ಬೆಂಗಳೂರು: ಸೋಮವಾರದಿಂದ ಖಾಸಗಿ ಬಸ್ ಸೇವೆ ಸೇರಿದಂತೆ ಸಾರ್ವಜನಿಕ ಸಾರಿಗೆಯ ಅಗತ್ಯ ವ್ಯವಸ್ಥೆ ಮಾಡಲಾಗುವುದು. ಬಸ್ ಸಂಚಾರಕ್ಕೆ ಅಡ್ಡಿಪಡಿಸುವವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಎಚ್ಚರಿಕೆ ನೀಡಿದರು.
ಭಾನುವಾರ ತಡರಾತ್ರಿ ಸಚಿವರಾದ ಆರ್. ಅಶೋಕ ಮತ್ತು ಬಸವರಾಜ ಬೊಮ್ಮಾಯಿ ಅವರೊಂದಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿಮಾಡಿ ಚರ್ಚಿಸಿದ ಬಳಿಕ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ‘ಸಾರಿಗೆ ವ್ಯವಸ್ಥೆಯನ್ನು ಸರಿಪಡಿಸಲು ಅಗತ್ಯವಿರುವ ಎಲ್ಲ ಕ್ರಮಗಳನ್ನೂ ಸರ್ಕಾರ ಕೈಗೊಳ್ಳಲಿದೆ. ಅಡ್ಡಿಪಡಿಸಿದರೆ ಕಠಿಣ ಕ್ರಮ ನಿಶ್ಚಿತ‘ ಎಂದರು.
‘ಸೋಮವಾರ ಬೆಳಿಗ್ಗೆ ಮುಖ್ಯಮಂತ್ರಿ ಜತೆ ಮತ್ತೆ ಚರ್ಚಿಸಲಾಗುವುದು. ಎಸ್ಮಾ ಜಾರಿ ಸೇರಿದಂತೆ ಅಗತ್ಯವಿರುವ ಕಠಿಣ ಕ್ರಮಗಳ ಕುರಿತು ಆ ಸಭೆಯಲ್ಲಿ ಚರ್ಚಿಸಿ ನಿರ್ಧಾರಕ್ಕೆ ಬರಲಾಗುವುದು‘ ಎಂದು ಬಸವರಾಜ ಬೊಮ್ಮಾಯಿ ಹೇಳಿದರು.
‘ಕೋಡಿಹಳ್ಳಿ ಚಂದ್ರಶೇಖರ್ ತಮಗೆ ಸಂಬಂಧಿಸದ ಕ್ಷೇತ್ರದಲ್ಲಿ ಹಸ್ತಕ್ಷೇಪ ಮಾಡಿದ್ದಾರೆ. ಮಾತುಕತೆಯಲ್ಲಿ ಒಪ್ಪಿಕೊಂಡು ಹೋದವರನ್ನು ದಿಕ್ಕು ತಪ್ಪಿಸುತ್ತಿದ್ದಾರೆ. ಕೈಗಾರಿಕಾ ಕ್ಷೇತ್ರದ ಸಮಸ್ಯೆ ಗೊತ್ತಿಲ್ಲದ ವ್ಯಕ್ತಿಯ ಕೈಯಲ್ಲಿ ಕಾರ್ಮಿಕರು ಸಿಲುಕಿದ್ದಾರೆ‘ ಎಂದು ಆರ್. ಅಶೋಕ ಪ್ರತಿಕ್ರಿಯಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.