ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಅ.24 ಮತ್ತು 25ರಂದು ಗುಡುಗು, ಸಿಡಿಲು ಸಹಿತ ಧಾರಾಕಾರ ಮಳೆಯಾಗುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ರಾಮನಗರ, ಶಿವಮೊಗ್ಗ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳವರೆಗೆ ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ 'ಯೆಲ್ಲೊ ಅಲರ್ಟ್' ಘೋಷಿಸಲಾಗಿದೆ.
ಕರಾವಳಿ ಜಿಲ್ಲೆಗಳಲ್ಲಿ ಅ.26ರವರೆಗೆ ಹೆಚ್ಚು ಮಳೆಯಾಗಲಿದೆ. ಉತ್ತರ ಒಳನಾಡಿನಾದ್ಯಂತ ಮಳೆ ತಗ್ಗಿದ್ದು, ಗುಡುಗು ಸಹಿತ ಕೆಲವೆಡೆ ಸಾಧಾರಣ ಮಳೆಯಾಗಲಿದೆ ಎಂದು ತಿಳಿಸಿದೆ.
ಮಳೆ-ಎಲ್ಲಿ,ಎಷ್ಟು?: ಉಡುಪಿ ಜಿಲ್ಲೆಯ ಸಿದ್ದಾಪುರ ಹಾಗೂ ಹಾಸನ ಜಿಲ್ಲೆಯ ನುಗ್ಗೇಹಳ್ಳಿಯಲ್ಲಿ ಗರಿಷ್ಠ 8 ಸೆಂ.ಮೀ ಮಳೆ ಸುರಿದಿದೆ.
ಭದ್ರಾವತಿ, ಹೊಸದುರ್ಗ 6, ಧರ್ಮಸ್ಥಳ 4, ಕೊಟ್ಟಿಗೆಹಾರ, ಶಿವಮೊಗ್ಗ, ಗೌರಿಬಿದನೂರು, ಮಧುಗಿರಿ 3, ಕಾರವಾರ, ಕಾರ್ಕಳ, ಬಾಗೇಪಲ್ಲಿ, ಬೆಂಗಳೂರು, ಶಿಕಾರಿಪುರ, ಚಿಂತಾಮಣಿ 2, ಮೂಡುಬಿದರೆ, ಮೂಡಿಗೆರೆ, ಸಕಲೇಶಪುರ, ಭಾಗಮಂಡಲ, ಶಿಡ್ಲಘಟ್ಟ, ತುಮಕೂರು, ಚಿಕ್ಕಬಳ್ಳಾಪುರ ಹಾಗೂ ತಿಪಟೂರಿನಲ್ಲಿ ತಲಾ 1 ಸೆಂ.ಮೀ ಮಳೆಯಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.