ADVERTISEMENT

ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದ ಶ್ರೀನಿವಾಸ ಪ್ರಸಾದ್‌

​ಪ್ರಜಾವಾಣಿ ವಾರ್ತೆ
Published 17 ಡಿಸೆಂಬರ್ 2019, 14:11 IST
Last Updated 17 ಡಿಸೆಂಬರ್ 2019, 14:11 IST
   

ಬೆಂಗಳೂರು: ಹೃದಯದ ಆ್ಯಂಜಿಯೋ ಪ್ಲಾಸ್ಟಿಚಿಕಿತ್ಸೆಗೆ ಒಳಗಾಗಿ ವಿಶ್ರಾಂತಿಯಲ್ಲಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಚಾಮರಾಜನಗರ ಸಂಸದ ವಿ. ಶ್ರೀನಿವಾಸ ಪ್ರಸಾದ್‌ ಅವರು ಮಂಗಳವಾರ ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದಾರೆ.

ಇಂದು ಸಿದ್ದರಾಮಯ್ಯ ಅವರ ನಿವಾಸಕ್ಕೆ ತೆರಳಿದ ಶ್ರೀನಿವಾಸ್‌ ಪ್ರಸಾದ್‌ ಕುಷಲೋಪರಿ ವಿಚಾರಿಸಿದ್ದಾರೆ. ಇಬ್ಬರೂ ಕೆಲ ಕಾಲ ಚರ್ಚೆ ನಡೆಸಿದ್ದಾರೆ. ಈ ಕುರಿತು ಸಿದ್ದರಾಮಯ್ಯ ಅವರು ಟ್ವೀಟ್‌ ಮಾಡಿದ್ದಾರೆ.

ಮೂರು ವರ್ಷಗಳ ಹಿಂದೆ ಸಿದ್ದರಾಮಯ್ಯ ಅವರು ತಮ್ಮ ಸಂಪುಟದಿಂದ ಶ್ರೀನಿವಾಸ್‌ ಪ್ರಸಾದ್‌ ಅವರನ್ನು ಕೈಬಿಟ್ಟ ನಂತರ ಇಬ್ಬರ ನಡುವೆ ಮುನಿಸು ಮನೆ ಮಾಡಿತ್ತು. ನಂತರ ತಮ್ಮ ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಿದ್ದ ಶ್ರೀನಿವಾಸ ಪ್ರಸಾದ್‌, ಸಿದ್ದರಾಮಯ್ಯ ಅವರನ್ನು ಬಹಿರಂಗವಾಗಿ ಏಕವಚನದಲ್ಲೇ ಟೀಕಿಸಿದ್ದರು. ಬದಲಾದ ರಾಜಕೀಯ ಬೆಳವಣಿಗೆಯಲ್ಲಿಬಿಜೆಪಿ ಸೇರಿದ್ದ ಅವರು ನಂಜನಗೂಡು ವಿಧಾನಸಭೆ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಉಪ ಚುನಾವಣೆಗೆಸ್ಪರ್ಧಿಸಿ ಕಾಂಗ್ರೆಸ್‌ ಅಭ್ಯರ್ಥಿ ವಿರುದ್ಧ ಸೋಲುಂಡಿದ್ದರು. ಚುನಾವಣೆ ಸೋಲು ಇಬ್ಬರೂ ನಾಯಕರ ನಡುವಿನ ಮುನಿಸನ್ನು ಮತ್ತಷ್ಟು ಹೆಚ್ಚಿಸಿತ್ತು.

ADVERTISEMENT

ನಂತರದ ದಿನಗಳಲ್ಲಿ ಶ್ರೀನಿವಾಸ ಪ್ರಸಾದ್‌ ಅವರು ಹಲವು ವೇದಿಕೆಗಳಲ್ಲಿ ಸಿದ್ದರಾಮಯ್ಯ ಅವರನ್ನು ಏಕ ವಚನದಲ್ಲೇ ಟೀಕಿಸಿದ್ದರು. ಸದ್ಯ ಸಿದ್ದರಾಮಯ್ಯ ಅವರ ಅನಾರೋಗ್ಯಇಬ್ಬರೂ ನಾಯಕರನ್ನು ಒಂದೆಡೆ ಬೆಸೆದಿದ್ದು, ಈ ಭೇಟಿ ರಾಜಕೀಯ ವಲಯದಲ್ಲಿ ಅಚ್ಚರಿಮೂಡಿಸಿದೆ.

ಇನ್ನಷ್ಟು...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.