ಬೆಂಗಳೂರು: ಪ್ರಾಥಮಿಕ ಮತ್ತು ಪ್ರೌಢಶಾಲಾಶಿಕ್ಷಕರ ವರ್ಗಾವಣೆ ಪ್ರಕ್ರಿಯೆಯಲ್ಲಿ ಕೆಲವು ಗೊಂದಲ ನಿವಾರಿಸುವ ನಿಟ್ಟಿನಲ್ಲಿ ಚಿಂತನೆ ನಡೆಸಲಾಗುವುದು ಎಂದು ಪ್ರಾಥಮಿಕಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಹೇಳಿಕೆ ನೀಡಿದ ಬೆನ್ನಲ್ಲೇ, ವರ್ಗಾವಣೆ ಪ್ರಕ್ರಿಯೆಯನ್ನು ಮುಂದಿನ ಆದೇಶದವರೆಗೆ ತಾತ್ಕಾಲಿಕವಾಗಿ ತಡೆ ಹಿಡಿಯಲಾಗಿದೆ.
‘ಶಿಕ್ಷಕರ ಕಡ್ಡಾಯ ವರ್ಗಾವಣೆ ಕುರಿತು ಅನೇಕ ಶಿಕ್ಷಕರು, ಅದರಲ್ಲೂ ಮುಖ್ಯವಾಗಿ ಶಿಕ್ಷಕಿಯರು ಮನವಿ ಸಲ್ಲಿಸಿ, ತಮ್ಮ ಸಮಸ್ಯೆಗಳನ್ನು ವಿವರಿಸಿದ್ದಾರೆ. ವರ್ಗಾವಣೆಯಲ್ಲಿನ ಕೆಲವು ದೋಷಗಳನ್ನೂ ಗಮನಕ್ಕೆ ತಂದಿದ್ದಾರೆ. ಗೊಂದಲ ನಿವಾರಿಸಿ ಎಲ್ಲರಿಗೂ ಅನುಕೂಲವಾಗುವ ರೀತಿಯ ವ್ಯವಸ್ಥೆ ಕುರಿತು ಚಿಂತನೆ ನಡೆಸಲು ನಿರ್ಧರಿಸಲಾಗಿದೆ’ ಎಂದು ಸಚಿವರು ತಿಳಿಸಿದ್ದಾರೆ.
‘ಸಚಿವರ ಸೂಚನೆಯಂತೆ ವರ್ಗಾವಣೆ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಲಾಗಿದೆ. ಮುಂದಿನ ವೇಳಾಪಟ್ಟಿಯನ್ನು ಅವರೇ ಸೂಚಿಸಲಿದ್ದಾರೆ. ಈಗ ಕೊನೆಗೊಂಡ ಹಂತದಿಂದ ಮುಂದುವರಿದ ಭಾಗವಾಗಿ ವರ್ಗಾವಣೆ ಪ್ರಕ್ರಿಯೆ ನಡೆಯಲಿದೆ’ ಎಂದು ಪ್ರಾಥಮಿಕ ಶಿಕ್ಷಣ ಇಲಾಖೆಯ ನಿರ್ದೇಶಕ ಎಂ.ಪಿ.ಮಾದೇಗೌಡ ‘ಪ್ರಜಾವಾಣಿ’ಗೆ ತಿಳಿಸಿದರು.
***
ವಿಭಾಗೀಯ ಮಟ್ಟದ ವ್ಯಾಪ್ತಿಯನ್ನು ಜಿಲ್ಲಾಮಟ್ಟಕ್ಕೆ ಸೀಮಿತಗೊಳಿಸಿ ಸರಳೀಕರಿಸುವ ಚಿಂತನೆ ಇದೆ. ನಂತರ ತಾಲ್ಲೂಕು ಮಟ್ಟಕ್ಕೆ ಸರಳೀಕರಿಸಲಾಗುವುದು
–ಎಸ್.ಸುರೇಶ್ ಕುಮಾರ್, ಪ್ರಾಥಮಿಕ ಶಿಕ್ಷಣ ಸಚಿವ
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.