ವಿದ್ಯುತ್ ಚಾಲಿತ ಕ್ಷಿಪ್ರ ಸಾರಿಗೆ ವ್ಯವಸ್ಥೆ ಬಗ್ಗೆ ಸ್ವಿಡ್ಜರ್ಲೆಂಡ್ನ ಕಂಪನಿಗಳ ಪ್ರತಿನಿಧಿಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪ್ರಾತ್ಯಕ್ಷಿಕೆ ನೀಡಿದರು.
ಬೆಂಗಳೂರು: ಹುಬ್ಬಳ್ಳಿ ಮತ್ತು ಧಾರವಾಡದ ಮಧ್ಯೆ ‘ವಿದ್ಯುತ್ ಚಾಲಿತ ಕ್ಷಿಪ್ರ ಸಾರಿಗೆ (ಎಲೆಕ್ಟ್ರಿಕ್ ರ್ಯಾಪಿಡ್ ಟ್ರಾನ್ಸಿಟ್: ಇ–ಆರ್ಟಿ)’ ವ್ಯವಸ್ಥೆಯ ಪ್ರಾಯೋಗಿಕ ಸಂಚಾರ ಸಂಬಂಧ ಒಪ್ಪಂದಕ್ಕೆ ರಾಜ್ಯ ಸರ್ಕಾರ ಸಹಿ ಹಾಕಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಶನಿವಾರ ನಡೆದ ಸಭೆಯಲ್ಲಿ ಎಚ್ಇಎಸ್ಎಸ್ಎಜಿ, ಎಚ್ಇಎಸ್ಎಸ್ ಇಂಡಿಯಾ ಮತ್ತು ಎಸ್ಎಸ್ಜಿ ಎಜಿ ಸಂಸ್ಥೆಗಳು ‘ಇ–ಆರ್ಟಿ’ ವ್ಯವಸ್ಥೆಯ ಪ್ರಾತ್ಯಕ್ಷಿಕೆಯನ್ನು ನೀಡಿದವು.
ಇ–ಆರ್ಟಿ ಕುರಿತ ಅಧ್ಯಯನಕ್ಕಾಗಿ ಸ್ವಿಡ್ಜರ್ಲೆಂಡ್ಗೆ ಭೇಟಿ ನೀಡಿದ್ದ, ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು ಯೋಜನೆಯ ಕಾರ್ಯಸಾಧ್ಯತೆಯನ್ನು ಸಭೆಯಲ್ಲಿ ವಿವರಿಸಿದರು.
ಹುಬ್ಬಳ್ಳಿ–ಧಾರವಾಡದ ಪ್ರಾಯೋಗಿಕ ಯೋಜನೆ ಯಶಸ್ವಿಯಾದರೆ, ರಾಜ್ಯದ ಎರಡನೇ ಹಂತದ ನಗರಗಳಲ್ಲೂ ಜಾರಿಯ ಬಗ್ಗೆ ಪರಿಶೀಲನೆ ನಡೆಸಲಾಗುತ್ತದೆ ಎಂದು ಸಚಿವ ಸಂತೋಷ್ ಲಾಡ್ ತಿಳಿಸಿದರು.
ಈ ಸಂಬಂಧ ಒಪ್ಪಂದಕ್ಕೆ ಸಹಿ ಹಾಕಲು ಒಪ್ಪಿಗೆ ಸೂಚಿಸಿದ ಸಿದ್ದರಾಮಯ್ಯ ಅವರು, ಮೂರು ತಿಂಗಳ ಒಳಗೆ ವಿಸ್ತೃತ ಯೋಜನಾ ವರದಿ ಸಲ್ಲಿಸುವಂತೆ ಸೂಚಿಸಿದರು.
ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಸಮಾಜ ಕಲ್ಯಾಣ ಸಚಿವ ಎಚ್.ಸಿ.ಮಹದೇವಪ್ಪ, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಸಭೆಯಲ್ಲಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.