ಉಳಿದವರ ಪಾತ್ರದ ಬಗ್ಗೆಯೂ ತನಿಖೆ ನಡೆಯಬೇಕಿದೆ. ಹಾಗಾಗಿ, ಇಡೀ ಪ್ರಕರಣಕ್ಕೆ ತಡೆ ನೀಡಬಾರದು. ಈಗ ಕೋರ್ಟ್ ಮೆಟ್ಟಿಲೇರಿರುವ ಆರೋಪಿಗಳು ತನಿಖೆಗೆ ಸಹಕರಿಸಲಿ. ಅವರ ವಿರುದ್ಧ ಯಾವುದೇ ಬಲವಂತದ ಕ್ರಮ ಜರುಗಿಸುವುದಿಲ್ಲ’ ಎಂದು ಹೇಳಿದರು. ಇದನ್ನು ಮಾನ್ಯ ಮಾಡಿದ ನ್ಯಾಯಪೀಠ ವಿಚಾರಣೆಗೆ ತಡೆ ನೀಡಿ ಆದೇಶಿಸಿತು..
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.