
ಹೈಕೋರ್ಟ್ ಹಾಗೂ ನ್ಯಾಯಮೂರ್ತಿ ಎಂ.ನಾಗಪ್ರಸನ್ನ (ಒಳಚಿತ್ರ)
ಬೆಂಗಳೂರು: ‘ಸಬ್ ರಿಜಿಸ್ಟ್ರಾರ್ ಕಚೇರಿಗಳು, ಅಲ್ಲಿನ ನೌಕರರು, ಅಧಿಕಾರಿಗಳು ಹಾಗೂ ಸಿಬ್ಬಂದಿ ಎಷ್ಟರಮಟ್ಟಿಗೆ ಸಾರ್ವಜನಿಕ ಕಾಳಜಿಯಿಂದ ಸರ್ಕಾರದ ಕೆಲಸ ಮಾಡುತ್ತಾರೆ ಎಂಬುದು ಚೆನ್ನಾಗಿ ಗೊತ್ತಿದೆ..!’ ಎಂದು ಹೈಕೋರ್ಟ್ ಪ್ರಕರಣವೊಂದರಲ್ಲಿ ಕುಟುಕಿದೆ.
‘ನಮ್ಮ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದುಪಡಿಸಬೇಕು’ ಎಂದು ಕೋರಿ ಡಿ.ಹಿತೇಂದ್ರ ಮತ್ತು ಎಚ್.ವಿಜಯಲಕ್ಷ್ಮಿ ಸಲ್ಲಿಸಿರುವ ರಿಟ್ ಅರ್ಜಿಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು.
ವಿಚಾರಣೆ ವೇಳೆ ಅರ್ಜಿದಾರರ ಪರ ಹೈಕೋರ್ಟ್ ವಕೀಲ ಪಿ.ಎನ್.ಮನಮೋಹನ್, ‘ಅರ್ಜಿದಾರರು ಯಾವುದೇ ತಪ್ಪು ಮಾಡಿಲ್ಲ. ಸಬ್ ರಿಜಿಸ್ಟ್ರಾರ್ ಕಚೇರಿ ಸಿಬ್ಬಂದಿಯ ಕರ್ತವ್ಯದ ಕುರಿತಾದ ಸುಪ್ರಿಂ ಕೋರ್ಟ್ ಆದೇಶಗಳಿಗೆ ಅನುಗುಣವಾಗಿ ಈ ಪ್ರಕರಣವನ್ನು ಮನ್ನಿಸಬೇಕು’ ಎಂದು ಕೋರಿದರು.
ಇದಕ್ಕೆ ರಾಜ್ಯ ಹೆಚ್ಚುವರಿ ಪ್ರಾಸಿಕ್ಯೂಟರ್ ಬಿ.ಎನ್.ಜಗದೀಶ್, ‘ಅರ್ಜಿದಾರರು ತನಿಖೆಗೆ ಸಹಕಾರ ನೀಡುತ್ತಿಲ್ಲ’ ಎಂದು ಆಕ್ಷೇಪ ವ್ಯಕ್ತಪಡಿಸಿದರು.
ಅರ್ಜಿದಾರರ ವಾದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ‘ಎಲ್ಲವನ್ನೂ ರಿಜಿಸ್ಟರ್ ಮಾಡಬೇಕೆಂಬ ಭರದಲ್ಲಿ ದಾಖಲೆಗಳನ್ನು ಮತ್ತು ವ್ಯಕ್ತಿಗಳನ್ನು ಸರಿಯಾಗಿ ಗುರುತಿಸದೇ ಹೋದರೆ ಅದಕ್ಕೆ ಕಚೇರಿಯೊಳಗಿನ ಸಿಬ್ಬಂದಿಯೇ ಹೊಣೆಯಲ್ಲವೇ’ ಎಂದು ಪ್ರಶ್ನಿಸಿತು. ಅಂತೆಯೇ, ಪ್ರಕರಣದ ತನಿಖೆಗೆ ತಡೆ ನೀಡಲು ಸ್ಪಷ್ಟವಾಗಿ ನಿರಾಕರಿಸಿತು.
ಕೋರಿಕೆ: ‘ಸ್ಥಿರಾಸ್ತಿ ಖರೀದಿಗೆ ಸಂಬಂಧಿಸಿದಂತೆ ಒಪ್ಪಂದದ ಸಮಯದಲ್ಲಿ ಲಗತ್ತಿಸಲಾದ ಹಳೆಯ ಫೋಟೊವನ್ನು ನೋಂದಣಿ ಸಮಯದಲ್ಲಿ ಕಟ್ ಅಂಡ್ ಪೇಸ್ಟ್ ಮಾಡಲಾಗಿದೆ ಎಂಬ ಆರೋಪದಡಿ 2025ರ ಡಿಸೆಂಬರ್ 4ರಂದು ದಾಖಲಾಗಿರುವ ಎಫ್ಐಆರ್ ಹಾಗೂ ಇದಕ್ಕೆ ಸಂಬಂಧಿಸಿದಂತೆ ಸಿಸಿಎಚ್–71ರಲ್ಲಿ ನಡೆಯುತ್ತಿರುವ ನ್ಯಾಯಿಕ ಪ್ರಕ್ರಿಯೆ ರದ್ದುಪಡಿಡಬೇಕು’ ಎಂದು ಅರ್ಜಿದಾರರು ಕೋರಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.