ಬೆಂಗಳೂರು: ಎಸ್ಎಸ್ಎಲ್ಸಿ ಪರೀಕ್ಷೆಗಳು ಸೋಮವಾರದಿಂದ (ಮಾರ್ಚ್–25) ಆರಂಭವಾಗುತ್ತಿದ್ದು, ಎಲ್ಲ 2,750 ಕೇಂದ್ರಗಳಲ್ಲೂ ಸಿದ್ಧತಾ ಕಾರ್ಯ ಪೂರ್ಣಗೊಂಡಿವೆ.
ಇದೇ ಮೊದಲ ಬಾರಿ ಪರೀಕ್ಷಾ ಕೇಂದ್ರಗಳಲ್ಲಿ ವೆಬ್ಟೆಲಿಕಾಸ್ಟ್ ವ್ಯವಸ್ಥೆ ಮಾಡಲಾಗಿದ್ದು, ಪ್ರತಿ ಪರೀಕ್ಷಾ ಕೇಂದ್ರದಲ್ಲೂ ಅಳವಡಿಸಿದ ಸಿ.ಸಿ.ಟಿ.ವಿ ಕ್ಯಾಮೆರಾಗಳ ಮೂಲಕ ಅಧಿಕಾರಿಗಳು ತಮ್ಮ ಕಚೇರಿಯಲ್ಲೇ ಕುಳಿತು ಪರೀಕ್ಷಾ ಕೇಂದ್ರಗಳಲ್ಲಿನ ಚಲನವಲನ ವೀಕ್ಷಿಸಲಿದ್ದಾರೆ. ಪರೀಕ್ಷಾ ಕೇಂದ್ರಗಳ ಸುತ್ತ 200 ಮೀಟರ್ ಪ್ರದೇಶದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಅಗತ್ಯ ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗಿದೆ.
ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳು ಗೋಡೆಗೆ ಮುಖ ಮಾಡಿಕೊಂಡು ಕುಳಿತು ಪರೀಕ್ಷೆ ಬರೆಯಲಿದ್ದಾರೆ. ಪ್ರತಿ ಕೇಂದ್ರಗಳಲ್ಲೂ ಗೋಡೆಯ ಕಡೆ ಮುಖ ಮಾಡಿ ಕುಳಿತುಕೊಳ್ಳುವಂತೆ ಡೆಸ್ಕ್ಗಳನ್ನು ಜೋಡಿಸಲಾಗಿದೆ. ಪರೀಕ್ಷೆಯ ಪ್ರಾರಂಭವಾದ 30 ನಿಮಿಷಗಳ ಒಳಗೆ ಬಂದರಷ್ಟೇ ಪರೀಕ್ಷಾ ಕೊಠಡಿಗೆ ಪ್ರವೇಶ ದೊರೆಯಲಿದೆ.
ಆಯಾ ಜಿಲ್ಲೆಗಳ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಪ್ರಾಂಶುಪಾಲರನ್ನು ಜಿಲ್ಲಾ ವೀಕ್ಷಕರಾಗಿ, ಉಪನ್ಯಾಸಕರನ್ನು ವಿಚಕ್ಷಣ ದಳದ ಅಧಿಕಾರಿಗಳಾಗಿ ನೇಮಿಸಲಾಗಿದೆ. ನಿರ್ದೇಶಕರು ಹಾಗೂ ಸಹ ನಿರ್ದೇಶಕ ವೃಂದದ ಅಧಿಕಾರಿಗಳು ಜಿಲ್ಲಾ ಉಸ್ತುವಾರಿ ಅಧಿಕಾರಿಗಳಾಗಿ ಕಾರ್ಯನಿರ್ವಹಿಸಲಿದ್ದಾರೆ. ಎಸ್ಎಸ್ಎಲ್ಸಿ ಪರೀಕ್ಷಾ ಕಾರ್ಯಕ್ಕೆ ಪ್ರೌಢಶಾಲಾ ಸಹಶಿಕ್ಷಕರನ್ನು ನೇಮಿಸಿಕೊಳ್ಳಲಾಗಿದೆ. ಆದರೆ, ಶಿಕ್ಷಕರು ಕರ್ತವ್ಯ ನಿರ್ವಹಿಸುತ್ತಿರುವ ಕ್ಲಸ್ಟರ್ ಹೊರತಾದ ಕೇಂದ್ರಗಳಿಗೆ ಮಾತ್ರ ಕೊಠಡಿ ಮೇಲ್ವಿಚಾರಕರಾಗಿ ನಿಯೋಜಿಸಲಾಗಿದೆ. ಆಯಾ ವಿಷಯಗಳ ಶಿಕ್ಷಕರನ್ನು ಅದೇ ವಿಷಯದ ದಿನ ಪರೀಕ್ಷಾ ಕಾರ್ಯದಿಂದ ಹೊರಗಿಡಲಾಗಿದೆ. ಪರೀಕ್ಷೆಗಳು ಏಪ್ರಿಲ್ 6ಕ್ಕೆ ಮುಕ್ತಾಯವಾಗಲಿವೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.