ADVERTISEMENT

ಪರಿಶಿಷ್ಟರ ಕಲ್ಯಾಣ: ₹28 ಸಾವಿರ ಕೋಟಿ ಅನುದಾನಕ್ಕೆ ಅನುಮೋದನೆ

ಅಭಿವೃದ್ಧಿ ಪರಿಷತ್‌ ಸಭೆಯಲ್ಲಿ ಅನುಮೋದನೆ

​ಪ್ರಜಾವಾಣಿ ವಾರ್ತೆ
Published 20 ಮೇ 2022, 19:45 IST
Last Updated 20 ಮೇ 2022, 19:45 IST
ಬಸವರಾಜ ಬೊಮ್ಮಾಯಿ
ಬಸವರಾಜ ಬೊಮ್ಮಾಯಿ   

ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಅಭಿವೃದ್ಧಿಗಾಗಿ ವಿವಿಧ ಕಾರ್ಯಕ್ರಮಗಳಿಗೆ ಎಸ್‌ಸಿಎಸ್‌ಪಿ/ಟಿಎಸ್‌ಪಿ ಯೋಜನೆಯಡಿ ಈ ಸಾಲಿನಲ್ಲಿ ₹ 28234.36 ಕೋಟಿ ಮೊತ್ತಕ್ಕೆ ಅನುಮೋದನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ವಿಧಾನಸೌಧದಲ್ಲಿ ಶುಕ್ರವಾರ ನಡೆದ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ರಾಜ್ಯ ಅಭಿವೃದ್ಧಿ ಪರಿಷತ್ತಿನ ಸಭೆಯ ಬಳಿಕ ಅವರು ಸುದ್ದಿಗಾರರ ಜತೆ ಮಾತನಾಡಿ ಈ ವಿಷಯ ತಿಳಿಸಿದರು.

ಕಳೆದ ವರ್ಷದ ಅನುದಾನದಲ್ಲಿ ಎಷ್ಟು ಬಳಕೆಯಾಗಿದೆ ಮತ್ತು ಎಷ್ಟು ಬಾಕಿ ಇದೆ ಎನ್ನುವುದನ್ನು ಸಭೆಯಲ್ಲಿ ಪರಿಶೀಲಿಸಲಾಯಿತು. ಕೆಲವು ಯೋಜನೆಗಳಲ್ಲಿ ಮಾತ್ರ ಬದಲಾವಣೆ ಮಾಡಿ ಉಳಿದವುಗಳಿಗೆ ಅನುಮೋದನೆ ನೀಡಲಾಗಿದೆ. ಬಜೆಟ್‌ನಲ್ಲಿ ಇದಕ್ಕೆ ಅವಕಾಶಕಲ್ಪಿಸಲಾಗಿತ್ತು, ಪರಿಷತ್ತಿನ ಸಭೆಯಲ್ಲಿಇದಕ್ಕೆ ಒಪ್ಪಿಗೆ ಪಡೆಯಲಾಯಿತು ಎಂದು ಹೇಳಿದರು.

ADVERTISEMENT

ಸಮಾಜ ಕಲ್ಯಾಣ ಇಲಾಖೆಗೆ ₹ 500 ಕೋಟಿ ಹೆಚ್ಚಿಗೆ ನೀಡಲಾಗಿದೆ. ಕೃಷಿ ಇಲಾಖೆಗೆ ₹ 851 ಕೋಟಿ ಇದ್ದ ಅನುದಾನವನ್ನು ₹1,061 ಕೋಟಿಗೆ ಏರಿಸಲಾಗಿದೆ. ತೋಟಗಾರಿಕೆ ಇಲಾಖೆಗೆ ₹142 ಕೋಟಿ ಇದ್ದ ಅನುದಾನವನ್ನು ₹187 ಕೋಟಿಗೆ ಹೆಚ್ಚಿಸಲಾಗಿದೆ. ಆರೋಗ್ಯ ಇಲಾಖೆಗೆ ಕಳೆದ ವರ್ಷ ₹ 899 ಕೋಟಿ ನೀಡಲಾಗಿತ್ತು. ಈ ವರ್ಷ ₹1,300 ಕೋಟಿಗೆ ಹೆಚ್ಚಿಸಲಾಗಿದೆ ಎಂದು ಬೊಮ್ಮಾಯಿ ವಿವರಿಸಿದರು.

ಸಹಕಾರ ಇಲಾಖೆಯಲ್ಲಿ ಪರಿಶಿಷ್ಟ ಜಾತಿ, ಪಂಗಡಗಳ ಸಮುದಾಯದ ಜನರಿಗೆ ಸಹಕಾರ ಸಂಘಗಳಲ್ಲಿ ಸದಸ್ಯತ್ವ ನೀಡಲು ₹203 ಕೋಟಿ ಒದಗಿಸಲಾಗಿದೆ. ಕಂದಾಯ ಇಲಾಖೆಯಲ್ಲಿ ಪಿಂಚಣಿ ಮೊತ್ತ ಹೆಚ್ಚಳ ಮಾಡಿದ್ದು, ಕಳೆದ ವರ್ಷ ₹2,900 ಕೋಟಿ ಇದ್ದ ಅನುದಾನವನ್ನು ಈ ವರ್ಷ ₹3,748 ಕೋಟಿ ಹೆಚ್ಚಿಸಲಾಗಿದೆ. ಕೌಶಲಾಭಿವೃದ್ಧಿಗೆ ₹180 ಕೋಟಿ ಮತ್ತು ಗಂಗಾ ಕಲ್ಯಾಣ ಯೋಜನೆಗೆ ₹9,000 ಕೋಟಿಗೆ ಅನುಮೋದನೆ ನೀಡಲಾಗಿದೆ ಎಂದರು.

ಡಾ.ಬಾಬಾ ಸಾಹೇಬ್ ಅಂಬೇಡ್ಕರ್‌ ಅವರು ಕರ್ನಾಟಕದಲ್ಲಿ ಪ್ರವಾಸ ಮಾಡಿದ್ದ ಸ್ಥಳಗಳ ಅಭಿವೃದ್ಧಿಗೆ ಒಟ್ಟು ₹ 20 ಕೋಟಿ ಮೀಸಲಿಡಾಗಿದೆ ಎಂದು ಬೊಮ್ಮಾಯಿ ತಿಳಿಸಿದರು.

ಮಲೆನಾಡು ಅಭಿವೃದ್ಧಿ ಮಂಡಳಿ, ಬಯಲುಸೀಮೆ ಅಭಿವೃದ್ಧಿ ಮಂಡಳಿ ಮತ್ತು ಕರಾವಳಿ ಅಭಿವೃದ್ಧಿ ಮಂಡಳಿ ವ್ಯಾಪ್ತಿಯ ಕ್ಷೇತ್ರಗಳ ಶಾಸಕರಿಗೆ ತಲಾ ₹ 1 ಕೋಟಿ ನೀಡಲಾಗುವುದು ಎಂದೂ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.