ADVERTISEMENT

ಕಾಲೇಜುಗಳಲ್ಲಿ ವಿದ್ಯಾರ್ಥಿ ಚುನಾವಣೆ? ಅಧ್ಯಯನಕ್ಕೆ ಸಮಿತಿ- ಡಿ.ಕೆ.ಶಿವಕುಮಾರ್‌ 

​ಪ್ರಜಾವಾಣಿ ವಾರ್ತೆ
Published 26 ನವೆಂಬರ್ 2025, 20:02 IST
Last Updated 26 ನವೆಂಬರ್ 2025, 20:02 IST
<div class="paragraphs"><p>ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌</p></div>

ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌

   

ಬೆಂಗಳೂರು: ‘ಕಾಲೇಜುಗಳಲ್ಲಿ ವಿದ್ಯಾರ್ಥಿ ಚುನಾವಣೆ ನಡೆಸುವ ಕುರಿತು ಸಾಧಕ, ಬಾಧಕಗಳ ಬಗ್ಗೆ ಅಧ್ಯಯನ ನಡೆಸಿ, ವರದಿ ನೀಡಲು ಸಮಿತಿ ರಚಿಸಲಾಗುವುದು’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಹೇಳಿದರು.

ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಹಿಂದೆ ವಿದ್ಯಾರ್ಥಿ ಚುನಾವಣೆಗಳಿಂದ ನಾಯಕತ್ವ ಬೆಳೆಸಲು ಸಾಧ್ಯವಾಗಿತ್ತು. ನಾನು ಅಂತಿಮ ವರ್ಷದ ಪದವಿಯಲ್ಲಿ ಇದ್ದಾಗಲೇ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಸ್ಪರ್ಧಿಸಲು ಟಿಕೆಟ್‌ ಸಿಕ್ಕಿತು. ಕಾಂಗ್ರೆಸ್‌ ಪಕ್ಷದ ಹಲವು ನಾಯಕರು ವಿದ್ಯಾರ್ಥಿ ಹೋರಾಟದಿಂದಲೇ ಬಂದವರು. ಆದರೆ, ವಿದ್ಯಾರ್ಥಿ ಚುನಾವಣೆಗಳಲ್ಲಿ  ಅಪರಾಧ ಚಟುವಟಿಕೆಗಳು ನಡೆಯುತ್ತಿದ್ದವು. ಅವುಗಳನ್ನು ನಿಯಂತ್ರಿಸುವ ಅಗತ್ಯವಿದೆ. ಈ ಕುರಿತು ವರದಿ ಬಂದ ನಂತರ ಸಮಿತಿ ರಚಿಸಲಾಗುವುದು’ ಎಂದರು.   

ADVERTISEMENT

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಅವರು ಮುಖ್ಯಮಂತ್ರಿ ಹಾಗೂ ತಮಗೆ ಪತ್ರ ಬರೆದು, ಕಾಲೇಜು ಚುನಾವಣೆ ಬಗ್ಗೆ ಆಲೋಚಿಸುವಂತೆ ಮಾರ್ಗದರ್ಶನ ನೀಡಿದ್ದಾರೆ ಎಂದು ಹೇಳಿದರು.

‘ಕಾನೂನು ಬ್ಯಾಂಕ್’: ‘ಮತ ಕಳವು ಪ್ರಕರಣಗಳನ್ನು ತಡೆಯಲು ರಕ್ತ ನಿಧಿ ಮಾದರಿಯಲ್ಲಿ 224 ವಿಧಾನಸಭಾ ಕ್ಷೇತ್ರದಲ್ಲೂ ಕನಿಷ್ಠ 10 ವಕೀಲರಿರುವ ಕಾನೂನು ಬ್ಯಾಂಕ್‌ ಸ್ಥಾಪಿಸಲಾಗುವುದು. ವಕೀಲರು ಕಾಂಗ್ರೆಸ್‌ ಪಕ್ಷದ ಕಾರ್ಯಕರ್ತರು ಹಾಗೂ ಪಕ್ಷದ ಆಚಾರ ವಿಚಾರ ರಕ್ಷಣೆಗೆ ಕೆಲಸ ಮಾಡಬೇಕು. ಮುಂದಿನ ದಿನಗಳಲ್ಲಿ ರಾಜ್ಯಮಟ್ಟದ ಸಮಿತಿ ರಚಿಸಲಾಗುತ್ತದೆ’ ಎಂದು ಮಾಹಿತಿ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.