ಬೆಂಗಳೂರು: ಕಲಾವಿದರಿಗೆ ಮಾಸಾಶನದ ಮೊತ್ತವನ್ನು ಹೆಚ್ಚಿಸುವಉದ್ದೇಶವಿದ್ದು, ಈ ಬಗ್ಗೆ ಮುಖ್ಯಮಂತ್ರಿಯವರ ಜತೆಗೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ.ಸುನೀಲ್ ಕುಮಾರ್ ತಿಳಿಸಿದರು.
ವಿಧಾನಸಭೆಯಲ್ಲಿ ಗುರುವಾರ ಪ್ರಶ್ನೋತ್ತರ ಅವಧಿಯಲ್ಲಿ ಜೆಡಿಎಸ್ನ ಬಂಡೆಪ್ಪ ಕಾಶೆಂಪೂರ ಅವರ ಪ್ರಶ್ನೆಗೆ ಉತ್ತರಿಸಿ, ರಾಜ್ಯದಲ್ಲಿ 11 ಸಾವಿರ ಕಲಾವಿದರಿಗೆ ಪ್ರತಿ ತಿಂಗಳು ತಲಾ ₹2,000 ಮಾಸಾಶನ ನೀಡಲಾಗುತ್ತಿದೆ. ಇದರ ಮೊತ್ತವನ್ನು ಹೆಚ್ಚಿಸಬೇಕು ಎಂಬ ಉದ್ದೇಶವಿದೆ. ಇದಕ್ಕೆ ಅನುದಾನದ ಲಭ್ಯತೆಯನ್ನೂ ನೋಡಿಕೊಳ್ಳಬೇಕಾಗಿದೆ ಎಂದು ಹೇಳಿದರು.
ರಾಜ್ಯದಲ್ಲಿ ವಿವಿಧ ಸಾಂಸ್ಕೃತಿಕ ಸಂಘಟನೆಗಳಿಗಾಗಿ ಅನುದಾನ ನೀಡಲು ವಾರ್ಷಿಕ ₹ 6 ಕೋಟಿ ನಿಗದಿ ಆಗಿದೆ. ಅದರ ಪ್ರಮಾಣ ಹೆಚ್ಚಿಸಬೇಕಾಗಿದೆ. ಅಲ್ಲದೆ, ರಂಗ ಶಿಕ್ಷಕರ ನೇಮಕಾತಿಗಾಗಿ ಶಿಕ್ಷಣ ಇಲಾಖೆಯ ಜತೆಗೆ ಮಾತುಕತೆ ನಡೆಸಲಾಗುವುದು ಎಂದೂ ಸುನೀಲ್ ಭರವಸೆ ನೀಡಿದರು.
ಇದಕ್ಕೆ ಧ್ವನಿಗೂಡಿಸಿದ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ಸಾಹಿತಿಗಳು ಮತ್ತು ಕಲಾವಿದರು ಈ ನಾಡಿನ ಸಾಹಿತ್ಯಕ ಮತ್ತು ಸಾಂಸ್ಕೃತಿಕ ಶ್ರೀಮಂತಿಕೆಯನ್ನು ಹೆಚ್ಚಿಸಿದವರು. ಕಲಾವಿದರು ಈಗ ಸಂಕಷ್ಟದಲ್ಲಿದ್ದಾರೆ. ಅವರ ನೆರವಿಗಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ಹೆಚ್ಚಿನ ಅನುದಾನ ಪಡೆಯಬೇಕು ಎಂದು ಸಲಹೆ ನೀಡಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.