ಬೆಂಗಳೂರು: ಸಾರಿಗೆ ಸಂಸ್ಥೆಗಳ ಸ್ವಾವಲಂಬನೆ ಮತ್ತು ಸಂಪನ್ಮೂಲಕ ಕ್ರೋಡೀಕರಣಗಳ ಸಂಪೂರ್ಣ ಅಧ್ಯಯನಕ್ಕೆ ರಾಜ್ಯ ಸರ್ಕಾರ ನೇಮಿಸಿರುವ ನಿವೃತ್ತ ಐಎಎಸ್ ಅಧಿಕಾರಿ ಎಂ.ಆರ್.ಶ್ರೀನಿವಾಸಮೂರ್ತಿ ಏಕ ಸದಸ್ಯ ಸಮಿತಿಯು ಕಾರ್ಯ ಚಟುವಟಿಕೆ ಆರಂಭಿಸಿದ್ದು, ಮಂಗಳವಾರ ಮೊದಲ ಸಭೆ ನಡೆಸಿತು.
ಸಾರಿಗೆ ಇಲಾಖೆ ಕಾರ್ಯದರ್ಶಿ ರಾಜೇಂದರ್ ಕುಮಾರ್ ಕಟಾರಿಯಾ, ಕೆಎಸ್ಆರ್ಟಿಸಿ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಸಿ. ಕಳಸದ, ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕ ವಿ.ಅನ್ಬುಕುಮಾರ್, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಯಶವಂತ್ ವಿ. ಗುರುಕರ್ ಮತ್ತು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ವ್ಯವಸ್ಥಾಪಕ ನಿರ್ದೇಶಕ ಗುರುದತ್ತ ಹೆಗಡೆ ಅವರ ಜೊತೆ ಶ್ರೀನಿವಾಸಮೂರ್ತಿ ಸಭೆ ನಡೆಸಿದರು.
ನಿಗಮದಲ್ಲಿರುವ ಬಸ್ಗಳ ಸಂಖ್ಯೆ, ನಿಗಮಗಳ ಸಂಖ್ಯೆ, ಸಿಬ್ಬಂದಿ ಸಂಖ್ಯೆ, ಸಂಗ್ರಹವಾಗುತ್ತಿರುವ ವರಮಾನದ ಬಗ್ಗೆ ನಾಲ್ಕೂ ವ್ಯವಸ್ಥಾಪಕ ನಿರ್ದೇಶಕರು ವಿವರಿಸಿದರು.
‘ನಿಗಮಗಳ ಮಾಹಿತಿ ಮಾತ್ರವಲ್ಲ, ಎಲ್ಲ ವಿಭಾಗಗಳ ಮತ್ತು ಡಿಪೋ ಮಟ್ಟದ ಮಾಹಿತಿ ಅಗತ್ಯವಿದೆ. ಎಲ್ಲೆಡೆ ಪ್ರವಾಸ ಮಾಡಿ ಮಾಹಿತಿ ಸಂಗ್ರಹಿಸಲಾಗುವುದು. ಅದಕ್ಕೆ ಅಗತ್ಯ ಸಹಕಾರ ನೀಡಬೇಕು. ನೌಕರರ ಸಂಘಗಳಿಂದಲೂ ಮಾಹಿತಿ ಪಡೆದುಕೊಳ್ಳಲಾಗುವುದು’ ಎಂದು ಶ್ರೀನಿವಾಸಮೂರ್ತಿ ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.