ಕಬ್ಬು ಕಟಾವು (ಸಾಂದರ್ಭಿಕ ಚಿತ್ರ)
– ಪ್ರಜಾವಾಣಿ ಚಿತ್ರ
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಕ್ಕರೆ ಕಾರ್ಖಾನೆ ಮಾಲೀಕರು ಮತ್ತು ರೈತ ಮುಖಂಡರ ಸಭೆಯಲ್ಲಿ ಪ್ರತಿ ಟನ್ ಕಬ್ಬಿಗೆ ನಿಗದಿ ಮಾಡಿದ್ದ ಪರಿಷ್ಕೃತ ದರಕ್ಕೆ ಸಂಬಂಧಿಸಿ, ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ (ಸಕ್ಕರೆ) ಶನಿವಾರ ಆದೇಶ ಹೊರಡಿಸಿದೆ.
ಪರಿಷ್ಕೃತ ದರ 2025–26ನೇ ಸಾಲಿನ ಹಂಗಾಮಿಗೆ ಅನ್ವಯವಾಗಲಿದೆ. ರಾಜ್ಯದ ಸಕ್ಕರೆ ಕಾರ್ಖಾನೆಗಳು ಕಬ್ಬು ಸರಬರಾಜು ಮಾಡಿದ ರೈತರಿಗೆ ಈ ಮೊತ್ತ ಪಾವತಿಸಬೇಕಿದೆ. ಕಾರ್ಖಾನೆಗಳು ಮೊದಲ ಕಂತಿನಲ್ಲಿ ಶೇ 10.25 ಸಕ್ಕರೆ ಇಳುವರಿ ಪ್ರಮಾಣ ಇರುವ ಪ್ರತಿ ಟನ್ ಕಬ್ಬಿಗೆ 3,100, ಶೇ 11.25 ಇಳುವರಿ ಇರುವ ಕಬ್ಬಿಗೆ 3,200 ಪಾವತಿಸುತ್ತವೆ. ಕಾರ್ಖಾನೆಗಳು ಪಾವತಿಸಬೇಕಾದ ಕನಿಷ್ಠ ಹೆಚ್ಚುವರಿ ದರ ಪ್ರತಿ ಟನ್ಗೆ ₹50 ಹಾಗೂ ರಾಜ್ಯ ಸರ್ಕಾರ ಒಂದು ಬಾರಿಗೆ ನೀಡುತ್ತಿರುವ ಆರ್ಥಿಕ ನೆರವು ₹50 ಎರಡನೇ ಕಂತಿನಲ್ಲಿ ಪಾವತಿಸಲಾಗುತ್ತದೆ.
ಶೇ 10.25–ಶೇ 9.5ರ ನಡುವಿನ ಇಳುವರಿ ಪ್ರಮಾಣದ ನಡುವೆ ಪ್ರತಿ 0.1 ಕಡಿಮೆ ಇಳುವರಿಗೆ ಅನುಪಾತಕ್ಕೆ ಅನುಗುಣವಾಗಿ ಪ್ರತಿ ಕ್ವಿಂಟಲ್ಗೆ ₹ 3.46 ಮೊತ್ತವನ್ನು ಪರಿಗಣಿಸಬೇಕು ಎಂದು ಕಬ್ಬು ಅಭಿವೃದ್ಧಿ ಆಯುಕ್ತ ಹಾಗೂ ಸಕ್ಕರೆ ನಿರ್ದೇಶಕರು ಸೂಚಿಸಿದ್ದಾರೆ.
ಕೇಂದ್ರ ಸರ್ಕಾರ ಸಾಗಣೆ ವೆಚ್ಚ ಸೇರಿ ಶೇ 9.5 ಇಳುವರಿ ಇರುವ ಪ್ರತಿ ಟನ್ ಕಬ್ಬಿಗೆ ₹3,290.50, ಶೇ 10.25 ಇಳುವರಿಗೆ ₹3,550 ಹಾಗೂ ಶೇ 11.25 ಇಳುವರಿಗೆ ₹3,896 ನ್ಯಾಯಯುತ ಮತ್ತು ಲಾಭದಾಯಕ ದರವನ್ನು (ಎಫ್ಆರ್ಪಿ) ನಿಗದಿ ಮಾಡಿತ್ತು. ನಂತರ ಕಬ್ಬು ನಿಯಂತ್ರಣ ಮಂಡಳಿ ಸಭೆಯಲ್ಲಿ ಕಬ್ಬು ಕಟಾವು, ಸಾಗಣೆ ವೆಚ್ಚ ಕುರಿತು ಮಾರ್ಗಸೂಚಿ ಹೊರಡಿಸಿತ್ತು.
ಕೇಂದ್ರ ಸರ್ಕಾರ ಹೊರಡಿಸಿದ ಎಫ್ಆರ್ಪಿ, ಮಾರ್ಗಸೂಚಿ ನ್ಯಾಯಯುತವಾಗಿಲ್ಲ. ರೈತರು ಬೆಳೆದ ಕಬ್ಬಿಗೆ ನ್ಯಾಯಸಮ್ಮತ ಬೆಲೆ ಸಿಗುತ್ತಿಲ್ಲ. ಉತ್ಪಾದನಾ ವೆಚ್ಚವನ್ನು ಗಣನೆಗೆ ತೆಗೆದುಕೊಳ್ಳದೆ ದರ ನಿಗದಿ ಮಾಡಲಾಗಿದೆ. ಇಳುವರಿ ನಿಗದಿಯೂ ಪಾರದರ್ಶಕವಾಗಲಿಲ್ಲ. ಹೆಚ್ಚಿನ ದರ ನಿಗದಿ ಮಾಡಬೇಕು ಎಂದು ಒತ್ತಾಯಿಸಿ ಬೆಳಗಾವಿ ಸೇರಿದಂತೆ ವಿವಿಧ ಜಿಲ್ಲೆಗಳ ಕಬ್ಬು ಬೆಳೆಗಾರರು ಪ್ರತಿಭಟನೆ ನಡೆಸಿದ್ದರು. ಈ ಬಗ್ಗೆ ವಿಧಾನಸೌಧದಲ್ಲಿ ಸಭೆ ನಡೆಸಿದ ಮುಖ್ಯಮಂತ್ರಿ ಪರಿಷ್ಕೃತ ದರ ಘೋಷಣೆ ಮಾಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.