ಬೆಂಗಳೂರು: ಹಿಂದುತ್ವವಾದಿ ಕಾರ್ಯಕರ್ತ ಸುಹಾಸ್ ಶೆಟ್ಟಿ ಬರ್ಬರ ಹತ್ಯೆ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಕೇಂದ್ರ ಕಾರ್ಮಿಕ ಇಲಾಖೆಯ ರಾಜ್ಯ ಖಾತೆ ಸಚಿವೆ ಶೋಭಾ ಕರಂದ್ಲಾಜೆ, ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆಗೆ (ಎನ್ಐಎ) ವರ್ಗಾಯಿಸಬೇಕೆಂದು ಕೋರಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಶುಕ್ರವಾರ ಮನವಿ ಮಾಡಿದ್ದಾರೆ.
ಶೆಟ್ಟಿ ಅವರನ್ನು ಬಜಪೆ ಸಮೀಪದ ಕಿನ್ನಿಪಡವು ಗ್ರಾಮದಲ್ಲಿ ಮೇ 1ರಂದು ಹತ್ಯೆ ಮಾಡಲಾಗಿದೆ.
ಈ ಕುರಿತು ಪತ್ರ ಬರೆದಿರುವ ಅವರು, ಇದೊಂದೇ ಪ್ರಕರಣವಲ್ಲ. ಕೋಮು ಸಂಘರ್ಷವನ್ನು ಸೃಷ್ಟಿಸಲು ಬಯಸುತ್ತಿರುವ ದೇಶವಿರೋಧಿ ಶಕ್ಷಿಗಳ ಬೆಂಬಲದೊಂದಿಗೆ ಹಿಂದೂಗಳ ಮೇಲಿನ ಹಲ್ಲೆ ಪ್ರಕರಣಗಳು ನಿರಂತರವಾಗಿ ನಡೆಯುತ್ತಿವೆ. ಆ ಮೂಲಕ ಹಿಂದೂ ಪರ ಧ್ವನಿಯನ್ನು ಹತ್ತಿಕ್ಕುವ ಪ್ರಯತ್ನಗಳು ನಡೆಯುತ್ತಿವೆ ಎಂದು ಉಲ್ಲೇಖಿಸಿದ್ದಾರೆ.
ಸದ್ಯ ಕರ್ನಾಟಕದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ರಾಜ್ಯ ಸರ್ಕಾರದ ನಿಷ್ಕ್ರಿಯತೆ ಹಾಗೂ ಓಲೈಕೆ ರಾಜಕಾರಣವು ಸಮಾಜ ವಿರೋಧಿ ಶಕ್ಷಿಗಳಿಗೆ ಉತ್ತೇಜನ ನೀಡುತ್ತಿದೆ. ಹುಬ್ಬಳ್ಳಿ ಪೊಲೀಸ್ ಠಾಣೆ ಮೇಲೆ ದಾಳಿ ನಡೆಸಿದವರ ವಿರುದ್ಧದ ಪ್ರಕರಣಗಳನ್ನು ಇತ್ತೀಚೆಗೆ ಹಿಂಪಡೆದದ್ದು ಮತ್ತು ಮೈಸೂರಿನ ಉದಯಗಿರಿಯಲ್ಲಿ ಪೊಲೀಸ್ ಠಾಣೆ ಮೇಲೆ ನಡೆದ ದಾಳಿ ಪ್ರಕರಣಗಳು ಅದಕ್ಕೆ ಉದಾಹರಣೆಯಾಗಿವೆ. ಈ ರೀತಿಯ ಮೃದು ಧೋರಣೆಗಳು ಕಾನೂನು ಉಲ್ಲಂಘಿಸುವವರನ್ನು ಮೌನವಾಗಿ ಬೆಂಬಲಿಸುವ ಸಂದೇಶ ರವಾನಿಸುತ್ತವೆ. ಇದರಿಂದಾಗಿಯೇ, ಪದೇಪದೆ ಗಲಭೆ ಮತ್ತು ದಾಳಿ ಪ್ರಕರಣಗಳು ವರದಿಯಾಗುತ್ತಿವೆ ಎಂದು ಆರೋಪಿಸಿದ್ದಾರೆ.
ಮುಂದುವರಿದು, ಸುಹಾಸ್ ಶೆಟ್ಟಿ ಅವರ ಹತ್ಯೆ ಪ್ರಕರಣವನ್ನು ಎನ್ಐಎಗೆ ವರ್ಗಾಯಿಸಬೇಕು ಎಂದು ಕೋರುತ್ತೇನೆ. ಆಗಷ್ಟೇ ಶೆಟ್ಟಿ ಅವರ ಕುಟುಂಬಕ್ಕೆ ನ್ಯಾಯ ಒದಗಿಸಲು ಸಾಧ್ಯ ಎಂದು ಒತ್ತಾಯಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.