ಮಂಗಳೂರು: ಕೇರಳದಲ್ಲಿ ಕೋವಿಡ್ ಪ್ರಮಾಣವು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ದಕ್ಷಿಣ ಕನ್ನಡ ಜಿಲ್ಲೆಯ ಗಡಿಯಲ್ಲಿನ ಸಂಪರ್ಕ ರಸ್ತೆಗಳಲ್ಲಿ ಚೆಕ್ಪೋಸ್ಟ್ಗಳನ್ನು ತೆರೆಯಲಾಗಿದ್ದು, ಸೋಮವಾರದಿಂದ ತಪಾಸಣೆ ನಡೆಯಲಿದೆ.
ಕೇರಳಕ್ಕೆ ಸಂಪರ್ಕ ಕಲ್ಪಿಸುವ ನಾಲ್ಕು ರಸ್ತೆಗಳನ್ನು ಹೊರತು ಪಡಿಸಿ, ಉಳಿದೆಡೆ ಸಂಪರ್ಕ ಬಂದ್ ಮಾಡಲಾಗಿದೆ. ಈ ನಾಲ್ಕು ಕಡೆಗಳಲ್ಲಿ ಚೆಕ್ಪೋಸ್ಟ್ ತೆರೆಯಲಾಗಿದೆ.
ಭಾನುವಾರ ಅಗತ್ಯ ಸಿದ್ಧತೆಗಳನ್ನು ಮಾಡಿಕೊಂಡಿರುವ ಜಿಲ್ಲಾಡಳಿತವು ಗಡಿಯ ರಸ್ತೆ ಬದಿಯಲ್ಲಿ ಟೆಂಟ್ ಹಾಕಿದ್ದು, ಆರೋಗ್ಯ ಕೇಂದ್ರದ ಸಹಾಯಕರನ್ನು ನಿಯೋಜಿಸಿದೆ. ಮಂಗಳೂರು–ಕಾಸರಗೋಡು ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ 66ರ ತಲಪಾಡಿಯಲ್ಲಿ ಟೆಂಟ್ ಹಾಕಲಾಗಿದೆ.
‘ಸೋಮವಾರದಿಂದ ಗಡಿಯಲ್ಲಿ ಪರೀಕ್ಷೆ ನಡೆಸಲಾಗುತ್ತದೆ. ಕೇರಳದಿಂದ ಬರುವವರು 72 ಗಂಟೆಯೊಳಗಿನ ಆರ್ಟಿಪಿಸಿಆರ್ ಕೋವಿಡ್ ನೆಗೆಟಿವ್ ವರದಿ ಹೊಂದಿರುವುದು ಕಡ್ಡಾಯವಾಗಿದೆ. ವರದಿ ಇಲ್ಲದಿದ್ದರೆ, ಆರ್ಟಿಪಿಸಿಆರ್ ಪರೀಕ್ಷೆ ಹಾಗೂ ರ್ಯಾಟ್ ಪರೀಕ್ಷೆಯನ್ನು ಗಡಿಯಲ್ಲಿ ಮಾಡಲಾಗುವುದು. ಎರಡು ದಿನ ವ್ಯವಸ್ಥೆ ಸರಿಪಡಿಸಲು ಸ್ವಲ್ಪ ಹೊಂದಾಣಿಕೆ ಮಾಡಿಕೊಳ್ಳಲಾಗುವುದು’ ಎಂದು ಜಿಲ್ಲಾ ಆರೋಗ್ಯಾಧಿಕಾರಿ ರಾಮಚಂದ್ರ ಬಾಯರಿ ತಿಳಿಸಿದ್ದಾರೆ.
ಆದರೆ, ರೈಲ್ವೆ ಪ್ರಯಾಣಿಕರ ಪರೀಕ್ಷೆಗೆ ಈ ತನಕ ಯಾವುದೇ ಸಿದ್ಧತೆಗಳನ್ನು ಮಾಡಿಕೊಂಡಿಲ್ಲ ಎಂದು ಮೂಲಗಳು ತಿಳಿಸಿವೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.