ADVERTISEMENT

ಯಥಾಸ್ಥಿತಿ ವ್ಯಾಪ್ತಿಗೆ ವಿಪ್‌ ಕೂಡಾ ಅನ್ವಯ: ರೋಹಟ್ಗಿ

​ಪ್ರಜಾವಾಣಿ ವಾರ್ತೆ
Published 13 ಜುಲೈ 2019, 19:53 IST
Last Updated 13 ಜುಲೈ 2019, 19:53 IST
   

ಬೆಂಗಳೂರು: ‘ಕಾಂಗ್ರೆಸ್‌ ಶಾಸಕರಿಗೆ ವಿಪ್‌ ಜಾರಿ ಮಾಡಿರುವ ವಿಷಯವನ್ನೂ ರಿಟ್‌ ಅರ್ಜಿಯಲ್ಲಿ ಅಡಕ ಮಾಡಲಾಗಿದೆ. ಈ ಸಂಗತಿಯನ್ನು ಈಗಾಗಲೇ ನ್ಯಾಯಪೀಠದ ಗಮನಕ್ಕೂ ತರಲಾಗಿದೆ’ ಎಂದು ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿರುವ ಅತೃಪ್ತ ಶಾಸಕರ ಪರ ವಾದ ಮಂಡಿಸಿರುವ ಹಿರಿಯ ವಕೀಲ ಮುಕುಲ್‌ ರೋಹಟ್ಗಿ ತಿಳಿಸಿದ್ದಾರೆ.

ಈ ಕುರಿತಂತೆ ಶನಿವಾರ ಮಾಧ್ಯಮಗಳಿಗೆ ಲಿಖಿತ ಸ್ಪಷ್ಟನೆ ಬಿಡುಗಡೆ ಮಾಡಿರುವ ಅವರು, ‘ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿರುವ 10 ಶಾಸಕರು ನೀಡಿರುವ ರಾಜೀನಾಮೆ ವಿಷಯಕ್ಕೆ ಸಂಬಂಧಿಸಿದಂತೆ, ಸಭಾಧ್ಯಕ್ಷರು ಯಾವುದೇ ಕ್ರಮ ಕೈಗೊಳ್ಳದೆ ಯಥಾಸ್ಥಿತಿ ಕಾಪಾಡಬೇಕು ಎಂದು ನ್ಯಾಯಪೀಠ ಶುಕ್ರವಾರ (ಜು.12) ಆದೇಶಿಸಿದೆ. ಈ ಆದೇಶದ ವ್ಯಾಪ್ತಿಯಲ್ಲಿ ವಿಪ್‌ ಜಾರಿಗೊಳಿಸಿರುವ ವಿಚಾರವೂ ಒಳಗೊಂಡಿರುತ್ತದೆ’ ಎಂದು ವಿವರಿಸಿದ್ದಾರೆ.

‘ನಮ್ಮ ರಾಜೀನಾಮೆ ಸ್ವೀಕರಿಸುವಲ್ಲಿ ವಿಧಾನಸಭಾಧ್ಯಕ್ಷರು ಮೀನಮೇಷ ಎಣಿಸುತ್ತಿದ್ದಾರೆ’ ಎಂದು ಆಕ್ಷೇಪಿಸಿ 10 ಅತೃಪ್ತ ಶಾಸಕರು ಸಲ್ಲಿಸಿರುವ ರಿಟ್‌ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ರಂಜನ್‌ ಗೊಗೊಯಿ ನೇತೃತ್ವದ ಮೂವರು ನ್ಯಾಯಮೂರ್ತಿಗಳ ಪೀಠ ವಿಚಾರಣೆ ನಡೆಸುತ್ತಿದೆ. ಮುಂದಿನ ವಿಚಾರಣೆ ಇದೇ 16ರಂದು ನಡೆಯಲಿದೆ. ಅಲ್ಲಿಯವರೆಗೂ ಯಥಾಸ್ಥಿತಿ ಕಾಪಾಡಿಕೊಳ್ಳುವಂತೆ ಮಧ್ಯಂತರ ಆದೇಶ ನೀಡಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.