ಬೆಳಗಾವಿ: ಪೌರತ್ವ (ತಿದ್ದುಪಡಿ) ಕಾಯ್ದೆ ವಿರೋಧಿಸಿ ಮಂಗಳವಾರ ಜಮಿಯತ ಉಲ್ಮಾ–ಎ–ಹಿಂದ ಸಂಘಟನೆ ನೇತೃತ್ವದಲ್ಲಿ ಮುಸ್ಲಿಮರು ಹಮ್ಮಿಕೊಂಡಿದ್ದ ಪ್ರತಿಭಟನಾ ಮೆರವಣಿಗೆ ಬಳಿಕ, ಇಲ್ಲಿನ ಶಿವಾಜಿನಗರದ ಆರ್ಟಿಒ ವೃತ್ತದಲ್ಲಿ ಕಿಡಿಗೇಡಿಗಳು ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಇದರಿಂದ ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟಾಗಿತ್ತು.
ಎರಡು ಎನ್ಡಬ್ಲ್ಯುಕೆಎಸ್ಆರ್ಟಿಸಿ ಬಸ್ಗಳು, ಕಾರು, ಪೆಟ್ರೋಲ್ ತುಂಬಿದ ಟ್ಯಾಂಕರ್ ಹಾಗೂ ಎಟಿಎಂ ಕೇಂದ್ರದ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. ಇದರಿಂದ ವಾಹನಗಳ ಗಾಜು ಪುಡಿ ಪುಡಿಯಾಗಿದೆ. ಎಟಿಎಂ ಬಾಗಿಲಿನ ಗಾಜು ಜಖಂಗೊಂಡಿದೆ. ವ್ಯಕ್ತಿಯೊಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಆತಂಕಗೊಂಡ ವ್ಯಾಪಾರಿಗಳು ಅಂಗಡಿಗಳನ್ನು ದಿಢೀರ್ ಮುಚ್ಚಿದರು.
ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಸೂಕ್ಷ್ಮ ಪ್ರದೇಶಗಳಲ್ಲಿ ನಿಗಾ ವಹಿಸಲಾಗಿದೆ.
‘ವಾಹನಗಳಿಗೆ ಕಲ್ಲು ತೂರಿ, ಸಾರ್ವಜನಿಕರ ಶಾಂತಿಗೆ ಭಂಗ ತಂದವರ ಬಗ್ಗೆ ಸುಳಿವು ದೊರೆತಿದೆ. ಶೀಘ್ರವೇ ಅವರನ್ನು ಬಂಧಿಸಲಾಗುವುದು’ ಎಂದು ನಗರ ಪೊಲೀಸ್ ಆಯುಕ್ತ ಬಿ.ಎಸ್. ಲೋಕೇಶ್ಕುಮಾರ್ ‘ಪ್ರಜಾವಾಣಿ’ಗೆ ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.