ADVERTISEMENT

ಮಠದ ಹೆಸರು ಬಳಸಿದರೆ ಕಾನೂನು ಕ್ರಮ

ಕೂಡಲಿ ಶೃಂಗೇರಿ ಮಠದ ವಿದ್ಯಾಭಿನವ ವಿದ್ಯಾರಣ್ಯ ಭಾರತೀ ಸ್ವಾಮೀಜಿ ಎಚ್ಚರಿಕೆ

​ಪ್ರಜಾವಾಣಿ ವಾರ್ತೆ
Published 6 ಜುಲೈ 2021, 12:43 IST
Last Updated 6 ಜುಲೈ 2021, 12:43 IST
ವಿದ್ಯಾಭಿನವ ವಿದ್ಯಾರಣ್ಯ ಭಾರತೀ ಸ್ವಾಮೀಜಿ
ವಿದ್ಯಾಭಿನವ ವಿದ್ಯಾರಣ್ಯ ಭಾರತೀ ಸ್ವಾಮೀಜಿ   

ಚಿತ್ರದುರ್ಗ: ಶಿವಮೊಗ್ಗ ಜಿಲ್ಲೆಯ ಕೂಡಲಿ ಶೃಂಗೇರಿ ಮಠದ ಹೆಸರನ್ನು ದುರ್ಬಳಕೆ ಮಾಡಿಕೊಂಡು ಭಕ್ತರಲ್ಲಿ ಗೊಂದಲ ಸೃಷ್ಟಿಸಿದರೆ ನ್ಯಾಯಾಲಯದ ಮೊರೆ ಹೋಗಲಾಗುವುದು. ಸಮಾಜದ ಹಾದಿ ತಪ್ಪಿಸುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಕೂಡಲಿ ಶೃಂಗೇರಿ ಮಠದ ವಿದ್ಯಾಭಿನವ ವಿದ್ಯಾರಣ್ಯ ಭಾರತೀ ಸ್ವಾಮೀಜಿ ಎಚ್ಚರಿಕೆ ನೀಡಿದರು.

ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ನಮ್ಮದು ಮೂಲ ಮಠ. ಇದಕ್ಕೆ ಸಂಬಂಧಿಸಿದ ಪ್ರಕರಣ ಈಗಾಗಲೇ ನ್ಯಾಯಾಲಯದಲ್ಲಿ ಇತ್ಯರ್ಥವಾಗಿದೆ. ಬೆಂಗಳೂರಿನ ಚಾಮರಾಜಪೇಟೆಯ ಅವಿಚ್ಛಿನ್ನ ಮಠ ಮತ್ತೆ ವಿವಾದ ಸೃಷ್ಟಿಸುವ ಕೆಲಸ ಮಾಡುತ್ತಿದೆ. ಅವಿಚ್ಛಿನ್ನ ಮಠಕ್ಕೂ ಕೂಡಲಿ ಶೃಂಗೇರಿ ಪೀಠಕ್ಕೂ ಯಾವುದೇ ಸಂಬಂಧವಿಲ್ಲ’ ಎಂದು ಸ್ಪಷ್ಟಪಡಿಸಿದರು.

‘ಕೂಡಲಿ ಶೃಂಗೇರಿ ಮಠಕ್ಕೆ ಪೀಠಾಧಿಪತಿ ನೇಮಕ ಮಾಡಲಾಗುತ್ತಿದೆ ಎಂದು ಅವಿಚ್ಛಿನ್ನ ಮಠ ಹೇಳಿಕೆ ನೀಡಿದೆ. ಪೀಠಾಧಿಪತಿ ಅನಾರೋಗ್ಯದಿಂದ ಬಳಲುವಾಗ ಹಾಗೂ ಶಿವೈಕ್ಯರಾದಾಗಲೂ ಇದೇ ರೀತಿಯ ಗೊಂದಲ ಉಂಟು ಮಾಡಲಾಗಿತ್ತು. ಇದು ಮುಂದುವರಿಯುತ್ತಿರುವುದರಿಂದ ಮಠದ ಭಕ್ತರು ಆತಂಕಕ್ಕೆ ಒಳಗಾಗುತ್ತಿದ್ದಾರೆ’ ಎಂದು ಹೇಳಿದರು.

ADVERTISEMENT

‘ಕೂಡಲಿ ಶೃಂಗೇರಿ ಪೀಠದ ಹೆಸರು ಬಳಕೆಗೆ ಸಂಬಂಧಿಸಿದ ವ್ಯಾಜ್ಯ ನ್ಯಾಯಾಲಯದಲ್ಲಿ ಇತ್ಯರ್ಥವಾಗಿದೆ. ಕೂಡಲಿ ಶೃಂಗೇರಿ ಪೀಠದ ಹೆಸರು ಬಳಕೆ ಮಾಡದಂತೆ ಅವಿಚ್ಛಿನ್ನ ಮಠಕ್ಕೆ ಸೂಚಿಸಲಾಗಿದೆ. ನ್ಯಾಯಾಲಯದ ಈ ಆದೇಶವನ್ನು ಉಲ್ಲಂಘನೆ ಮಾಡುವ ಪ್ರಯತ್ನಗಳು ಪ್ರಾರಂಭವಾಗಿವೆ. ಈ ಬಗ್ಗೆ ವಕೀಲರೊಂದಿಗೆ ಚರ್ಚಿಸಲಾಗುವುದು’ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.