ಬೆಂಗಳೂರು: ‘ಗ್ರೇಟರ್ ಹೈದರಾಬಾದ್ ಮಹಾನಗರ ಪಾಲಿಕೆ (ಜಿಎಚ್ಎಂಸಿ)’ ಚುನಾವಣೆಯ ಬಿಜೆಪಿ ಸಹ ಪ್ರಭಾರಿಗಳನ್ನಾಗಿ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಹಾಗೂ ಬೊಮ್ಮನಹಳ್ಳಿ ಶಾಸಕ ಎಂ. ಸತೀಶ್ ರೆಡ್ಡಿ ಅವರನ್ನು ನೇಮಕ ಮಾಡಲಾಗಿದೆ.
ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಭೂಪೇಂದ್ರ ಯಾದವ್ ಅವರನ್ನು ಜಿಎಚ್ಎಂಸಿ ಚುನಾವಣಾ ಪ್ರಭಾರಿಯನ್ನಾಗಿ ನೇಮಿಸಲಾಗಿದೆ. ಸುಧಾಕರ್, ಸತೀಶ್ ರೆಡ್ಡಿ, ಮಹಾರಾಷ್ಟ್ರ ವಿಧಾನಸಭೆಯ ವಿರೋಧ ಪಕ್ಷದ ಮುಖ್ಯ ಸಚೇತಕ ಆಶೀಶ್ ಶೆಲರ್, ಗುಜರಾತ್ನ ಪ್ರದೀಪ್ ಸಿಂಗ್ ವಘೇಲಾ ಅವರನ್ನು ಸಹ ಪ್ರಭಾರಿಗಳನ್ನಾಗಿ ನೇಮಿಸಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಭಾನುವಾರ ಆದೇಶ ಹೊರಡಿಸಿದ್ದಾರೆ.
ಪಕ್ಷದೊಳಗೂ ಸ್ಥಾನ: ಬಿಜೆಪಿ ಸರ್ಕಾರ ರಚನೆಯನ್ನು ಬೆಂಬಲಿಸಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ, ಸದಸ್ಯತ್ವದಿಂದ ಅನರ್ಹಗೊಂಡಿದ್ದ 15 ಮಂದಿ 2019ರ ನವೆಂಬರ್ 14ರಂದು ಬಿಜೆಪಿ ಸೇರಿದ್ದರು. ಉಪ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದ ಸುಧಾಕರ್, 2020ರ ಫೆಬ್ರುವರಿಯಲ್ಲಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದರು. ವೈದ್ಯಕೀಯ ಶಿಕ್ಷಣ ಸಚಿವರಾಗಿದ್ದ ಅವರಿಗೆ ಕೆಲವು ದಿನಗಳ ಹಿಂದೆ ಆರೋಗ್ಯ ಖಾತೆಯನ್ನೂ ನೀಡಲಾಗಿದೆ.
ಬಿಜೆಪಿ ಸೇರಿ ವರ್ಷ ತುಂಬಿದ ಬೆನ್ನಲ್ಲೇ ಸುಧಾಕರ್ ಅವರಿಗೆ ಪಕ್ಷದ ಸಂಘಟನಾ ವಿಭಾಗದಲ್ಲೂ ಜವಾಬ್ದಾರಿ ನೀಡಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.