ಬೆಂಗಳೂರು: ಕೈಗಾರಿಕೆಗಳ ಸ್ಥಾಪನೆಗೆ ಉತ್ತೇಜನಕ್ಕಾಗಿ2022ನೇ ಸಾಲಿನ ಕರ್ನಾಟಕ ಸ್ಟಾಂಪು (ಎರಡನೇ ತಿದ್ದುಪಡಿ) ಮಸೂದೆಗೆ ವಿಧಾನಸಭೆ ಅಂಗೀಕಾರ ನೀಡಿತು.
ಮಸೂದೆಯನ್ನು ಮಂಡಿಸಿದ ಕಂದಾಯ ಸಚಿವ ಆರ್.ಅಶೋಕ ಮಾತನಾಡಿ, ‘ನಮ್ಮ ರಾಜ್ಯದಲ್ಲಿ ಕೈಗಾರಿಕೆಗಳಿಗೆ ವಿಧಿಸುತ್ತಿದ್ದ ಮುದ್ರಾಂಕ ಶುಲ್ಕ ಜಾಸ್ತಿ ಇದ್ದ ಕಾರಣಕೈಗಾರಿಕೋದ್ಯಮಿಗಳು ಕೈಗಾರಿಕೆಗಳ ಸ್ಥಾಪನೆಗೆ ಹಿಂದೇಟು ಹಾಕುತ್ತಿದ್ದರು. ಮಹಾರಾಷ್ಟ್ರ ಹಾಗೂ ಗುಜರಾತ್ನಲ್ಲಿ ಮುದ್ರಾಂಕ ಶುಲ್ಕ ಕಡಿಮೆ ಇದ್ದು, ಅಲ್ಲಿ ಕೈಗಾರಿಕೆಗಳ ಸ್ಥಾಪನೆಗೆ ಮುಂದಾಗುತ್ತಿದ್ದಾರೆ. ಹೀಗಾಗಿ, ನಮ್ಮ ರಾಜ್ಯದಲ್ಲೂ ಪ್ರಕ್ರಿಯೆ ಸರಳಗೊಳಿಸಲು ತೀರ್ಮಾನಿಸಲಾಗಿದೆ. ಕೈಗಾರಿಕೆಗಳ ಮುದ್ರಾಂಕ ಶುಲ್ಕ ₹25 ಕೋಟಿ ದಾಟದಂತೆ ಈ ಮಸೂದೆಯಲ್ಲಿ ಅನುವು ಮಾಡಿಕೊಡಲಾಗಿದೆ’ ಎಂದರು.
ಆರ್ಥಿಕ ಅಪರಾಧಗಳಿಗೆ ಒಳಗಾದ ಸಂತ್ರಸ್ತರ ಸ್ವತ್ತುಗಳನ್ನು ವಶಪಡಿಸಿಕೊಳ್ಳುವ ಉದ್ದೇಶಕ್ಕಾಗಿ ಕ್ರಿಮಿನಲ್ ಕಾನೂನು ತಿದ್ದುಪಡಿ ಮಸೂದೆಗೂ ಸಹ ಒಪ್ಪಿಗೆ ನೀಡಲಾಯಿತು.
ಮಸೂದೆ ಮಂಡಿಸಿದ ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ, ‘ಆರ್ಥಿಕ ಅಪರಾಧಗಳ ವಿಚಾರಣೆ ನಡೆಸುವ ಅಧಿಕಾರ ಜಿಲ್ಲಾ ನ್ಯಾಯಾಧೀಶರಿಗೆ ಇತ್ತು. ಈಗ ಆ ಅಧಿಕಾರ ವಿಸ್ತರಣೆ ಮಾಡಲಾಗುತ್ತಿದ್ದು, ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಿಗೆ ಹಾಗೂ ವಿಚಾರಣಾ ನ್ಯಾಯಾಲಯಗಳಿಗೆ ಸಹ ಅಧಿಕಾರ ನೀಡಲಾಗುತ್ತಿದೆ. ಜತೆಗೆ, ಅಕ್ರಮ ಹಣ ವರ್ಗಾವಣೆಯ ತನಿಖೆಯಲ್ಲಿ ರಾಜ್ಯ ಸರ್ಕಾರ ಪಾತ್ರ ಹೊಂದಿಲ್ಲ. ಆರೋಪಿಗಳ ಆಸ್ತಿ ಜಪ್ತಿ ಮಾಡುವುದಕ್ಕೆ ಜಾರಿ ನಿರ್ದೇಶನಾಲಯ ಮಾತ್ರ ಅಧಿಕೃತ ಏಜೆನ್ಸಿ. ಇದೀಗ, ರಾಜ್ಯ ಸರ್ಕಾರಕ್ಕೂ ಅಧಿಕಾರ ಸಿಗಲಿದೆ’ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.