ನವದೆಹಲಿ: ಪಕ್ಷದ ನಿಯಮ ಉಲ್ಲಂಘಿಸಿದರೆ ಕಠಿಣ ಶಿಸ್ತಿನ ಕ್ರಮ ಕೈಗೊಳ್ಳುವುದು ಅನಿವಾರ್ಯವಾಗುತ್ತದೆ ಎಂದು ಕರ್ನಾಟಕದ ಅತೃಪ್ತ ಶಾಸಕರಿಗೆ ಕಾಂಗ್ರೆಸ್ ಹೈಕಮಾಂಡ್ ಮಂಗಳವಾರ ಎಚ್ಚರಿಸಿದೆ.
ಪಕ್ಷದ ಯಾವುದೇ ಶಾಸಕ ಬಹಿರಂಗವಾಗಿ ಅಸಮಾಧಾನ ಹೊರಹಾಕಿದರೆ ಪಕ್ಷವು ಮುಲಾಜಿಲ್ಲದೆ ಕ್ರಮ ಕೈಗೊಳ್ಳಲಿದೆ ಎಂದು ಕರ್ನಾಟಕ ಉಸ್ತುವಾರಿ ಕೆ.ಸಿ. ವೇಣುಗೋಪಾಲ್ ತಿಳಿಸಿದರು.
ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆ ಅವರನ್ನು ಮಧ್ಯಾಹ್ನ ಭೇಟಿ ಮಾಡಿ ರಾಜ್ಯದ ವಿದ್ಯಮಾನಗಳ ಕುರಿತು ಚರ್ಚಿಸಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.
‘ಪಕ್ಷದ ಇಬ್ಬರು ಶಾಸಕರು ರಾಜೀನಾಮೆ ನೀಡಿಲ್ಲ. ನಮ್ಮ ಯಾವ ಶಾಸಕರೂ ರಾಜೀನಾಮೆ ನೀಡುವುದೂ ಇಲ್ಲ. ಈ ಕುರಿತು ರಾಜ್ಯ ಮುಖಂಡರೊಂದಿಗೆ ಚರ್ಚಿಸಿದ್ದು, ಚಿಂತಿಸುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ. ಹಾಗಾಗಿ ಸಮ್ಮಿಶ್ರ ಸರ್ಕಾರಕ್ಕೆ ಅಪಾಯವಿಲ್ಲ. ಎಚ್.ಡಿ. ಕುಮಾರಸ್ವಾಮಿ ನೇತೃತ್ವದ ಸರ್ಕಾರ ಐದು ವರ್ಷ ಪೂರೈಸಲಿದೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.
‘ಸರ್ಕಾರವನ್ನು ಅಸ್ಥಿರಗೊಳಿಸಲು ಮೊದಲ ದಿನದಿಂದಲೂ ಯತ್ನಿಸುತ್ತಿರುವ ಬಿಜೆಪಿಗೆ ಮತ್ತೆ ನಿರಾಸೆಯಾಗಲಿದೆ’ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.