ಶೃಂಗೇರಿ: ನವರಾತ್ರಿ ಉತ್ಸವದ ಪ್ರಯುಕ್ತ ಇಲ್ಲಿನ ಶಾರದಾಂಬಾ ಮಹಾರಥೋತ್ಸವ ಮತ್ತು ಶಾರದಾ ಮಠದ ಕಿರಿಯ ಯತಿ ವಿಧುಶೇಖರ ಭಾರತಿ ಸ್ವಾಮೀಜಿಯವರ ಅಡ್ಡಪಲ್ಲಕ್ಕಿ ಉತ್ಸವ ಪಟ್ಟಣದ ರಾಜಬೀದಿಯಲ್ಲಿ ಶನಿವಾರ ಭಕ್ತಸಾಗರದ ನಡುವೆ ಜರುಗಿತು.
ಹಿರಿಯ ಯತಿ ಭಾರತೀತೀರ್ಥ ಸ್ವಾಮೀಜಿ ಬೆಳಿಗ್ಗೆ ಶಾರದಾಂಬೆಗೆ ವಿಶೇಷ ಪೂಜೆ ಸಲ್ಲಿಸಿದರು. ನಂತರ ವಿಧುಶೇಖರ ಭಾರತಿ ಸ್ವಾಮೀಜಿ ಅವರು ಗುರುನಿವಾಸದಲ್ಲಿ ಚಂದ್ರಮೌಳೇಶ್ವರ ಸ್ವಾಮಿಗೆ ಪೂಜೆ ಸಲ್ಲಿಸಿ, ಬಳಿಕ ತುಂಗಾ ನದಿಯನ್ನು ದೋಣಿಯಲ್ಲಿ ದಾಟಿ, ಗಂಗಾಪೂಜೆ ನೆರವೇರಿಸಿದರು.
ಉತ್ಸವಮೂರ್ತಿಯನ್ನು ರಥದಲ್ಲಿ ಪ್ರತಿಷ್ಠಾಪಿಸಿ ರಾಜಬೀದಿಯಲ್ಲಿ ಉತ್ಸವ ನಡೆಸಲಾಯಿತು. ಸಾವಿರಾರು ಭಕ್ತರು ಜಯಘೋಷಗಳೊಂದಿಗೆ ರಥವನ್ನು ಎಳೆದರು. ಅದರ ಮುಂದೆ ಪುಷ್ಪಾಲಂಕೃತ ಚಿನ್ನದ ಅಡ್ಡಪಲ್ಲಕ್ಕಿಯಲ್ಲಿ ವಿಧುಶೇಖರ ಭಾರತಿ ಸ್ವಾಮೀಜಿ ಅವರು ಆಸೀನರಾದರು. ಜಯಘೋಷ, ವಿಪ್ರತ್ತೋಮರ, ವೇದಘೋಷಗಳು, ಮಂತ್ರಪಠಣದೊಂದಿಗೆ ಉತ್ಸವ ನಡೆಯಿತು. ಹಲವು ಕಲಾ ತಂಡಗಳ ಪ್ರದರ್ಶನ ಮೆರುಗು ನೀಡಿತ್ತು.
ನಂತರ ಶಾರದಾ ಸನ್ನಿಧಿಯಲ್ಲಿ ಹಗಲು ರಾಜ ದರ್ಬಾರ್ ನಡೆಯಿತು. ವಿಧುಶೇಖರ ಭಾರತಿ ಸ್ವಾಮೀಜಿ ಅವರು ರಾಜ ಪೋಷಾಕಿನಲ್ಲಿ ಸ್ವರ್ಣ ಖಚಿತ ಸಿಂಹಾಸನದಲ್ಲಿ ಆಸೀನರಾಗಿ, ಭಕ್ತರನ್ನು ಆಶೀರ್ವದಿಸಿದರು. ಚತುರ್ವೇದ ಪಾರಾಯಣ, ವಾಲ್ಮೀಕಿ ರಾಮಾಯಣ, ದೇವಿ ಭಾಗವತ, ಶಂಕರ ದಿಗ್ವಿಜಯ ಪಾರಾಯಣಗಳು ನಡೆಯಿತು. ದೇವಿ ಸಪ್ತಶತಿ ಪಾರಾಯಣದ 13ನೇ ಅಧ್ಯಾಯವನ್ನು ಮಠದ ವಿದ್ವಾಂಸ ಶಿವಕುಮಾರ ಶರ್ಮ ವಾಚಿಸಿದರು. ಇದಕ್ಕೂ ಮೊದಲು ಚಿನ್ನದ ರಥದಲ್ಲಿ ಶಾರದಾ ದೇವಿಯನ್ನು ಪ್ರತಿಷ್ಠಾಪಿಸಿ, ದೇವಸ್ಥಾನದ ಒಳಪ್ರಾಂಗಣದಲ್ಲಿ ಪ್ರದಕ್ಷಿಣೆ ಹಾಕಲಾಯಿತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.