ADVERTISEMENT

ಎಸ್ಸೆಸ್ಸೆಲ್ಸಿ ವಿಜ್ಞಾನ ಪರೀಕ್ಷೆ: ಶೇ 97.93ರಷ್ಟು ಹಾಜರಾತಿ: ಸುರೇಶ್ ಕುಮಾರ್

​ಪ್ರಜಾವಾಣಿ ವಾರ್ತೆ
Published 29 ಜೂನ್ 2020, 12:55 IST
Last Updated 29 ಜೂನ್ 2020, 12:55 IST
ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್
ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್    

ಬೆಂಗಳೂರು: ನಾಲ್ಕನೇ ದಿನವಾದ ಸೋಮವಾರ ನಡೆದ ಎಸ್ಸೆಸ್ಸೆಲ್ಸಿ ವಿಜ್ಞಾನ, ರಾಜ್ಯಶಾಸ್ತ್ರ, ಸಂಗೀತ ಪರೀಕ್ಷೆಗೆಗಳಿಗೆ ಮತ್ತಿತರ ಪರೀಕ್ಷೆಗಳು ಸಾಮಾಜಿಕ ಸುರಕ್ಷಿತ ವಾತಾವರಣದಲ್ಲಿ ಯಶಸ್ವಿಯಾಗಿ ನಡೆದಿವೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.

ಸೋಮವಾರದ ಪರೀಕ್ಷೆಗಳ ನಂತರ ಸುದ್ದಿಗೋಷ್ಠಿಯಲ್ಲಿ ಪರೀಕ್ಷೆಗಳ ಕುರಿತು ಮಾಹಿತಿ ನೀಡಿದ ಅವರು, ವಿಜ್ಞಾನ, ರಾಜ್ಯಶಾಸ್ತ್ರ ಹಾಗೂ ಸಂಗೀತ ಪರೀಕ್ಷೆಗೆಗಳಿಗೆ ನೋಂದಾಯಿತ 7,91,102 ವಿದ್ಯಾರ್ಥಿಗಳ (ವಿಜ್ಞಾನ-7,90,681, ರಾಜ್ಯಶಾಸ್ತ್ರ-419, ಸಂಗೀತ- 02) ಪೈಕಿ 7,74,729 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆಂದು ಹೇಳಿದರು.

ಒಟ್ಟಾರೆ ಶೇ. 97.93ರಷ್ಟು ಇಂದು ಹಾಜರಾತಿ ಇದ್ದು, 16,373 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ. (ಕಳೆದ 2018-19ನೇ ಸಾಲಿಗೆ 7,79,993 ವಿದ್ಯಾರ್ಥಿಗಳ ಪೈಕಿ 7,69,778 ವಿದ್ಯಾರ್ಥಿಗಳು ಹಾಜರಾಗಿದ್ದು, 10,215 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದರು. ಶೇ. 98.69 ಹಾಜರಾತಿ ಇತ್ತು. ರಾಜ್ಯಶಾಸ್ತ್ರ- 4 ಗೈರು ಹಾಜರಿ, ಸಂಗೀತ- ಇಬ್ಬರೂ ಹಾಜರಾಗಿದ್ದಾರೆ ಎಂದು ಅವರು ವಿವರಿಸಿದರು.

ADVERTISEMENT

ಮೊದಲ ಬಾರಿಗೆ 7,45,033 ಶಾಲಾ ವಿದ್ಯಾರ್ಥಿಗಳು ಹಾಗೂ 20,976 ಖಾಸಗಿ ವಿದ್ಯಾರ್ಥಿಗಳು ಪರೀಕ್ಷೆ ತೆಗೆದುಕೊಂಡಿದ್ದಾರೆ. ಕಂಟೈನ್‍ಮೆಂಟ್ ಪ್ರದೇಶಗಳ 2942 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಕೋವಿಡೇತರ ಅನಾರೋಗ್ಯ ಕಾರಣಗಳಿಂದ ವಿಶೇಷ ಕೊಠಡಿಗಳಲ್ಲಿ 491ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಪರೀಕ್ಷಾ ಅಕ್ರಮಗಳಲ್ಲಿ ಭಾಗಿಯಾದ 03 ವಿದ್ಯಾರ್ಥಿಗಳನ್ನು (ಧಾರವಾಡ-2, ರಾಯಚೂರು-1) ಡಿಬಾರ್ ಮಾಡಲಾಗಿದೆ ಎಂದು ಸಚಿವರು ತಿಳಿಸಿದರು.

ಸರ್ಕಾರಿ/ಖಾಸಗಿ ವಸತಿ ನಿಲಯಗಳಲ್ಲಿ ಇದ್ದು, 1442ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ನೆರೆ ರಾಜ್ಯಗಳಿಂದ 645 ವಿದ್ಯಾರ್ಥಿಗಳು ಪರೀಕ್ಷೆ ಬರೆಯಬೇಕಿದ್ದು, 53 ವಿದ್ಯಾರ್ಥಿಗಳು ಗೈರು ಹಾಜರಿಯಾಗಿ 592 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. 12,644 ವಲಸೆ ವಿದ್ಯಾರ್ಥಿಗಳು ಪರೀಕ್ಷೆಗೆ ನೊಂದಾಯಿಸಿದ್ದು, 12,539 ವಿದ್ಯಾರ್ಥಿಗಳು ಹಾಜರಾಗಿದ್ದರೆ, 105 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆಂದು ಸುರೇಶ್ ಕುಮಾರ್ ತಿಳಿಸಿದರು.

ಹೋಂ ಕ್ವಾರಂಟೈನಲ್ಲಿ ಹಾಗೂ ಕೋವಿಡ್ ಪಾಸಿಟೀವ್ ಎಂದು ಗುರುತಿಸಲ್ಪಟ್ಟ ವಿದ್ಯಾರ್ಥಿಗಳಿಗೆ ಈಗಿನ ಪರೀಕ್ಷೆಯನ್ನು ಬರೆಯುವುದರಿಂದ ವಿನಾಯ್ತಿ ನೀಡಲಾಗಿದೆ. ಈ ಎಲ್ಲರಿಗೂ ಸಕಾರಣದ ಆಧಾರದ ಮೇಲೆ ಮುಂದಿನ ಪೂರಕ ಪರೀಕ್ಷೆಯಲ್ಲಿ ಅವಕಾಶ ನೀಡುವ ವ್ಯವಸ್ಥೆ ಮಾಡಲಾಗುವುದು. ಪರೀಕ್ಷಾ ಕೇಂದ್ರಕ್ಕೆ 3215 ಬಸ್ ಹಾಗೂ ಇತರೆ ವಾಹನಗಳನ್ನು ಒಪ್ಪಂದದ ಮೇರೆಗೆ ಪಡೆದು ಯಾವುದೇ ಸಮಸ್ಯೆಯಾಗದ ರೀತಿಯಲ್ಲಿ ಸಾರಿಗೆ ಸೌಲಭ್ಯ ಒದಗಿಸಲಾಗಿದೆ ಎಂದು ಸಚಿವರು ಹೇಳಿದರು.

ಪರೀಕ್ಷಾ ಕೇಂದ್ರಗಳಿಗೆ ಭೇಟಿ:ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಗಳಿಗೆ ಸೇರಿದ 14 ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಅಲ್ಲಿನ ಎಲ್ಲ ವ್ಯವಸ್ಥೆಗಳನ್ನು ಗಮನಿಸಿದ್ದೇನೆ. ಎಲ್ಲ ಕಡೆ ಅಚ್ಚುಕಟ್ಟಾದ ವ್ಯವಸ್ಥೆಗಳನ್ನು ಮಾಡಲಾಗಿದೆ. ಮಕ್ಕಳು ನೆಮ್ಮದಿ ಮತ್ತು ಆಹ್ಲಾದಕರ ವಾತಾವರಣದಲ್ಲಿ ಪರೀಕ್ಷೆ ಬರೆಯುತ್ತಿದ್ದುದು ಕಂಡುಬಂತು ಎಂದು ಅವರು ಹೇಳಿದರು.

ಸಚಿವ ಸಹೋದ್ಯೋಗಿಗಳೊಂದಿಗೆ ಚರ್ಚೆ:ಇಂದು ನನ್ನ ಹಲವಾರು ಸಂಪುಟ ಸಹೋದ್ಯೋಗಿಗಳೊಂದಿಗೆ ಪರೀಕ್ಷೆಯ ಬಗ್ಗೆ ಚರ್ಚಿಸಿದ್ದೇನೆ. ಜಗದೀಶ್ ಶೆಟ್ಟರ್, ಬಸವರಾಜ ಎಸ್. ಬೊಮ್ಮಾಯಿ, ಸಿ.ಟಿ. ರವಿ, ಜೆ.ಸಿ. ಮಾಧುಸ್ವಾಮಿ, ವಿ. ಸೋಮಣ್ಣ, ಸಿ.ಸಿ. ಪಾಟೀಲ, ಎಸ್.ಟಿ. ಸೋಮಶೇಖರ್ ಸೇರಿದಂತೆ ಎಲ್ಲ ಸಚಿವರು ಶಿಕ್ಷಣ ಇಲಾಖೆಯ ಈ ಕ್ರಮದ ಕುರಿತಂತೆ ವಿಶೇಷವಾಗಿ ಸರ್ಕಾರದ ಪರಿಶ್ರಮದ ಬಗ್ಗೆ ಅತ್ಯಂತ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ ಎಂದು ಸುರೇಶ್ ಕುಮಾರ್ ತಿಳಿಸಿದರು.

ಜಿಲ್ಲಾಡಳಿತಗಳ ಬಗ್ಗೆ ಮೆಚ್ಚುಗೆ:ಪರೀಕ್ಷೆ ಸಿದ್ಧತೆ ಕುರಿತಂತೆ ನಾನು ಈಗ್ಗೆ ಐದು ತಿಂಗಳಿನಿಂದಲೂ ನಾನು ಎಲ್ಲ ಜಿಲ್ಲಾಡಳಿತಗಳೊಂದಿಗೆ ಈ ಸಂಬಂಧದಲ್ಲಿ ಸಂಪರ್ಕದಲ್ಲಿದ್ದೇನೆ. ಹಲವಾರು ಬಾರಿ ಅವರೊಂದಿಗೆ ಸಭೆ ನಡೆಸಿದ್ದೇನೆ. ಕರೋನಾ ಮೊದಲು ಮತ್ತು ನಂತರದ ಸಾಮಾಜಿಕ ಪರಿಸ್ಥಿತಿಯಲ್ಲಿ ಪರೀಕ್ಷೆ ನಡೆಸುವ ಕುರಿತಂತೆ ಜಿಲ್ಲಾಡಳಿತಗಳು ಕೈಗೊಂಡ ಕ್ರಮಗಳು, ವಿದ್ಯಾರ್ಥಿಗಳ ಪ್ರತಿಸ್ಪಂದನೆ ಇಡೀ ದೇಶಕ್ಕೇ ಮಾದರಿಯಾಗುವಂತೆ ಉಪಕ್ರಮಗಳಾಗಿವೆ ಎಂದು ಹೇಳಲು ಹೆಮ್ಮೆಯಾಗುತ್ತದೆ ಎಂದು ಅವರು ಹೇಳಿದರು.

ಆರೋಗ್ಯ ಇಲಾಖೆಯ ಸ್ಪಷ್ಟ ಮಾರ್ಗದರ್ಶನ:ಈಗಾಗಲೇ ರಾಜ್ಯಾದ್ಯಂತ ಕೋವಿಡ್ ಸೋಂಕು ಹೊಂದಿದ ವಿದ್ಯಾರ್ಥಿಗಳಿಗೆ ಪ್ರಸ್ತುತ ನಡೆಯುತ್ತಿರುವ ಎಸ್.ಎಸ್.ಎಲ್.ಸಿ ಪರೀಕ್ಷೆಗಳನ್ನು ಬರೆಯಲು ಇವರೆಲ್ಲರಿಗೆ ವಿನಾಯಿತಿ ನೀಡಲಾಗಿದೆ. ಆದರೆ ಯಾವುದೇ ರೋಗ ಲಕ್ಷಣಗಳಲ್ಲಿದ ವಿದ್ಯಾರ್ಥಿಗಳಿಗೆ ಆರೋಗ್ಯ ಇಲಾಖೆ ನಡೆಸುವ ರಾಂಡಮ್ ಟೆಸ್ಟ್ ನಲ್ಲಿ ಕೋವಿಡ್ ಸೋಂಕು ಹರಡಿರುವುದು ದೃಢಪಟ್ಟಲ್ಲಿ ಅಂತಹ ವಿದ್ಯಾರ್ಥಿಯ ಸುತ್ತಮುತ್ತ ಕುಳಿತು ಪರೀಕ್ಷೆ ಬರೆದಿರುವ ವಿದ್ಯಾರ್ಥಿಗಳಿಗೆ ಬಾಕಿ ಉಳಿದ ಪರೀಕ್ಷೆಗಳನ್ನು ಬರೆಯಲು ಅವಕಾಶ ನೀಡಬಹುದೇ ಎಂಬ ಬಗ್ಗೆ ಆರೋಗ್ಯ ಇಲಾಖೆಯ ಸ್ಪಷ್ಟೀಕರಣ ಕೋರಲಾಗಿತ್ತು. ಆರೋಗ್ಯ ಇಲಾಖೆ ಕೆಳಕಂಡಂತೆ ಸ್ಪಷ್ಟೀಕರಣ ನೀಡಿದೆ ಎಂದು ಸಚಿವರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.