ADVERTISEMENT

‘ಮಲ ಹೊರುವ ಪದ್ಧತಿ ತಡೆಗೆ ಕಠಿಣ ಕಾನೂನು’-ಬಿ.ಶ್ರೀರಾಮುಲು

​ಪ್ರಜಾವಾಣಿ ವಾರ್ತೆ
Published 17 ಮಾರ್ಚ್ 2021, 20:35 IST
Last Updated 17 ಮಾರ್ಚ್ 2021, 20:35 IST
ಸಮಾಜ ಕಲ್ಯಾಣ ಸಚಿವ ಬಿ. ಶ್ರೀರಾಮುಲು
ಸಮಾಜ ಕಲ್ಯಾಣ ಸಚಿವ ಬಿ. ಶ್ರೀರಾಮುಲು    

ಬೆಂಗಳೂರು: ರಾಜ್ಯದಲ್ಲಿ ಮಲ ಹೊರುವ ಪದ್ಧತಿ ನಿಷೇಧಿಸಿದ್ದರೂ ಕೆಲವು ಕಡೆ ಇಂಥ ಘಟನೆಗಳು ನಡೆಯುತ್ತಿದೆ. ಅದನ್ನು ತಡೆಯಲು ಮುಂದಿನ ದಿನಗಳಲ್ಲಿ ಕಠಿಣ ಕಾನೂನು ಕ್ರಮ ಜಾರಿಗೆ ತರಲಾಗುವುದು’ ಎಂದು ಸಮಾಜ ಕಲ್ಯಾಣ ಸಚಿವ ಬಿ. ಶ್ರೀರಾಮುಲು ತಿಳಿಸಿದರು.

ವಿಧಾನಪರಿಷತ್ತಿನಲ್ಲಿ ಕಾಂಗ್ರೆಸ್ಸಿನ ಬಿ.ಕೆ. ಹರಿಪ್ರಸಾದ್ ಪ್ರಶ್ನೆಗೆ ಉತ್ತರಿಸಿದ ಸಚಿವರು, ‘ಕಡ್ಡಾಯವಾಗಿ ಆಧುನಿಕ ಯಂತ್ರಗಳನ್ನು ಬಳಸಿ ಶೌಚಾಲಯ ಸ್ವಚ್ಚಗೊಳಿಸಬೇಕೆಂಬ ನಿಯಮವಿದ್ದರೂ ಕೆಲವು ಕಡೆ ಇಂಥ ಅಮಾನವೀಯ ಘಟನೆಗಳು ನಡೆಯುತ್ತಲೇ ಇವೆ. ಇದಕ್ಕೆ ಕಡಿವಾಣ ಹಾಕುವ ಜೊತೆಗೆ ಪೌರ ಕಾರ್ಮಿಕರಿಗೆ ಅತ್ಯಾಧುನಿಕ ಸೌಲಭ್ಯ ಕಲ್ಪಿಸಲು ಕ್ರಮ ತೆಗೆದುಕೊಳ್ಳಬೇಕು’ ಎಂದು ಆಗ್ರಹಿಸಿದರು.

ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ, ‘ಸಾಮಾಜಿಕ ಕಳಕಳಿ ಇಲ್ಲದ ಕಾರಣಕ್ಕೆ ದುರಂತಗಳು ಸಂಭವಿಸುತ್ತಿದೆ. ಹೊಲಸನ್ನು ಕೈಯಿಂದ‌ ತೆಗೆಸುವುದು, ತಲೆಯ ಮೇಲೆ ಹೊರುವುದಕ್ಕೆ ನಿಷೇಧ ಹೇರಿದೆ. ಈ ಸಮುದಾಯದ ಅಭಿವೃದ್ಧಿಗೆ ಸರ್ಕಾರ ಸಫಾಯಿ ಕರ್ಮಚಾರಿ ಆಯೋಗ ರಚಿಸಿದೆ. ಎಸ್‌ಸಿಟಿಪಿ, ಟಿಎಸ್‌ಪಿ ಅನುದಾನ ಬಳಕೆಗೂ ಅವಕಾಶ ಇದೆ. ಸಫಾಯಿ ಕರ್ಮಚಾರಿಗಳ ಅನುಕೂಲಕ್ಕೆ ಇನ್ನಷ್ಟು ಅನುದಾನ ನೀಡಲಾಗುವುದು. ಇಂಥ ಘಟನೆಗಳುಇನ್ನು ಮುಂದೆ ಸಂಭವಿಸಿದರೆ ಅಧಿಕಾರಿಗಳನ್ನೇ ಹೊಣೆ ಮಾಡಲಾಗುವುದು’ ಎಂದರು.

ADVERTISEMENT

ಪಶುವೈದ್ಯಕೀಯ ವಿವಿ ವಿಭಜನೆ ಪ್ರಸ್ತಾವ ಇಲ್ಲ: ‘ಬೀದರ್‌ನಲ್ಲಿರುವ ರಾಜ್ಯದ ಏಕೈಕ ಪಶು ವೈದ್ಯಕೀಯ ವಿಶ್ವವಿದ್ಯಾಲಯವನ್ನು ವಿಭಜನೆಯ ಪ್ರಸ್ತಾವ ಸರ್ಕಾರದ ಮುಂದೆ ಇಲ್ಲ’ ಎಂದು ಪಶುಸಂಗೋಪನೆ ಸಚಿವ ಪ್ರಭು ಚವ್ಹಾಣ್ ತಿಳಿಸಿದರು.

ವಿಧಾನಪರಿಷತ್ತಿನಲ್ಲಿ ಅರವಿಂದಕುಮಾರ ಅರಳಿ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ‘ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ಹುದ್ದೆಗಳನ್ನು ವಿಶೇಷ ಪ್ರಕರಣವೆಂದು ಪರಿಗಣಿಸಿ ನೇಮಕಾತಿ ಪ್ರಕ್ರಿಯೆಗೆ ಅನುಮತಿ ನೀಡುವಂತೆ ಕೋರಲಾಗಿದೆ. ಆರ್ಥಿಕ ಇಲಾಖೆ ಅನುಮತಿ ನೀಡಿದ ತಕ್ಷಣ ಪ್ರಕ್ರಿಯೆ ಆರಂಭಿಸಲಾಗುವುದು’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.