ADVERTISEMENT

ಹೆಣ್ಣು ಮಕ್ಕಳಿಗೆ ಶಿಕ್ಷಣ ನಿರಾಕರಿಸಿದರೆ ದೇಶಕ್ಕೆ ಅನ್ಯಾಯ ಮಾಡಿದಂತೆ: ಎಚ್‌ಡಿಕೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 28 ಮಾರ್ಚ್ 2022, 4:06 IST
Last Updated 28 ಮಾರ್ಚ್ 2022, 4:06 IST
ಎಚ್‌.ಡಿ.ಕುಮಾರಸ್ವಾಮಿ
ಎಚ್‌.ಡಿ.ಕುಮಾರಸ್ವಾಮಿ   

ಬೆಂಗಳೂರು: ಹೆಣ್ಣು ಮಕ್ಕಳಿಗೆ ಶಿಕ್ಷಣ ನಿರಾಕರಿಸಿದರೆ ದೇಶಕ್ಕೆ ಅನ್ಯಾಯ ಮಾಡಿದಂತೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ತಿಳಿಸಿದ್ದಾರೆ.

ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಹಿನ್ನೆಲೆಯಲ್ಲಿ ಸರಣಿ ಟ್ವೀಟ್‌ ಮಾಡಿರುವ ಅವರು, ಎಲ್ಲ ಸಮುದಾಯಗಳ ಮಕ್ಕಳು ತಮ್ಮ ಭಾವನೆಗಳನ್ನು ಬದಿಗಿರಿಸಿ ಪರೀಕ್ಷೆ ಬರೆಯಬೇಕು ಎಂದು ಮನವಿ ಮಾಡಿದ್ದಾರೆ.

‘ಇಂದಿನಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಆರಂಭವಾಗುತ್ತಿದ್ದು, ಪರೀಕ್ಷೆಗೆ ಹಾಜರಾಗುತ್ತಿರುವ ಎಲ್ಲ ಮಕ್ಕಳಿಗೂ ನನ್ನ ಶುಭ ಹಾರೈಕೆಗಳು. ಶೈಕ್ಷಣಿಕ ಜೀವನದಲ್ಲಿ 10ನೇ ತರಗತಿ ಪರೀಕ್ಷೆ ಅತ್ಯಂತ ಪ್ರಮುಖ ಘಟ್ಟ. ಪ್ರತಿಯೊಬ್ಬರೂ ಆತ್ಮವಿಶ್ವಾಸದಿಂದ ಪರೀಕ್ಷೆ ಬರೆಯಬೇಕು ಎಂಬುದು ನನ್ನ ಕಳಕಳಿ’ ಎಂದು ಎಚ್‌ಡಿಕೆ ತಿಳಿಸಿದ್ದಾರೆ.

ADVERTISEMENT

‘ಕಳೆದ ಕೆಲ ದಿನಗಳಲ್ಲಿ ಉಂಟಾದ ಅಹಿತಕರ ಘಟನೆಗಳ ಬಗ್ಗೆ ಮಕ್ಕಳು ತಲೆಕೆಡಿಸಿಕೊಳ್ಳುವುದು ಬೇಡ. ಭವಿಷ್ಯ ಮುಖ್ಯ ಎಂಬುದನ್ನು ಎಲ್ಲರೂ ಮನಗಾಣಬೇಕು. ಪೋಷಕರು ಕೂಡ ನಿರ್ಲಕ್ಷ್ಯ ಮಾಡಬಾರದು. ಎಳೆ ಮನಸ್ಸಿನ ಮಕ್ಕಳ ಮೇಲೆ ಭಾವನೆಗಳನ್ನು ಹೇರುವುದು ಬೇಡ’ ಎಂದು ಹೇಳಿದ್ದಾರೆ.

‘ಎಲ್ಲ ಸಮುದಾಯಗಳ ಮಕ್ಕಳು ತಮ್ಮ ಭಾವನೆಗಳನ್ನು ಬದಿಗಿರಿಸಿ ಪರೀಕ್ಷೆ ಬರೆಯಬೇಕು. ಯಾವುದೇ ಕಾರಣಕ್ಕೂ ಪರೀಕ್ಷೆ ತಪ್ಪಿಸುವುದು ಬೇಡ. ಮುಂದಿನ ದಿನಗಳಲ್ಲಿ ಮಕ್ಕಳ ಭಾವನೆಗಳನ್ನು ಗೌರವಿಸಿ ಉಂಟಾಗಿರುವ ತ್ವೇಷಮಯ ವಾತಾವರಣವನ್ನು ತಿಳಿಗೊಳಿಸುವ ಸಂದರ್ಭ ಬಂದೇ ಬರುತ್ತದೆ’ ಎಂದು ಕುಮಾರಸ್ವಾಮಿ ಟ್ವೀಟಿಸಿದ್ದಾರೆ.

‘ಹೆಣ್ಣು ಮಕ್ಕಳಿಗೆ ಶಿಕ್ಷಣ ನಿರಾಕರಿಸಿದರೆ ದೇಶಕ್ಕೆ ಅನ್ಯಾಯ ಮಾಡಿದಂತೆ. ‘ಬೇಟಿ ಬಚಾವೋ, ಬೇಟಿ ಪಡಾವೋʼ ಕಾರ್ಯಕ್ರಮ ಕೇವಲ ಕಾಗದ ಮೇಲೆ ಅಥವಾ ಭಾಷಣಕ್ಕೆ ಮಾತ್ರ ಸೀಮಿತವಾಗಬಾರದು. ಹೆಣ್ಣುಮಗುವಿಗೆ ಶಿಕ್ಷಣ ಕೊಡದಿದ್ದರೆ ದೇಶವನ್ನು ಕತ್ತಲೆಗೆ ದೂಡಿದಂತೆ ಎನ್ನುವುದನ್ನು ಯಾರೂ ಮರೆಯಬಾರದು’ ಎಂದೂ ಅವರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.