ಬೆಂಗಳೂರು: ‘ನದಿ ಜೋಡಣೆ, ನೀರಾವರಿ ಸೇರಿ ರಾಜ್ಯದ ಯಾವುದೇ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಹೋರಾಡುವಲ್ಲಿ ಜೆಡಿಎಸ್ ಮತ್ತು ಬಿಜೆಪಿ ಸುಮ್ಮನೆ ಕುಳಿತಿಲ್ಲ. ನಾವು ಹೋರಾಡುತ್ತಲೇ ಇದ್ದೇವೆ. ರಾಜ್ಯ ಸರ್ಕಾರದ ಹೋರಾಟಕ್ಕೆ ನಮ್ಮ ಸಹಕಾರವಿದೆ’ ಎಂದು ಮಾಜಿ ಪ್ರಧಾನಿ ಮತ್ತು ರಾಜ್ಯಸಭಾ ಸದಸ್ಯ ಎಚ್.ಡಿ.ದೇವೇಗೌಡ ಹೇಳಿದರು.
ಪಕ್ಷದ ಕಚೇರಿಯಲ್ಲಿ ಶನಿವಾರ ಕರೆಯಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಗೋದಾವರಿ–ಕಾವೇರಿ ನದಿ ಜೋಡಣೆ ಯೋಜನೆ ಡಿಪಿಆರ್ ಸಿದ್ಧಪಡಿಸಿದಾಗ, ಕರ್ನಾಟಕಕ್ಕೆ ನೀರು ಹಂಚಿಕೆ ಮಾಡಿರಲಿಲ್ಲ. ನಾನು 2020–2022ರಲ್ಲಿ ಅಂದಿನ ಕೇಂದ್ರ ನೀರಾವರಿ ಸಚಿವರಿಗೆ ಪತ್ರ ಬರೆದಿದ್ದೆ’ ಎಂದರು.
‘ಕರ್ನಾಟಕಕ್ಕೆ ಆಗಿರುವ ಅನ್ಯಾಯದ ಬಗ್ಗೆ ಸಚಿವರ ಗಮನ ಸೆಳೆದ ನಂತರ, ರಾಜ್ಯಕ್ಕೆ 15.91 ಟಿಎಂಸಿ ಅಡಿ ನೀರು ಹಂಚಿಕೆ ಮಾಡಿದ್ದಾರೆ. ಆದರೆ ಅದನ್ನು ಘಟಪ್ರಭಾ ನದಿಗೆ ಹರಿಸುತ್ತೇವೆ ಎಂದಿದ್ದಾರೆ. ಇದು ಸಾಧ್ಯವೇ ಎಂಬ ಪ್ರಶ್ನೆಯನ್ನು ನಾನು ಸಂಸತ್ತಿನಲ್ಲಿ ಎತ್ತಿದ್ದೇನೆ’ ಎಂದರು.
‘ಗೋದಾವರಿಯಿಂದ ಹರಿಸಿದ ನೀರು ರಾಜ್ಯದಲ್ಲಿ ಕಾವೇರಿಗೆ ಎಲ್ಲಿ ಜೋಡಿಸುತ್ತಾರೆ ಎಂಬುದನ್ನು ಸ್ಪಷ್ಟವಾಗಿ ತೋರಿಸಿಯೇ ಇಲ್ಲ. ಅದನ್ನು ಸ್ಪಷ್ಟಪಡಿಸಿ ಎಂದು ಕೋರಿದ್ದೇನೆ. ಇದಕ್ಕೆ ಒತ್ತು ನೀಡಿ ಪ್ರಧಾನಿಗೆ ಪತ್ರ ಬರೆಯುತ್ತೇನೆ’ ಎಂದರು.
ಈ ಯೋಜನೆ ಅಡಿ ರಾಜ್ಯಕ್ಕೆ ಹಂಚಿಕೆಯಾಗಿರುವ ನೀರಿನ ಪ್ರಮಾಣದ ಬಗ್ಗೆ ನಿಮಗೆ ತೃಪ್ತಿ ಇದೆಯೇ ಎಂದು ಕೇಳಿದ ಪ್ರಶ್ನೆಗೆ, ‘ಈ ಯೋಜನೆ ಅಡಿಯಲ್ಲಿ ಕನಿಷ್ಠ 25 ಟಿಎಂಸಿ ಅಡಿ ನೀರು ಕರ್ನಾಟಕಕ್ಕೆ ಹಂಚಿಕೆ ಮಾಡಬೇಕು ಎಂಬುದು ನನ್ನ ಒತ್ತಾಯ. ಇದಕ್ಕಾಗಿ ನಾನು ಹೋರಾಟ ಮಾಡುತ್ತೇನೆ’ ಎಂದರು.
‘ಈ ಹೋರಾಟ ಮಾಡುವಲ್ಲಿ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್, ಕಾಂಗ್ರೆಸ್ ಸಂಸದರ ಜತೆಗೆ ಮಾತನಾಡಲು ನನಗೆ ಯಾವುದೇ ಸಮಸ್ಯೆ ಇಲ್ಲ. ಎಲ್ಲರನ್ನೂ ಒಗ್ಗೂಡಿಸಿಕೊಂಡೇ ಹೋರಾಟ ನಡೆಸುತ್ತೇನೆ’ ಎಂದು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.