ಬೆಂಗಳೂರು: ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿನ ಸಕ್ಕರೆ ಕಾರ್ಖಾನೆಗಳಲ್ಲಿ ಅಕ್ಟೋಬರ್ 20ರಿಂದಲೇ ಕಬ್ಬು ನುರಿಯಲು ಅನುಮತಿ ನೀಡಲಾಗಿದೆ ಎಂದು ಸಕ್ಕರೆ ಸಚಿವ ಶಿವಾನಂದ ಪಾಟೀಲ ತಿಳಿಸಿದ್ದಾರೆ.
ಮಂಡ್ಯ, ಮೈಸೂರು, ಹಾಸನ, ಚಾಮರಾಜನಗರ ಜಿಲ್ಲೆಗಳಲ್ಲಿ ಜೂನ್ 22ರಿಂದ ಕಬ್ಬು ನುರಿಯಲು ಆರಂಭಿಸಲಾಗಿದೆ. ದಾವಣಗೆರೆ, ಬೆಳಗಾವಿ, ವಿಜಯಪುರ, ಬೀದರ್, ಕಲಬುರಗಿ, ಬಾಗಲಕೋಟೆ, ಗದಗ, ಯಾದಗಿರಿ, ದಾವಣಗೆರೆ, ಉತ್ತರ ಕನ್ನಡ, ಬಳ್ಳಾರಿ, ವಿಜಯನಗರ ಮತ್ತು ಹಾವೇರಿಯಲ್ಲಿ ನವೆಂಬರ್ 1ರಿಂದ ಕಬ್ಬು ನುರಿಯಲು ಅನುಮತಿ ನೀಡಲಾಗಿತ್ತು ಎಂದು ಅವರು ಪ್ರಕಟಣೆಯಲ್ಲಿ ವಿವರಿಸಿದ್ದಾರೆ.
‘ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಈಗಾಗಲೇ ಕಬ್ಬು ಕಟಾವಿಗೆ ಬಂದಿದೆ. ನವೆಂಬರ್ 1ರವರೆಗೆ ಕಾದರೆ, ಸಕ್ಕರೆ ಇಳುವರಿ ಪ್ರಮಾಣ ಕಡಿಮೆಯಾಗಲಿದೆ. ಇದರಿಂದ ರೈತರಿಗೆ ಸಮಸ್ಯೆಯಾಗಲಿದ್ದು, ಕಾರ್ಖಾನೆಗಳಿಗೂ ನಷ್ಟವಾಗಲಿದೆ. ಇದನ್ನು ತಪ್ಪಿಸುವ ಉದ್ದೇಶದಿಂದ, ತಕ್ಷಣದಿಂದಲೇ ಕಬ್ಬು ಅರೆಯಲು ಅನುಮತಿ ನೀಡಬೇಕು ಎಂದು ಕಾರ್ಖಾನೆ ಆಡಳಿತ ಮಂಡಳಿಗಳು ಮುಖ್ಯಮಂತ್ರಿ ಅವರನ್ನು ಕೋರಿದ್ದವು. ಈ ಎಲ್ಲ ಅಂಶಗಳನ್ನು ಪರಿಗಣಿಸಿ, ತಕ್ಷಣದಿಂದಲೇ ಕಬ್ಬು ಅರೆಯಲು ಕ್ರಮ ತೆಗೆದುಕೊಳ್ಳಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚಿಸಿದ್ದರು. ಅದರಂತೆ ಅನುಮತಿ ನೀಡಿದ್ದೇವೆ’ ಎಂದಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.