ADVERTISEMENT

ಶಿರಾಡಿ ಘಾಟಿ ಹೆದ್ದಾರಿ ವಿಸ್ತರಣೆಗೆ ರಾಜ್ಯ ಅಸಹಕಾರ: ಚೌಟ ಆರೋಪ

​ಪ್ರಜಾವಾಣಿ ವಾರ್ತೆ
Published 12 ಮಾರ್ಚ್ 2025, 15:25 IST
Last Updated 12 ಮಾರ್ಚ್ 2025, 15:25 IST
<div class="paragraphs"><p>ದಕ್ಷಿಣ ಕನ್ನಡ ಸಂಸದ ಬ್ರಿಜೇಶ್‌ ಚೌಟ ಅವರು ಕೇಂದ್ರ ಭೂಸಾರಿಗೆ ಹಾಗೂ ಹೆದ್ದಾರಿ ಸಚಿವ ನಿತಿನ್‌ ಗಡ್ಕರಿ ಅವರನ್ನು ಭೇಟಿ ಮಾಡಿದರು</p></div>

ದಕ್ಷಿಣ ಕನ್ನಡ ಸಂಸದ ಬ್ರಿಜೇಶ್‌ ಚೌಟ ಅವರು ಕೇಂದ್ರ ಭೂಸಾರಿಗೆ ಹಾಗೂ ಹೆದ್ದಾರಿ ಸಚಿವ ನಿತಿನ್‌ ಗಡ್ಕರಿ ಅವರನ್ನು ಭೇಟಿ ಮಾಡಿದರು

   

ನವದೆಹಲಿ: ದಕ್ಷಿಣ ಕನ್ನಡ ಸಂಸದ ಬ್ರಿಜೇಶ್‌ ಚೌಟ ಅವರು ಕೇಂದ್ರ ಭೂಸಾರಿಗೆ ಹಾಗೂ ಹೆದ್ದಾರಿ ಸಚಿವ ನಿತಿನ್‌ ಗಡ್ಕರಿ ಅವರನ್ನು ಬುಧವಾರ ಭೇಟಿ ಮಾಡಿ ಶಿರಾಡಿ ಘಾಟಿ ಬೈಪಾಸ್‌ ಯೋಜನೆ ಅನುಷ್ಠಾನ ಸೇರಿ ಬೆಂಗಳೂರು-ಮಂಗಳೂರು ಹೆದ್ದಾರಿ ಸಂಪರ್ಕ ಸುಧಾರಣೆ, ಮೂಲಸೌಕರ್ಯ ಅಭಿವೃದ್ಧಿ ಹಾಗೂ ಪ್ರಗತಿಯಲ್ಲಿರುವ ಕಾಮಗಾರಿಗಳ ಕುರಿತಂತೆ ಚರ್ಚೆ ನಡೆಸಿದರು. 

‘ಮಂಗಳೂರು-ಬೆಂಗಳೂರು ಹೆದ್ದಾರಿ ಯೋಜನೆಗಳ ಅನುಷ್ಠಾನ ವಿಚಾರದಲ್ಲಿ ರಾಜ್ಯ ಸರ್ಕಾರದ ಹಂತದಲ್ಲಿ ಇಲಾಖಾಧಿಕಾರಿಗಳಿಂದ ವಿಳಂಬ ಆಗುತ್ತಿದೆ. ಸಚಿವರು ತುರ್ತಾಗಿ ಮಧ್ಯಪ್ರವೇಶ ಮಾಡಿ ಎದುರಾಗಿರುವ ಎಲ್ಲ ಅಡೆ-ತಡೆ ನಿವಾರಣೆಗೆ ಸೂಕ್ತ ಕ್ರಮ ತೆಗೆದುಕೊಳ್ಳಬೇಕು. ಅದರಲ್ಲಿಯೂ ಶಿರಾಡಿ ಘಾಟಿ ಮಾರ್ಗವನ್ನು ಮೇಲ್ದರ್ಜೆಗೇರಿಸಲು ಸೂಕ್ತ ಪಥಗಳ ನಿಗದಿ ಹಾಗೂ ಯೋಜನೆಗೆ ಅರಣ್ಯ ಇಲಾಖೆಯ ಮಂಜೂರಾತಿ ಪಡೆಯುವ ಪ್ರಕ್ರಿಯೆ ಚುರುಕುಗೊಳಿಸಬೇಕು’ ಎಂದು ಅವರು ಮನವಿ ಮಾಡಿದರು. 

ADVERTISEMENT

ಶಿರಾಡಿ ಘಾಟಿಯಲ್ಲಿ ಬಹುಪಥಗಳ ರಸ್ತೆ ನಿರ್ಮಾಣಕ್ಕೆ ಅರಣ್ಯ ಇಲಾಖೆಯ ಅನುಮತಿ ನೀಡುವ ಪ್ರಕ್ರಿಯೆ ನಿಧಾನವಾಗಿರುವ ಕಾರಣ ಯೋಜನೆ ಅನುಷ್ಠಾನಕ್ಕೆ  ಹಿನ್ನಡೆಯಾಗಿದೆ. ಪ್ರಮುಖವಾಗಿ ಕರ್ನಾಟಕ ಸರ್ಕಾರದಿಂದ ಅರಣ್ಯ ಇಲಾಖೆಯ ಅನುಮತಿ ಬಾಕಿಯಿರುವ ಕಾರಣ ಈ ಯೋಜನೆ ಕಾರ್ಯರೂಪಕ್ಕೆ ತರುವುದಕ್ಕೆ ವಿಳಂಬವಾಗುತ್ತಿದೆ. ಈ ದಿಸೆಯಲ್ಲಿ ಶಿರಾಡಿ ಘಾಟಿ ರಸ್ತೆ ವಿಸ್ತರಣೆಗೆ ರಾಜ್ಯ ಸರ್ಕಾರದ ಕಡೆಯಿಂದ ಎದುರಾಗಿರುವ ಅಡೆ-ತಡೆ ನಿವಾರಣೆಗೆ ಹೆದ್ದಾರಿ ಸಚಿವಾಲಯದ ಕಡೆಯಿಂದ ಮಧ್ಯಸ್ಥಿಕೆ ವಹಿಸಬೇಕು’ ಎಂದು ಅವರು ವಿನಂತಿಸಿದರು. 

ಈ ವೇಳೆ ಪ್ರಕ್ರಿಯಿಸಿರುವ ಗಡ್ಕರಿ, ‘ಶಿರಾಡಿ ಘಾಟಿ ಹೆದ್ದಾರಿ ಮೇಲ್ದರ್ಜೆಗೇರಿಸುವುದಕ್ಕೆ ರಾಜ್ಯ ಸರ್ಕಾರದಿಂದ ಅಗತ್ಯವಿರುವ ಎಲ್ಲ ರೀತಿಯ ಅನುಮತಿ ಹಾಗೂ ಪ್ರಕ್ರಿಯೆ ಪೂರ್ಣಗೊಂಡ ಕೂಡಲೇ ಮುಂದಿನ ಹಂತದ ಕ್ರಮ ಜರುಗಿಸಲಾಗುವುದು’ ಎಂದು ಭರವಸೆ ನೀಡಿದರು. 

ಮಂಗಳೂರು-ಸುಬ್ರಹ್ಮಣ್ಯ ಪ್ಯಾಸೆಂಜರ್‌ ರೈಲಿಗೆ ಹಸಿರು ನಿಶಾನೆ: ‘ಮಂಗಳೂರು-ಕಬಕ-ಪುತ್ತೂರು ಪ್ಯಾಸೆಂಜರ್ ರೈಲನ್ನು ಸುಬ್ರಹ್ಮಣ್ಯ ಜಂಕ್ಷನ್‌ಗೆ ವಿಸ್ತರಿಸುವುದಕ್ಕೆ ರೈಲ್ವೆ ಮಂಡಳಿ ಈಗಾಗಲೇ ಮಂಜೂರಾತಿ ನೀಡಿದ್ದು, ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಅವರ ದಿನಾಂಕ ನಿಗದಿಪಡಿಸಿಕೊಂಡು ಮಾರ್ಚ್‌ ಅಂತ್ಯದೊಳಗೆ ಈ ರೈಲು ಸೇವೆಗೆ ಚಾಲನೆ ನೀಡಲಾಗುತ್ತದೆ’ ಎಂದು ಚೌಟ ತಿಳಿಸಿದರು. 

ನವದೆಹಲಿಯಲ್ಲಿ ಸೋಮಣ್ಣ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.