ADVERTISEMENT

ಎಸ್ಸೆಸ್ಸೆಲ್ಸಿ, ಪಿಯುಸಿ: ಸದ್ಯಕ್ಕೆ ನಿಗದಿಯಂತೆ ಪರೀಕ್ಷೆ -ಸುರೇಶ್ ಕುಮಾರ್

ಪರಿಸ್ಥಿತಿ ಅವಲೋಕಿಸಿ ಅಗತ್ಯ ನಿರ್ಧಾರ: ಶಿಕ್ಷಣ ಸಚಿವ ಸುರೇಶ್‌ ಕುಮಾರ್

​ಪ್ರಜಾವಾಣಿ ವಾರ್ತೆ
Published 17 ಏಪ್ರಿಲ್ 2021, 7:21 IST
Last Updated 17 ಏಪ್ರಿಲ್ 2021, 7:21 IST
ಎಸ್‌.ಸುರೇಶ್‌ ಕುಮಾರ್‌
ಎಸ್‌.ಸುರೇಶ್‌ ಕುಮಾರ್‌   

ಹನೂರು: ಈಗಿರುವ ಪರಿಸ್ಥಿತಿಯಲ್ಲಿ, ರಾಜ್ಯದಲ್ಲಿ ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿ ಪರೀಕ್ಷೆ ನಿಗದಿಯಂತೆ ನಡೆಯಲಿವೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್‌.ಸುರೇಶ್‌ ಕುಮಾರ್ ಶುಕ್ರವಾರ ಹೇಳಿದರು.

ತಾಲ್ಲೂಕಿನ ಲೊಕ್ಕನಹಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಜೂನ್‌ 21ರಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಸಲು ತೀರ್ಮಾನಿಸಲಾಗಿದೆ. ಕಳೆದ ವರ್ಷ, ಪರೀಕ್ಷೆ ಸಂದರ್ಭದಲ್ಲಿ ಪಾಲಿಸಿದ ಮಾನದಂಡಗಳು ಸಾಕೇ ಅಥವಾ ಹೊಸದಾಗಿ ಇನ್ನೇನಾದರೂ ರೂಪಿಸಬೇಕೇ ಎಂಬ ಬಗ್ಗೆ ಆರೋಗ್ಯ ಇಲಾಖೆಯನ್ನು ಕೇಳಿದ್ದೇವೆ. ಶೀಘ್ರದಲ್ಲಿ ವರದಿ ಬರಲಿದೆ. ಇನ್ನೂ ಸಮಯವಿರುವುದರಿಂದ ಕಾಲ ಕಾಲಕ್ಕೆ ಅಗತ್ಯ ನಿರ್ಧಾರ ತೆಗೆದುಕೊಳ್ಳಲಾಗುವುದು’ ಎಂದರು.

‘ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಸಬೇಕು ಎಂಬ ಅಭಿಪ್ರಾಯ ವ್ಯಕ್ತವಾಗಿದೆ. ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಕೂಡ ಪರೀಕ್ಷೆ ನಡೆಯಬೇಕು ಎಂದು ಪತ್ರ ಬರೆದಿದ್ದಾರೆ. ಪರಿಸ್ಥಿತಿ ಅವಲೋಕಿಸಿ ನಿರ್ಧಾರ ಕೈಗೊಳ್ಳಲಾಗುವುದು’ ಎಂದು ಸಚಿವರು ಹೇಳಿದರು.

ADVERTISEMENT

‘1 ರಿಂದ 5 ಮತ್ತು 6 ರಿಂದ 9 ನೇ ತರಗತಿ ಪರೀಕ್ಷೆ ಬಗ್ಗೆ ಇನ್ನೂ ತೀರ್ಮಾನ ಆಗಿಲ್ಲ. 1ರಿಂದ 9 ನೇ ತರಗತಿವರೆಗೆ ಪರೀಕ್ಷೆ ನಡೆಸುವ ಬಗ್ಗೆ ತಜ್ಞರೊಂದಿಗೆ ಚರ್ಚಿಸಲಾಗಿದ್ದು, ಶೀಘ್ರವೇ ಈ ಬಗ್ಗೆ ನಿರ್ಧರಿಸಲಾಗುವುದು’ ಎಂದು ಪ್ರಶ್ನೆಯೊಂದಕ್ಕೆ ಅವರು ಉತ್ತರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.